ರಾಜ್ಯದ ನವೀಕರಿಸಬಹುದಾದ ಇಂಧನ ನೀತಿ 2022-27ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಜರಗಿದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ಅನುಮೋದನೆ ನೀಡಲಾಗಿದ್ದು, ರಾಜ್ಯದಲ್ಲಿ 2009ರಿಂದ ನವೀಕರಿಸಬಹುದಾದ ಇಂಧನ ನೀತಿಯನ್ನು ಜಾರಿಗೊಳಿಸಲಾಗಿದೆ.
ವಿಶೇಷವೆಂದರೆ, ದಕ್ಷಿಣ ಭಾರತದಲ್ಲಿ ಈ ನೀತಿ ಜಾರಿ ಮಾಡಿದ ಮೊದಲ ರಾಜ್ಯವಾಗಿದೆ.
ರಾಜ್ಯ ಸರಕಾರ 2014ರಿಂದ 21ರ ವರೆಗೆ ಪ್ರತ್ಯೇಕ ಸೌರ ನೀತಿಯನ್ನು ಜಾರಿಗೊಳಿಸಿ 6 ಸಾವಿರ ಮೆ.ವ್ಯಾ.ವಿದ್ಯುತ್ ಉತ್ಪಾದಿಸುವ ಗುರಿ ಹೊಂದ ಲಾಗಿತ್ತು.
ಡಿಸೆಂಬರ್ 2021ರ ಹೊತ್ತಿಗೆ 7,523 ಮೆ. ವ್ಯಾ. ಸೌರ ವಿದ್ಯುತ್ ಉತ್ಪಾದಿಸಿ ಗುರಿ ಮೀರಿ ಸಾಧನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಸಾಮರ್ಥ್ಯ ಹೆಚ್ಚಳ ಮಾಡುವ ಉದ್ದೇಶದಿಂದ 2022-27ಕ್ಕೆ ಹೊಸ ನೀತಿ ರೂಪಿಸಲಾಗಿದೆ.
ಸೌರ ಮತ್ತು ಪವನ ವಿದ್ಯುತ್ ಅತ್ಯಂತ ಕಡಿಮೆ ದರದಲ್ಲಿ ಉತ್ಪಾದನೆಯಾಗುತ್ತಿದೆ. ಹೀಗಾಗಿ ಸಾಂಪ್ರದಾಯಿಕ ವಿದ್ಯುತ್ ಉತ್ಪಾದನ ಸಾಮರ್ಥ್ಯವನ್ನು ಹಂತ ಹಂತವಾಗಿ ನವೀಕರಿಸಬಹುದಾದ ವಿದ್ಯುತ್ ಉತ್ಪಾದನ ಸಾಮರ್ಥ್ಯದೊಂದಿಗೆ ಬದಲಾಯಿಸಲು ಪ್ರಯತ್ನ ನಡೆಸಲು ಸರಕಾರ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.