ಸರ್ಕಾರಿ ವಸತಿ ಶಾಲೆಗಳಿಗೆ ಟೆಂಡರ್ ಆಹ್ವಾನಿಸಿ ಹೊರಗುತ್ತಿಗೆ ಏಜೆನ್ಸಿಗಳ ಮುಖಾಂತರ ಗುತ್ತಿಗೆ ಆಧಾರದಲ್ಲಿ ಶಿಕ್ಷಕರ ನೇಮಕ ಮಾಡಬಾರದು ಎಂದು ಸರ್ಕಾರಕ್ಕೆ ಆದೇಶಿಸಿರುವ ಹೈಕೋರ್ಟ್, ಸಾಧ್ಯವಾದಷ್ಟೂ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಅನುಸರಿಸಬೇಕು ಎಂದು ನಿರ್ದೇಶಿಸಿದೆ.
ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ಸರ್ಕಾರದ ವಿವಿಧ ವಸತಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೂರಾರು ಶಿಕ್ಷಕರು ತಮ್ಮ ಹುದ್ದೆ ಕಾಯಂಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಇತ್ಯರ್ಥಪಡಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶವನ್ನು ನೀಡಿದೆ.
ವಿದ್ಯಾರ್ಥಿಗಳ ಆಸಕ್ತಿ ಮತ್ತು ಅವರ ಶಿಕ್ಷಣಕ್ಕೆ ಸಂಬಂಧಿಸಿದ ಗಂಭೀರ ವಿಚಾರವಾಗಿರುವುದರಿಂದ ಶಿಕ್ಷಕರ ನೇಮಕಾತಿ ಜವಾಬ್ದಾರಿಯನ್ನು ಹೊರಗುತ್ತಿಗೆ ಏಜೆನ್ಸಿಗಳಿಗೆ ನೀಡುವುದು ಮಕ್ಕಳ ದೃಷ್ಟಿಯಿಂದ ಒಳ್ಳೆಯ ಕ್ರಮವಲ್ಲ ಎಂದು ನ್ಯಾಯಾಲಯ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.
ಸರ್ಕಾರದಿಂದ ಸ್ಥಾಪನೆಯಾಗಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿ ಟೆಂಡರ್ ಕರೆದು ಹೊರಗುತ್ತಿಗೆ ಏಜೆನ್ಸಿಗಳ ಮೂಲಕ ವಸತಿ ಶಾಲೆಗಳಿಗೆ ಶಿಕ್ಷಕರನ್ನು ನೇಮಿಸುವ ಪದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಹೊರಗುತ್ತಿಗೆ ಏಜೆನ್ಸಿಗಳ ಮೂಲಕ ಶಿಕ್ಷಕರ ನೇಮಕ ಮಾಡಿಕೊಳ್ಳುವ ನೀತಿಯಿಂದ ಕಳೆದ 10 ರಿಂದ 15 ವರ್ಷಗಳಲ್ಲಿ ಹೊರಗುತ್ತಿಗೆ ಏಜೆನ್ಸಿಗಳು ನಾಯಿಕೊಡೆಗಳಂತೆ ತಲೆ ಎತ್ತಿವೆ ಎಂದು ನ್ಯಾಯಪೀಠ ಆತಂಕ ವ್ಯಕ್ತಪಡಿಸಿದೆ.