ರಾಷ್ಟ್ರಪತಿ ಆಯ್ಕೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ರಾಜ್ಯದ ಬಿಜೆಪಿ ಸಂಸದರು ಮತ್ತು ಶಾಸಕರನ್ನು ಭೇಟಿಮಾಡಿ ಬೆಂಬಲ ಯಾಚಿಸಿದರು. ಸಂಸದರು ಮತ್ತು ಶಾಸಕರ ಸಭೆಯಲ್ಲಿ ಭಾಗಿಯಾಗಿ, ತಮಗೆ ಮತ ನೀಡುವಂತೆ ಮನವಿ ಮಾಡಿದರು.
ವಿಶೇಷ ವಿಮಾನದಲ್ಲಿ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ವಾಗತಿಸಿದರು. ಬಳಿಕ ಬಿಜೆಪಿ ಶಾಸಕ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಕಿಶನ್ ರೆಡ್ಡಿ ಸೇರಿದಂತೆ ಪಕ್ಷದ ಹಲವು ನಾಯಕರ ಜತೆ ಸಮಾಲೋಚನೆ ನಡೆಸಿದರು.
ಬೆಂಗಳೂರು ನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ನಡೆದ ಬಿಜೆಪಿ ಸಂಸದರು ಮತ್ತು ಶಾಸಕರ ಸಭೆಯಲ್ಲಿ ಮುರ್ಮು ಪಾಲ್ಗೊಂಡರು. ಬಿಜೆಪಿ ರಾಜ್ಯ ಘಟಕದ ವತಿಯಿಂದ ಅವರಿಗೆ ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿ, ದೇವರ ವಿಗ್ರಹದ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಈ ಸಭೆಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರಂತಹ ಸ್ವಾತಂತ್ರ್ಯ ಸೇನಾನಿಗಳ ನೆಲ. ಸಮಾನತೆಗಾಗಿ ಬಸವಣ್ಣನವರು ಇಲ್ಲಿ ಹೋರಾಡಿದ್ದಾರೆ.
ಸರ್.ಎಂ.ವಿಶ್ವೇಶ್ವರಯ್ಯ ಅವರಂತಹ ‘ವಿಶ್ವಶಿಲ್ಪಿ’ ಎಂಜಿನಿಯರ್ಗಳನ್ನೂ ಈ ನಾಡು ನಮಗೆ ನೀಡಿದೆ. ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ನಿಮ್ಮೆಲ್ಲರ ಬೆಂಬಲ ಯಾಚಿಸಲು ಇಲ್ಲಿಗೆ ಬಂದಿದ್ದೇನೆ’ ಎಂದರು.
‘ರಾಷ್ಟ್ರಕೂಟರು, ಕದಂಬರು, ಬಾದಾಮಿ ಚಾಲುಕ್ಯರು, ವಿಜಯನಗರ ಸಾಮ್ರಾಜ್ಯದ ಅರಸರು, ಮೈಸೂರು ಸಂಸ್ಥಾನದ ಮಹಾರಾಜರು ಸೇರಿದಂತೆ ಅನೇಕರು ಕರ್ನಾಟಕವನ್ನು ಆಳಿದ್ದಾರೆ. ಭಾರತ ದೊಡ್ಡ ದೇಶ. ನಮ್ಮ ಸಂವಿಧಾನ ವಿಶಿಷ್ಟವಾದುದು. ಒಡಿಶಾದ ಮಯೂರಗಂಜ್ ಜಿಲ್ಲೆಯಲ್ಲಿ ಹುಟ್ಟಿ, ಬೆಳೆದು ಶಿಕ್ಷಣ ಪಡೆದ ನಾನು ಶಿಕ್ಷಕಿಯಾಗಿದ್ದೆ. ಸಹಾಯಕ ಎಂಜಿನಿಯರ್ ಆಗಿಯೂ ಕೆಲಸ ಮಾಡಿದ್ದೆ. ನಂತರ ಶಾಸಕಿ, ಮಂತ್ರಿ, ರಾಜ್ಯಪಾಲೆಯಾಗುವ ಅವಕಾಶ ದೊರಕಿತ್ತು. ಈಗ ಎನ್ಡಿಎ ಮೈತ್ರಿಕೂಟ ನನ್ನನ್ನು ರಾಷ್ಟ್ರಪತಿ ಅಭ್ಯರ್ಥಿ ಮಾಡಿದೆ. ಎಲ್ಲರೂ ಮತ ನೀಡುವ ಮೂಲಕ ಗೆಲುವಿಗೆ ಸಹಕರಿಸಿ’ ಎಂದು ಮನವಿ ಮಾಡಿದರು.
ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲ್, ಪ್ರಲ್ಹಾದ ಜೋಶಿ, ಕಿಶನ್ ರೆಡ್ಡಿ, ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಶಾಸಕ ಜಗದೀಶ ಶೆಟ್ಟರ್, ಸಂಸದ ಡಿ.ವಿ. ಸದಾನಂದ ಗೌಡ ವೇದಿಕೆಯಲ್ಲಿದ್ದರು.