ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರದ ಸಾಲ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಪ್ರತಿಯೊಬ್ಬ ರೈತರಿಗೂ ಕಿಸಾನ್ ಕ್ರೆಡಿಟ್ ಕಾರ್ಡ್ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಸೆಲ್ವಕುಮಾರ್ ಅವರು ಹೇಳಿದ್ದಾರೆ.
ಸೆಲ್ವಕುಮಾರ್ ಅವರುನಿನ್ನೆ (ಶುಕ್ರವಾರ) ಜಿಲ್ಲಾ ಪಂಚಾಯತ್ ಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ್ದಾರೆ.
ಪಿಎಂ ಕಿಸಾನ್ ಯೋಜನೆಯಡಿ ಜಿಲ್ಲೆಯಲ್ಲಿ 1.70ಲಕ್ಷ ಖಾತೆಗಳನ್ನು ತೆರೆಯಲಾಗಿದೆ. ಇದರ ಪೈಕಿ 1.53ಲಕ್ಷ ಅರ್ಹ ಖಾತೆಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ ತಲಾ 10ಸಾವಿರ ರೂ. ಸಹಾಯಧನ ಒದಗಿಸುತ್ತಿದೆ. ಆದರೆ, ಜಿಲ್ಲೆಯಲ್ಲಿ ಕೇವಲ 1.41ಲಕ್ಷ ರೈತರು ಮಾತ್ರ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದೆ. ಸಾಲ ಪಡೆಯಲು ಅರ್ಹ ರೈತರ ಸಂಖ್ಯೆ ಹೆಚ್ಚಿರುವುದು ಸ್ಪಷ್ಟವಾಗಿದೆ. ಹಾಲು ಉತ್ಪಾದಕರು, ಮೀನುಗಾರರು ಸೇರಿದಂತೆ ಎಲ್ಲಾ ರೈತರಿಗೂ ಸಾಲ ಸೌಲಭ್ಯ ಒದಗಿಸಲು ಅನುಕೂಲವಾಗುವಂತೆ ಪ್ರತಿಯೊಬ್ಬ ಅರ್ಹರಿಗೂ ಕಿಸಾನ್ ಕ್ರೆಡಿಟ್ ಕಾರ್ಡ್ ಒದಗಿಸಬೇಕು. ಇದಕ್ಕಾಗಿ ಅಭಿಯಾನದ ರೀತಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಅವರು ಸೂಚನೆ ನೀಡಿದ್ದಾರೆ.
ಖಾರೀಫ್ ಬಿತ್ತನೆಗೆ ಅಗತ್ಯ ಬೀಜ ಹಾಗೂ ರಸಗೊಬ್ಬರ ಪೂರೈಕೆಗೆ ಈಗಲೇ ಸಿದ್ಧತೆಯನ್ನು ಆರಂಭಿಸಬೇಕು. ಕಳೆದ ಒಂದು ವಾರದಲ್ಲಿ ಆಗುತ್ತಿರುವ ಗಾಳಿ ಮಳೆಯಿಂದ ಕೆಲವು ಭಾಗಗಳಲ್ಲಿ ಅಡಿಕೆ ಹಾಗೂ ಬಾಳೆ ತೋಟಗಳಿಗೆ ಉಂಟಾಗಿರುವ ಹಾನಿಯ ಬಗ್ಗೆ ಸಮೀಕ್ಷೆ ನಡೆಸಿ ವರದಿಯನ್ನು ಸಲ್ಲಿಸಬೇಕು ಎಂದು ಸೆಲ್ವಕುಮಾರ್ ಅವರು ಹೇಳಿದ್ದಾರೆ.
ಗಂಗಾಕಲ್ಯಾಣ ಯೋಜನೆಯಡಿ ವಿವಿಧ ಅಭಿವೃದ್ಧಿ ನಿಗಮಗಳು ಕೈಗೊಂಡಿರುವ ಕಾಮಗಾರಿಗಳಿಗೆ ಆದಷ್ಟು ಬೇಗನೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸುವ ಒಟ್ಟು 151 ಅರ್ಜಿಗಳು ಹಾಗೂ ಕುಡಿಯುವ ನೀರು ಯೋಜನೆಗಳ 86 ಅರ್ಜಿಗಳು ಬಾಕಿಯಿದೆ. ಇವುಗಳಿಗೆ ಆದ್ಯತೆ ಮೇರೆಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸರ್ಕಾರಿ ಗೋಶಾಲೆಯನ್ನು ತೆರೆಯಲು ಹೊಸನಗರ ತಾಲೂಕಿನಲ್ಲಿ ಜಮೀನು ಗುರುತಿಸಲಾಗಿದೆ. ಅದನ್ನು ಅಂತಿಮಗೊಳಿಸಲಾಗುತ್ತಿದೆ. ಪ್ರಸ್ತುತ ಜಿಲ್ಲೆಯಲ್ಲಿ 11ಖಾಸಗಿ ಗೋಶಾಲೆಗಳಿವೆ. ಕಳೆದ ಹಣಕಾಸು ಸಾಲಿನಲ್ಲಿ ಒಟ್ಟು 27ಲಕ್ಷ ರೂ. ಸಹಾಯಧನ ಬಿಡುಗಡೆ ಮಾಡಲಾಗಿದೆ ಎಂದು ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಶಿವಯೋಗಿ ಎಲಿ ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಎಲ್ಲಾ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.