ಸರ್ಕಾರ ಮತ್ತು ಜನ ಸಾಮಾನ್ಯರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಸದಾ ಬದ್ದವಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹೇಳಿದರು.
ಶಿವಮೊಗ್ಗ ಜಿಲ್ಲಾಡಳಿತ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ಯೂನ್ನಿಂದ ಹಿಡಿದು ಅಧಿಕಾರಿವರೆಗೆ ತಮ್ಮ ಅಧಿಕಾರವನ್ನು ಜನಪರವಾಗಿ ಬಳಸಬೇಕು. ಕಾನೂನು ಬದ್ದವಾಗಿ ಕೆಲಸ ಮಾಡಬೇಕು. ವಿವೇಚನೆ ಬಳಸುವ ಸಂದರ್ಭದಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿ ಪರವಾಗಿ ಚಿಂತಿಸಿ ನಿರ್ಣಯ ಕೈಗೊಳ್ಳಬೇಕು. ಶ್ರೀಮಂತನ ಪರವಾಗಿ ಅಲ್ಲ. ಬಡವರು, ಜನ ಸಾಮಾನ್ಯರ ಪರವಾದ ನಿರ್ಣಯ ಕೈಗೊಳ್ಳಬೇಕು ಎಂದರು.
ದೇಶದಲ್ಲೇ ನಮ್ಮ ರಾಜ್ಯ ಸರ್ಕಾರಿ ನೌಕರರು ದಕ್ಷ ಅಧಿಕಾರಿಗಳೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು ಇದಕ್ಕೆ ಹಲವಾರು ದಶಕಗಳಿಂದ ಸೇವೆ ಸಲ್ಲಿಸಿದ ಹಿರಿಯ ಸರ್ಕಾರಿ ಅಧಿಕಾರಿ/ನೌಕರರ ಶ್ರಮವೂ ಕಾರಣವಾಗಿದೆ. ಅವರನ್ನು ಈ ಸಮಯದಲ್ಲಿ ಸ್ಮರಿಸುತ್ತಾ ಅಭಿನಂದಿಸುತ್ತೇನೆ. ಈ ಪರಂಪರೆ ಹೀಗೇ ಮುಂದುವರೆಸುವ ಕರ್ತವ್ಯ ಮತ್ತು ನೈತಿಕ ಜವಾಬ್ದಾರಿ ನಿಮ್ಮ ಮೇಲಿದೆ. ನಮ್ಮ ಜವಾಬ್ದಾರಿಯನ್ನು ಸ್ಪಷ್ಟವಾಗಿ ತಿಳಿದುಕೊಂಡಲ್ಲಿ ನಮ್ಮ ಕರ್ತವ್ಯಕ್ಕೆ ನ್ಯಾಯ ಒದಗಿಸಬಹುದಾದ್ದರಿಂದ ಆಡಳಿತ ಯಂತ್ರದ ಬಗ್ಗೆ ಸ್ಪಷ್ಟತೆ ಇರಬೇಕು ಎಂದರು.
ಗ್ರಾ.ಪಂ ಯಿಂದ ಹಿಡಿದು ವಿಧಾನಸೌಧದ ವರೆಗೆ ಈ ತಂತ್ರಜ್ಞಾನ ಬಳಕೆಯ ವ್ಯವಸ್ಥೆ ಬಂದಿದೆ. ನೀವು ನಿಗದಿತ ಅವಧಿಯಲ್ಲಿ ಕೈಗೊಳ್ಳುವ ನಿರ್ಧಾರ ನಿಮ್ಮ ಜನಪರ ಕಳಕಳಿಯನ್ನು ತೋರುತ್ತದೆ. ಜನರ ಓಡಾಟ ತಪ್ಪಿಸುತ್ತದೆ, ಭ್ರಷ್ಟರನ್ನಾಗುವುದನ್ನು ತಪ್ಪಿಸುತ್ತದೆ, ಆರೋಪವನ್ನು ತಪ್ಪಿಸುತ್ತದೆ ಎಂದರು.
ಆಳುವುದೇ ಬೇರೆ ಮತ್ತು ಆಡಳಿತ ಮಾಡುವುದೇ ಬೇರೆ. ಆದ್ದರಿಂದ ನಾವು ಈ ಎರಡರ ನಡುವಿನ ವ್ಯತ್ಯಾಸ ಸ್ಪಷ್ಟಪಡಿಸಿಕೊಳ್ಳಬೇಕು. ನಮ್ಮ ಪಾತ್ರವನ್ನು ನಿಷ್ಟೆಯಿಂದ ನಿರ್ವಹಿಸಿದಲ್ಲಿ ನಾವು ಇಡೀ ರಾಜ್ಯದ ಜನತೆಗೆ ಅಭಿವೃದ್ದಿಯ ಫಲ ನೀಡಲು ಸಾಧ್ಯ ಎಂದು ತಿಳಿಸಿದರು.
ಆಡಳಿತ ಸುಧಾರಣೆ 2ನೇ ಆಯೋಗದಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ತೆಗುಕೊಂಡಿದ್ದೇವೆ. ಬದಲಾಗುತ್ತಿರುವ ಜಾಗತಿಕ ವಿದ್ಯಮಾನಗಳು ಸರ್ಕಾರದ ಆಡಳಿತ ಯಂತ್ರದ ಮೇಲೆ ಪರಿಣಾಮ ಬೀರುತ್ತಿದೆ. ಆದ್ದರಿಂದ ನಾವು ಸರ್ಕಾರಿ, ಖಾಸಗಿ ಎಲ್ಲರ ಸಹಭಾಗಿತ್ವದಲ್ಲಿ ಕೆಲಸ ಮಾಡಬೇಕಿದೆ. ಈಗ ನಮ್ಮ ಚಿಂತನೆ, ಕಾರ್ಯವೈಖರಿಗಳು ಬದಲಾಗಬೇಕು ಎಂದು ತಿಳಿಸಿದರು.
ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥೆಯನ್ನು ಅಲ್ಲೋಲ ಕಲ್ಲೋಲ ಮಾಡುತ್ತಿರುತ್ತವೆ. ಅದಕ್ಕೆ ನಾವು ನಮ್ಮ ಸಾಮಾಜಿಕ, ಜನಪರ ಕೆಲಸ, ಕಾರ್ಯಕ್ಷಮತೆಯ ಮೂಲಕ ಉತ್ತರ ನೀಡಬೇಕು. ಅದನ್ನು ನಾನು ನಿಮ್ಮಿಂದ ಬಯಸುತ್ತಿದ್ದೇನೆ. ಬನ್ನಿ ಬದಲಾವಣೆ ಮಾಡೋಣ. ಆಡಳಿತ ಯಂತ್ರದಲ್ಲಿ ಬದಲಾವಣೆ ಮಾಡೋಣ, ಆಳುವ ರೀತಿಯನ್ನು ಬದಲಾಯಿಸೋಣ, ಜನಸಾಮಾನ್ಯರ ಬಳಿಗೆ ವ್ಯವಸ್ಥೆಯನ್ನು ಕೊಂಡೊಯ್ಯೋಣ. ಬಡವರು, ರೈತರು, ದೀನ ದಲಿತರು ಸೇರಿದಂತೆ ಎಲ್ಲರ ಅಭಿವೃದ್ದಿಗಾಗಿ ಸ್ಥಿತಪ್ರಜ್ಞ ಮತ್ತು ಸಮಯಪ್ರಜ್ಞೆಯಿಂದ ಕೆಲಸ ಮಾಡೋಣವೆಂದು ಕರೆ ನೀಡಿದರು.
ಪ್ರಸ್ತುತ ರಾಜ್ಯದಲ್ಲಿ 2 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇದ್ದರೂ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡು ಅಧಿಕಾರಿ/ನೌಕರರು ಉತ್ತಮವಾಗಿ ಕೆಲಸ ಮಾಡುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಸರ್ಕಾರಿ ನೌಕರರಿಗೆ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಪರಿಶ್ರಮವೂ ಕಾರಣವಾಗಿದೆ ಎಂದು ಶ್ಲಾಘಿಸಿದ ಅವರು, ಷಡಾಕ್ಷರಿ ಅವರ ಹಿಂದಿನ ಧೀಶಕ್ತಿ ಯಡಿಯೂರಪ್ಪನವರು ಎಂದು ಹೇಳಿದರು.
ಸಂಸದರಾದ ಬಿ.ವೈ.ರಾಘವೇಂದ್ರ ಮಾತನಾಡಿ, ನಮ್ಮ ರಾಜ್ಯ ಘನ ಸರ್ಕಾರವು ಸರ್ಕಾರಿ ನೌಕರರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವಂತಹ ವೇತನ ಮತ್ತು ಸೌಲಭ್ಯಗಳನ್ನು ನೀಡಿದೆ. ಕಾನೂನು ರೂಪಿಸುವವರು ನಾವಾದರೂ ಅದನ್ನು ಜಾರಿಗೆ ತರುವ ಜವಾಬ್ದಾರಿ ನಿಮ್ಮ ಮೇಲಿದೆ. ಸಾಕಷ್ಟು ಅಭಿವೃದ್ದಿ ಕಾರ್ಯಗಳಾದ ಬಗ್ಗೆ ಹೆಮ್ಮ, ಗೌರವ ಸಲ್ಲುತ್ತಿರುವುದು ಕೂಡ ನಿಮ್ಮ ಪರಿಶ್ರಮದಿಂದ ಎಂದ ಹೇಳಬಯಸುತ್ತೇನೆ ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಷಡಾಕ್ಷರಿ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದಲ್ಲಿ 6 ಲಕ್ಷ ಸರ್ಕಾರಿ ನೌಕರರಿದ್ದು, ದೇಶದಲ್ಲೇ ಪ್ರಥಮವಾಗಿ ರಾಜ್ಯದಲ್ಲಿ ಸರ್ಕಾರಿ ನೌಕರರ ದಿನಾಚರಣೆ ಘೋಷಿಸಿರುವ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿರವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದ 31 ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಸರ್ಕಾರಿ ನೌಕರರ ದಿನಾಚರಣೆ ಮತ್ತು ಸರ್ವೋತ್ತಮ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಸರ್ಕಾರದ ಕೆಲಸ ದೇವರ ಕೆಲಸವಾಗಿದ್ದು ಎಲ್ಲರೂ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕೂಡ ನ್ಯಾಯ ಒದಗಿಸಬೇಕು. ನಾವೆಲ್ಲ ಸೇರಿ ಸರ್ವಾಂಗೀಣ ಅಭಿವೃದ್ದಿ ಮಾಡೋಣ ಎಂದರು.
ಸರ್ಕಾರಿ ನೌಕರರು ಅನೇಕ ಒತ್ತಡಗಳು, ಸಮಸ್ಯೆಗಳು ಮತ್ತು ಸವಾಲುಗಳ ನಡುವೆಯೂ ತಮ್ಮ ಜವಾಬ್ದಾರಿಯನ್ನು ದಕ್ಷತೆಯಿಂದ ನಿರ್ವಹಿಸುತ್ತಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ನಮ್ಮ ಮನವಿಗಳಿಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಕೇಂದ್ರಕ್ಕೆ ಸಮಾನ ವೇತನ ನೀಡಲು ವೇತನ ಆಯೋಗ ರಚನೆ ಸೇರಿದಂತೆ ನೌಕರರ ಹಿತರಕ್ಷಕರಾಗಿರುವ ಅವರಿಗೆ ಎಲ್ಲ ನೌಕರರ ಪರವಾಗಿ ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.