ಶಿಕಾರಿಪುರ ತಾಲ್ಲೂಕಿನ ಈಸೂರು ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕಕ್ಕೆ ಶನಿವಾರ ಗೌರವ ಸಮರ್ಪಣೆ ಸಲ್ಲಿಸುವ ಮೂಲಕ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಮ್ಮ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆರಂಭಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕಕ್ಕೆ ಭೇಟಿ ನೀಡಿ ಮಾಲಾರ್ಪಣೆ ಮಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರಿಗೆ ಸ್ವಾತಂತ್ರ್ಯ ಹೋರಾಟಗಾರರ ಇತಿಹಾಸವನ್ನು ತಹಶೀಲ್ದಾರ್ ಎಂ.ಪಿ. ಕವಿರಾಜ್ ವಿವರಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಭೇಟಿ ನೀಡಿ ಹೋರಾಟಗಾರರ ಕುಟುಂಬ ವರ್ಗದವರಿಗೆ ಹಾರ ಶಾಲು ಹಾಕಿ ಸನ್ಮಾನಿಸಿದ್ದಾರೆ. ನಂತರ ಗ್ರಾಮ ಒನ್ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕಾರ್ಯಚಟುವಟಿಕೆಯನ್ನು ಪರಿಶೀಲಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರ ಪ್ರಮುಖ ಕೇಂದ್ರವಾಗಿದ್ದ ವೀರಭದ್ರೇಶ್ವರ ದೇವಸ್ಥಾನಕ್ಕೆ ತೆರಳಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಆನಂತರ ಗ್ರಾಮದ ಉರ್ದು ಶಾಲೆ ಮತ್ತು ಅಂಗನವಾಡಿ ಕೇಂದ್ರಕ್ಕೆ ತೆರಳಿ ಅಡುಗೆ ಮನೆ ವೀಕ್ಷಣೆ ನಡೆಸಿದ್ದಾರೆ.
ಉರ್ದು ಶಾಲೆಗೆ ಹೆಚ್ಚುವರಿ ತರಗತಿ ಕೊಠಡಿ ನಿರ್ಮಿಸಿಕೊಡುವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶರ್ಮಿಲಾ ಬಾನು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.
ಶಾಲೆಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಶ್ನಿಸಿದಾಗ ಕೇವಲ 11 ಮಕ್ಕಳು ಮಾತ್ರ ಶಾಲೆಯಲ್ಲಿ ಓದುತ್ತಿರುವುದಾಗಿ ಶಿಕ್ಷಕರು ತಿಳಿಸಿದ್ದಾರೆ.
ದಾಖಲಾತಿ ಪ್ರಮಾಣ ಹೆಚ್ಚಿಸಿ ಶಾಲಾ ಕೊಠಡಿ ನಿರ್ಮಿಸಲು ಆದ್ಯತೆ ನೀಡುತ್ತೇನೆ ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ.
ನ್ಯಾಯಬೆಲೆ ಅಂಗಡಿಗೆ ತೆರಳಿ ಪಡಿತರ ಧಾನ್ಯ ಸಮರ್ಪಕವಾಗಿ ವಿತರಿಸುತ್ತಿದ್ದಾರೆಯೇ ಎಂದು ಪರಿಶೀಲಿಸಿದ್ದಾರೆ.
ಗ್ರಾಮ ವಾಸ್ತವ್ಯ ಸಂದರ್ಭ ಗ್ರಾಮದ ಸರ್ಕಾರಿ ಶಾಲೆ ಹಾಗೂ ಪದವಿಪೂರ್ವ ಕಾಲೇಜಿಗೆ ಜಿಲ್ಲಾಧಿಕಾರಿ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದಾರೆ.
ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಬಗ್ಗೆ ಡಾ.ಸೆಲ್ವಮಣಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್. ಹೊನ್ನಳ್ಳಿ ಅವರು ಮಾಹಿತಿ ನೀಡಿ ಶಾಲೆಗೆ ಕಂಪ್ಯೂಟರ್ ಸೌಲಭ್ಯ ಒದಗಿಸಬೇಕು ಎಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿಗೌಡ ಮನವಿ ಮಾಡಿದಾಗ, ದಾನಿಗಳ ಸಹಕಾರದಿಂದ ಶಾಲೆಯಲ್ಲಿ ಕಂಪ್ಯೂಟರ್ ಖರೀದಿಸಲು ಮುಂದಾಗುವಂತೆ ಶಿಕ್ಷಣಾಧಿಕಾರಿ ಜಿ.ಎಸ್. ಶಶಿಧರ್ ಅವರಿಗೆ ಸೂಚಿಸಿದ್ದಾರೆ.
ಕಾರ್ಮಿಕ ಇಲಾಖೆಯಿಂದ 3 ವರ್ಷಗಳಿಂದ ವಿದ್ಯಾರ್ಥಿ ವೇತನ ದೊರೆಯುತ್ತಿಲ್ಲ. ಅನೇಕ ಬಾರಿ ಅರ್ಜಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಭಾಗ್ಯ ಉಮೇಶ್ ದೂರಿದ್ದಾರೆ.
ಕಾರ್ಮಿಕ ಇಲಾಖೆ ಅಧಿಕಾರಿ ಶಶಿಕುಮಾರ್ ಅವರಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಮನೆ ನಿರ್ಮಿಸಬೇಕು. ಸ್ಮಾರ್ಟ್ ಕ್ಲಾಸ್ಗೆ ಅನುದಾನ ನೀಡಬೇಕು ಎಂದು ಶಾಲಾಭಿವೃದ್ಧಿ ಸಮಿತಿ ಸದಸ್ಯರು ಮನವಿ ಮಾಡಿದ್ದಾರೆ.
ಗ್ರಾಮಸ್ಥರಿಗೆ ನಿವೇಶನ ಹಂಚಲು ಭೂಮಿ ಗುರುತಿಸುವಂತೆ ತಹಶೀಲ್ದಾರ್ ಎಂ.ಪಿ. ಕವಿರಾಜ್ ಅವರಿಗೆ ಸೂಚಿಸಿದ್ದಾರೆ.
ರಾತ್ರಿ ಗ್ರಾಮದ ಬಿಸಿಎಂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನಂತರ ನಿಲಯದಲ್ಲಿಯೇ ಜಿಲ್ಲಾಧಿಕಾರಿ ವಾಸ್ತವ್ಯ ಹೂಡಿದ್ದಾರೆ.
ಅಹವಾಲು ಕಾರ್ಯಕ್ರಮವನ್ನು ಉದ್ಘಾಟಿಸಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರಮೂರ್ತಿ
ಉದ್ಘಾಟಿಸಿದ್ದಾರೆ.
ಸಾಗರ ಉಪವಿಭಾಗಧಿಕಾರಿ ಡಾ.ನಾಗರಾಜ್ ನಾಯ್ಕ್, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್. ಶಶಿಧರ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕುಮಾರ್, ಉಪತಹಶೀಲ್ದಾರ್ ಮಂಜುನಾಥ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಕಿರಣ್ ಕುಮಾರ್ ಹರ್ತಿ, ಬಿಸಿಎಂ ಇಲಾಖೆ ಕಲ್ಯಾಣಾಧಿಕಾರಿ ಕೆ.ಆರ್.ಶೋಭಾ, ಆಹಾರ ಇಲಾಖೆ ಶಿರಸ್ತೇದಾರ್ ವಿ.ಕೆ. ಗೀತಾ, ಸಿಡಿಪಿಒ ನಂದಕುಮಾರ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.