ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಸಿಬ್ಬಂದಿ ವರ್ಗದವರಿಗಾಗಿ ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗುವುದು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.
ಜಿಲ್ಲಾ ಪಂಚಾಯಿತಿಯಿಂದ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಹಾಗೂ ಸಿಬ್ಬಂದಿಗಾಗಿ ಏರ್ಪಡಿಸಲಾಗಿದ್ದ ಕ್ರೀಡಾ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮ ಪಂಚಾಯಿತಿಗಳ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿನ ಕೆರೆಗಳ ಅಭಿವೃದ್ಧಿಗೆ ವಿಶೇಷ ಗಮನಹರಿಸಬೇಕು. ಆ ನಿಟ್ಟಿನಲ್ಲಿ ಪಂಚಾಯಿತಿ ಅಧ್ಯಕ್ಷರು-ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘಟಿತವಾಗಿ ಪ್ರಯತ್ನಿಸಿದರೆ ಯಶಸ್ಸು ಕಾಣಲು ಸಾಧ್ಯ. ಇದರಿಂದಾಗಿ ಗ್ರಾಮಗಳಲ್ಲಿ ಸಹಜವಾಗಿಯೇ ಹಸಿರುಕ್ರಾಂತಿ ಆಗಲಿದೆ ಎಂದರು.
ಕ್ರೀಡಾಕೂಟದಂತಹ ಮಾದರಿ ಕಾರ್ಯಕ್ರಮ ಆಯೋಜಿಸಲು ಕಾರಣಕರ್ತರಾದ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರನ್ನು ಅಭಿನಂದಿಸುವುದಾಗಿ ಹೇಳಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ಚುನಾಯಿತ ಸದಸ್ಯರಲ್ಲಿ ಸ್ಪರ್ಧಾ ಮನೋಭಾವ, ಸಾಮರಸ್ಯ ಮೂಡಿಸುವಲ್ಲಿ ಈ ಕ್ರೀಡಾಕೂಟ ಸಹಕಾರಿಯಾಗಿದೆ ಎಂದರು.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಬಿ.ಅಶೋಕ ನಾಯ್ಕ್ ಮಾತನಾಡಿ, ಗ್ರಾಮಗಳಲ್ಲಿ ನೀರು, ರಸ್ತೆ, ಚರಂಡಿ, ವಿದ್ಯುತ್ ಸಮಸ್ಯೆಗಳೊಂದಿಗೆ ದಿನ ಕಳೆಯುವ ಪ್ರತಿನಿಧಿಗಳು ದೈನಂದಿನ ಒತ್ತಡದಿಂದ ಮುಕ್ತರಾಗಲು ಹಾಗೂ ಸದಾ ಲವಲವಿಕೆಯಿಂದ ಇರಲು ಕ್ರೀಡಾಕೂಟ ಸಹಕಾರಿಯಾಗಲಿದೆ ಎಂದರು.
ಪ್ರತಿಯೊಬ್ಬರಲ್ಲೂ ವಿಶೇಷ ಪ್ರತಿಭೆಗಳಿವೆ. ಅವುಗಳ ಅನಾವರಣಕ್ಕೆ ವೇದಿಕೆ ಅಗತ್ಯವಿದೆ. ಅಂತಹ ವೇದಿಕೆ ಕಲ್ಪಿಸುವ ಪ್ರಯತ್ನ ಇದಾಗಿದೆ. ಎಲ್ಲ ಕ್ರೀಡಾಕೂಟಗಳಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಪ್ರಮುಖವಾಗಿದೆ. ಮುಂದಿನ ದಿನಗಳಲ್ಲಿ ಗೆಲ್ಲಲು ಇದು ಪ್ರಥಮ ಹೆಜ್ಜೆ ಎಂದರು.
ಮುಂದಿನ ಅಕ್ಟೋಬರ್ನಲ್ಲಿ ಚುನಾಯಿತ ಪ್ರತಿನಿಧಿಗಳಿಗಾಗಿಯೇ ಸಾಂಸ್ಕೃತಿಕ ಹಬ್ಬ ನಡೆಸಲು ಉದ್ಧೇಶಿಸಲಾಗಿದೆ. ವಿಜೇತರು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವಂತಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ಯೋಜನಾಧಿಕಾರಿ ಉಮಾ ಸದಾಶಿವ, ಜಿಲ್ಲಾ ಪಂಚಾಯಿತಿ
ಮಾಜಿ ಸದಸ್ಯ ಕೆ.ಇ.ಕಾಂತೇಶ್, ಮಂಜುನಾಥ್, ಅವಿನಾಶ್ ಉಪಸ್ಥಿತರಿದ್ದರು.