ಕೇಂದ್ರ ಸರ್ಕಾರವು ಭಾರತೀಯ ದಂಡ ಸಂಹಿತೆಯಲ್ಲಿರುವ ದೇಶದ್ರೋಹ ವಿವರಿಸುವ ವಿಧಿಯನ್ನು ಮರು ಪರಿಶೀಲಿಸುವುದಾಗಿ ಸುಪ್ರೀಂಕೋರ್ಟ್ಗೆ ತಿಳಿಸಿದೆ.
ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರವು ಭಾರತೀಯ ದಂಡ ಸಂಹಿತೆಯ (Indian Penal Code – IPC) 124ಎ ವಿಧಿಯನ್ನು ಮರುಪರಿಶೀಲಿಸುವುದಾಗಿ ಸುಪ್ರೀಂಕೋರ್ಟ್ಗೆ ತಿಳಿಸಿದೆ.
ದೇಶದ್ರೋಹದ ಅಪರಾಧವನ್ನು ಐಪಿಸಿ 124ಎ ವಿಧಿಯು ವಿವರಿಸುತ್ತದೆ. ಎಸ್.ಜಿ.ಒಂಬತ್ಕೆರೆ vs ಭಾರತ ಸರ್ಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಸತ್ಯಾಪನಾ ಪತ್ರದಲ್ಲಿ (ಅಫಿಡವಿಟ್) ಈ ಮಾಹಿತಿ ನೀಡಲಾಗಿದೆ. ವಸಾಹತುಶಾಹಿಯ ಕಾಲದಲ್ಲಿ ರೂಪುಗೊಂಡಿದ್ದ ಕಾನೂನುಗಳ ಹೊರೆಯಿಂದ ದೇಶವನ್ನು ಪಾರು ಮಾಡಬೇಕು ಎಂದು ಕೇಂದ್ರ ಸರ್ಕಾರವು ಶ್ರಮಿಸುತ್ತಿದೆ.
ದೇಶದ್ರೋಹ ಕಾಯ್ದೆಗೆ ಸಂಬಂಧಿಸಿದಂತೆ ಈವರೆಗೆ ವ್ಯಕ್ತವಾಗಿರುವ ದೃಷ್ಟಿಕೋನಗಳ ಬಗ್ಗೆ ಭಾರತ ಸರ್ಕಾರಕ್ಕೆ ಸಂಪೂರ್ಣ ಮಾಹಿತಿಯಿದೆ. ನಾಗರಿಕ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳ ಬಗ್ಗೆಯೂ ಚರ್ಚೆಗಳು ಆರಂಭವಾಗಿವೆ. ದೇಶದ ಸಾರ್ವಭೌಮತೆ ಮತ್ತು ಏಕತೆಯನ್ನು ಸಂರಕ್ಷಿಸಲು ಕೇಂದ್ರ ಸರ್ಕಾರವು ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿಯೇ ಐಪಿಸಿ ಸೆಕ್ಷನ್ 124ಎ ವಿಧಿಯನ್ನು ಸಂಪೂರ್ಣ ಮರುಪರಿಶೀಲಿಸಲು ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಅಫಿಡವಿಟ್ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಹ ಇದೇ ಚಿಂತನೆ ಹಂಚಿಕೊಂಡಿದ್ದಾರೆ. ದೇಶವು ಸುವರ್ಣ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಇರುವಾಗಲೇ ವಸಾಹತುಶಾಹಿ ಹಿಡಿತದಿಂದ ತಪ್ಪಿಸಿಕೊಳ್ಳುವ ಪ್ರಯತ್ನಗಳು ಆರಂಭವಾಗಿವೆ ಎಂದು ಕೇಂದ್ರ ಸರ್ಕಾರವು ತಿಳಿಸಿದೆ.
ದೇಶದ್ರೋಹ ಕಾನೂನು ಭಾರತ ಸರ್ಕಾರವೇ ಮರುಪರಿಶೀಲನೆಗೆ ಒಳಪಡಿಸಲು ಉದ್ದೇಶಿಸಿರುವುದರಿಂದ ಈ ಕಾನೂನಿನ ಸಾಂವಿಧಾನಿಕ ಮಾನ್ಯತೆಯ ಬಗ್ಗೆ ಪರಿಶೀಲಿಸಲು ಈ ಹಂತದಲ್ಲಿ ಸುಪ್ರೀಂಕೋರ್ಟ್ ಮುಂದಾಗುವ ಅಗತ್ಯವಿಲ್ಲ ಎಂದು ಭಾರತ ಸರ್ಕಾರವು ಕೋರಿದೆ.
ವಸಾಹತುಶಾಹಿ ಕಾಲದಲ್ಲಿ ಜಾರಿಯಾಗಿದ್ದ ಕಾನೂನಿನ ಔಚಿತ್ಯ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರವು ತನ್ನ ಅಭಿಪ್ರಾಯವನ್ನು ಅಫಿಡವಿಟ್ ಮೂಲಕ ಸ್ಪಷ್ಟಪಡಿಸಿದೆ.