ಶಿವಮೊಗ್ಗದ ಆನವಟ್ಟಿಯಲ್ಲಿ ‘ರಂಗಬೆಳಕು’ ತಂಡ ಪ್ರಸ್ತುತ ಪಡಿಸುತ್ತಿದ್ದ ‘ಜತೆಗಿರುವನು ಚಂದಿರ’ ಪ್ರದರ್ಶನಕ್ಕೆ ಆರೆಸ್ಸೆಸ್ ಅಡ್ಡಿಪಡಿಸಿರುವುದು ಸಾಂಸ್ಕೃತಿಕ ಭಯೋತ್ಪಾದನೆಯಲ್ಲದೆ ಮತ್ತೇನಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾನುವಾರ ರಾತ್ರಿ ಆಯೋಜಿಸಿದ್ದ ಈ ನಾಟಕ ಪ್ರದರ್ಶನಕ್ಕೆ ಬಜರಂಗದಳ, ಆರೆಸ್ಸೆಸ್ ಕಾರ್ಯಕರ್ತರು ಅಡ್ಡಿಪಡಿಸಿದ್ದರು.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಈ ಗೂಂಡಾಗಿರಿಯಲ್ಲಿ ಪಾಲುದಾರರಾದ ಎಲ್ಲಾ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮದ ಪರವಾಗಿರುವ ಸಾಹಿತ್ಯ, ನಾಟಕ, ಕಲೆ ಮೊದಲಾದ ಸಾಂಸ್ಕೃತಿಕ ಅಭಿವ್ಯಕ್ತಿಗಳನ್ನು ಕಂಡರೆ ಆರೆಸ್ಸೆಸ್ ಮತ್ತು ಪರಿವಾರಕ್ಕೆ ಭಯ. ಈ ದಾಳಿಗೂ ಇದೇ ಕಾರಣ. ಇಂತಹ ಅಡ್ಡಿ- ಆತಂಕಗಳನ್ನು ಎದುರಿಸುವ ಚೈತನ್ಯ ಕನ್ನಡದ ಸಾಂಸ್ಕೃತಿಕ ಲೋಕಕ್ಕೆ ಇದೆ’ ಎಂದಿದ್ದಾರೆ.