ಮುಂದಿನ ಸಂಪುಟ ಸಭೆಯಲ್ಲಿ ರಾಜ್ಯಕ್ಕೆ ಹೊಸ ಉದ್ಯೋಗ ನೀತಿಯನ್ನು ಮಂಡಿಸಲು ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಉದ್ಯೋಗ ನೀತಿ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದು,, ಸಭೆಯಲ್ಲಿ ಕೈಗಾರಿಕಾ ನೀತಿಯಲ್ಲಿ ಉದ್ಯೋಗ ಸೃಷಜನೆ ಹೆಚ್ಚಾಗಿ ಮಾಡುವ ವಸ್ತ್ರೋದ್ಯಮ, ಎಫ್.ಎಂಜಿ ಮತ್ತಿತರ ಹೆಚ್ಚಿನ ಮಾನವ ಸಂಪನ್ಮೂಲ ಬೇಡಿಕೆ ಇರುವ ಉದ್ಯಮಗಳಿಗೆ ಪ್ರೋತ್ಸಾಹ ನೀಡಬೇಕು ಎಂದರು.
ಸಂಶೋಧನೆ ಮತ್ತು ಅಭಿವೃದ್ಧಿ ನೀತಿ ಕುರಿತಂತೆ ಟಾಸ್ಕ್ ಫೋರ್ಸ್ ಅಧ್ಯಕ್ಷರಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದರೂ, ಒಟ್ಟಾರೆಯಾಗಿ ಈ ವಲಯವನ್ನು ಪರಿಗಣಿಸಿದಾಗ, ಅಭಿವೃದ್ಧಿಗೆ ವಿಫುಲ ಅವಕಾಶವಿದೆ. ಆದ್ದರಿಂದ ಈ ಕ್ಷೇತ್ರದ ಅಭಿವೃದ್ಧಿಗೆ ವ್ಯವಸ್ಥಿತ ಚೌಕಟ್ಟು ನೀಡುವ ಅಗತ್ಯವಿದೆ ಎಂದರು.
ಕೈಗಾರಿಕೋದ್ಯಮಗಳಲ್ಲಿ ಬೇಡಿಕೆ ಇರುವ ಕ್ಷೇತ್ರಗಳಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಇನ್ನಷ್ಟು ಹೆಚ್ಚಿಸಬೇಕು ಎಂದು ಸೂಚನೆ ನೀಡಿದರು.
ಹೊಸ ಉದ್ಯೋಗ ನೀತಿಯು ಅತ್ಯಂತ ಸರಳವಾಗಿದ್ದು, ಜನಸಾಮಾನ್ಯರಿಗೂ ಅರ್ಥವಾಗುವಂತಿರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸಂಶೋಧನೆ ಮತ್ತು ಅಭಿವೃದ್ಧಿಯ ಫಲಶ್ರುತಿ ಮಾನವನ ದೈನಂದಿನ ಜೀವನದಲ್ಲಿ ಬಳಕೆಯಾದಾಗ ಸಾರ್ಥಕವೆನಿಸುತ್ತದೆ ಎಂದ ಮುಖ್ಯಮಂತ್ರಿಗಳು, ಗ್ರಾಮೀಣ ಜನರು, ವ್ಯಕ್ತಿಗಳ ಸಂಶೋಧನೆಗಳಿಗೂ ಮಾನ್ಯತೆ ನೀಡುವ ವ್ಯವಸ್ಥೆ ರೂಪಿಸುವ ಅಗತ್ಯವಿದೆ. ಜೊತೆಗೆ ಈ ನೀತಿ ಯಾವುದೇ ಒಂದು ನಿರ್ದಿಷ್ಟ ವಲಯಕ್ಕೆ ಸೀಮಿತವಾಗದೆ ಎಲ್ಲ ವಲಯಗಳಿಗೂ ಅನ್ವಯವಾಗುವಂತೆ ರೂಪಿಸಬೇಕೆಂದು ಸಲಹೆ ನೀಡಿದರು.
