ಭ್ರಷ್ಟಾಚಾರ ಸಹಿಸಲ್ಲ. ಯೋಜನೆಗಳ ವಿಳಂಬವನ್ನು ಒಪ್ಪಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆಸಿದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ನೀಡಿದ ಖಡಕ್ ಸೂಚನೆ ನೀಡಿದರು.
ಬಡವರಿಗೆ ಸಹಾಯ ಮಾಡಲು ಏನೇ ನಿರ್ಧಾರ ತೆಗೆದುಕೊಂಡರೂ ಸರ್ಕಾರ ನಿಮ್ಮ ರಕ್ಷಣೆಗೆ ನಿಲ್ಲುತ್ತದೆ. ಕಷ್ಟದಲ್ಲಿರುವ ಬಡವರಿಗೆ ಸಹಾಯ ಮಾಡಿದರೆ ಹೊಸ ಚೈತನ್ಯ ಮೂಡುತ್ತದೆ. ಅದರಿಂದ ನಿಮಗೂ ತೃಪ್ತಿ ದೊರೆಯುವುದು. ಜನಸಾಮಾನ್ಯರಿಗೆ ಆಡಳಿತದಲ್ಲಿ ಬದಲಾವಣೆ ಆಗುತ್ತಿದೆ ಎಂದರು.
ಆಡಳಿತ ಶೈಲಿಯಲ್ಲಿ ಬದಲಾವಣೆ ತರುವ ಸಂಕಲ್ಪ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಕರೆ ನೀಡಿದರು.
ಸರಳ, ಸುಲಭ ಮತ್ತು ಸ್ವಚ್ಛವಾಗಿದೆ ಎಂಬ ಭಾವನೆ ಬರುವಂತೆ ಆಡಳಿತ ನೀಡಬೇಕು. ನಾವು ಒಂದು ತಂಡವಾಗಿ ಒಟ್ಟಾಗಿ ಕೆಲಸ ಮಾಡಬೇಕು. ನನ್ನ ಕಲ್ಪನೆಯ ನವ ಕರ್ನಾಟಕದ ಸಾಕಾರಕ್ಕೆ ನಿಮ್ಮ ಸಹಕಾರ ಅಗತ್ಯ ಎಂದರು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರ್. ಅಶೋಕ್, ಸಿ.ಸಿ.ಪಾಟೀಲ್, ಕೆ.ಸಿ.ನಾರಾಯಣಗೌಡ, ಕೆ.ಗೋಪಾಲಯ್ಯ, ಬಿ.ಸಿ.ನಾಗೇಶ್, ಬಿ.ಸಿ ಪಾಟೀಲ್, ಸುನೀಲ್ ಕುಮಾರ್ , ಪ್ರಭು ಚೌಹಾಣ್, ಉಮೇಶ್ ಕತ್ತಿ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.