ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.
ನಾನು ಬೆಂಗಳೂರಿಗೆ ತೆರಳುತ್ತಿದ್ದೇನೆ. ಅಲ್ಲಿ ಕಾರಾಗೃಹದಲ್ಲಿನ ಅಕ್ರಮಗಳ ಕುರಿತು ಉನ್ನತಾಧಿಕಾರಿಗಳಿಂದ ವಿವರಣೆ ಪಡೆಯಲಾಗುವುದು. ಅನಂತರದಲ್ಲಿ ಯಾವ ಮಟ್ಟದ ತನಿಖೆ ನಡೆಸಬೇಕೆಂಬುವುದನ್ನು ನಿರ್ಧರಿಸಲಾಗುತ್ತದೆ. ಕಾರಾಗೃಹದಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.
ಸಂಪುಟ ಪುನಾರಚನೆ ಸಿಎಂಗೆ ಬಿಟ್ಟ ವಿಚಾರ. ಅತೃಪ್ತಿ ಯಾರಲ್ಲೂ ಇಲ್ಲ. ಹಿರಿಯ ಶಾಸಕರು ಒಂದೆಡೆ ಸೇರಿ ಮಾತುಕತೆ ನಡೆಸುವುದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ. ನಾವೆಲ್ಲಾ ಹಲವು ಬಾರಿ ಸೇರಿ ಮಾತನಾಡಿದ್ದೇವೆ. ಚಿಕ್ಕಮಗಳೂರು ಜಿಲ್ಲೆ ಉಸ್ತುವಾರಿಯಲ್ಲಿ ಆಸಕ್ತಿಯಿತ್ತು. ಆದರೆ ಮುಖ್ಯಮಂತ್ರಿ ಅವರು ನನ್ನ ಮೇಲೆ ಹೆಚ್ಚಿನ ವಿಶ್ವಾಸವಿಟ್ಟು ತುಮಕೂರು ಜಿಲ್ಲೆಯ ಉಸ್ತುವಾರಿ ವಹಿಸಿದ್ದಾರೆ. ಬಯಲುಸೀಮೆ ಜಿಲ್ಲೆಯಲ್ಲಿ ಕೆಲಸ ಮಾಡಲು ತೊಂದರೆ ಇಲ್ಲ ಎಂದು ಆರಗ ಜ್ಞಾನೇಂದ್ರ ಅವರು ಮಾಧ್ಯಮ ಮಿತ್ರರಿಗೆ ತಿಳಿಸಿದ್ದಾರೆ.