ಆಂಧ್ರಪ್ರದೇಶದ ದಕ್ಷಿಣ ಭಾಗ ಮತ್ತು ಒಡಿಶಾದಲ್ಲಿ ಚಂಡಮಾರುತದ ಪ್ರಭಾವ ಹೆಚ್ಚಾಗಿದೆ. ಕರ್ನಾಟಕ ಸೇರಿದಂತೆ ಅನೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇನ್ನು ಗಂಟೆಗೆ 80 ರಿಂದ 90 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಅಂದಾಜು ಮಾಡಲಾಗಿದೆ. ಮೇ 10 ರ ಬಳಿಕ ಗಾಳಿಯ ವೇಗ ಕಡಿಮೆಯಾಗಲಿದೆ ಎನ್ನಲಾಗಿದೆ. ಮೇ 9 ಮತ್ತು 10 ರಂದು ಆಂಧ್ರಪ್ರದೇಶ ಹಾಗೂ ಒಡಿಶಾದ 17 ಜಿಲ್ಲೆಗಳಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆಯನ್ನೂ ಸಹ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಈ ಪ್ರದೇಶಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಚಂಡಮಾರುತಕ್ಕೆ ಅಸಾನಿ ಎಂದು ಹೆಸರಿಡಲಾಗಿದೆ. ಅಸಾನಿ ಎಂದರೆ ಶ್ರೀಲಂಕಾದ ಸಿಂಹಳಿ ಭಾಷೆಯಲ್ಲಿ ಕ್ರೋಧ ಎಂದರ್ಥ. ಸದ್ಯ ಚಂಡಮಾರುತದ ಅಬ್ಬರ ಒಡಿಶಾ ಕಡೆಗೆ ಸಾಗುತ್ತಿದ್ದು, ಮೇ 9 ಮತ್ತು 10ರಂದು ಮಳೆಯಾಗುವ ಸಾಧ್ಯತೆಯಿದೆ.