ದಾವಣಗೆರೆಯಲ್ಲಿ ಬುಧವಾರ ನಡೆಯುವ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರ 75ನೇ ಹುಟ್ಟುಹಬ್ಬದ ಕಾರ್ಯಕ್ರಮ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.
ಈ ಕಾರ್ಯಕ್ರಮದ ಹಿನ್ನೆಲೆ ಜನರು ಸಹ ಬಸ್ಗಳು ಇಲ್ಲದೇ ಪರದಾಡಬೇಕಿದೆ.
ಸಿದ್ದರಾಮಯ್ಯರ 75ನೇ ಹುಟ್ಟುಹಬ್ಬವನ್ನು ‘ಸಿದ್ದರಾಮೋತ್ಸವ’ ಹೆಸರಿನಲ್ಲಿ ಆಚರಣೆ ಮಾಡಲಾಗುತ್ತಿದೆ.
ಇದಕ್ಕಾಗಿ ಸುಮಾರು 7 ಸಾವಿರ ಬಸ್ಗಳಲ್ಲಿ ಜನರು ತೆರಳಲಿದ್ದು, ವಿವಿಧೆಡೆ ಬಸ್ ಸಂಚಾರದಲ್ಲಿ ಆಗಸ್ಟ್ 3 ಮತ್ತು 4ರಂದು ವ್ಯತ್ಯಯ ಉಂಟಾಗಲಿದೆ.
ಬಸ್ಗಳು ದಾವಣಗೆರೆಗೆ ಸಂಚಾರ ನಡೆಸುವ ಕಾರಣ ಆಗಸ್ಟ್ 3ರ ಬುಧವಾರ ಮತ್ತುಆಗಸ್ಟ್ 4ರ ಗುರುವಾರ ವಿವಿಧೆಡೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗ ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಇದೇ ಆಗಸ್ಟ್ 3ರಂದು ದಾವಣಗೆರೆಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗದದಿಂದ ಸುಮಾರು 200 ಬಸ್ಗಳನ್ನು ಕರಾರು ಒಪ್ಪಂದದ ಮೇಲೆ ಒದಗಿಸಲಾಗಿದೆ ಎಂದು ಹೇಳಿದೆ.
ಬಳ್ಳಾರಿ, ಸಿರುಗುಪ್ಪ, ತೆಕ್ಕಲಕೋಟೆ, ಕುರುಗೋಡು, ಕುಡಿತಿನಿ, ಕಂಪ್ಲಿ, ಸಂಡೂರು ಕಡೆಗಳಿಂದ ವಿವಿಧ ಸ್ಥಳಗಳಿಗೆ ತೆರಳುವ ಬಸ್ಸುಗಳ ದೈನಂದಿನ ಅನುಸೂಚಿಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.
7 ಸಾವಿರ ಬಸ್ ಬುಕ್ ಆಗಿವೆ. ದಾವಣಗರೆಯಲ್ಲಿ ನಡೆಯುವ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಸುಮಾರು 5 ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಸಮಾವೇಶಕ್ಕೆ ಸಿದ್ದರಾಮಯ್ಯ ತವರು ಕ್ಷೇತ್ರ ಬಾದಾಮಿಯಿಂದಲೇ 25 ಸಾವಿರ ಜನರು ಆಗಮಿಸಲಿದ್ದಾರೆ. ವಿವಿಧ ಜಿಲ್ಲೆಗಳಿಂದ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಆಗಮಿಸಲು ಸುಮಾರು 7 ಸಾವಿರ ಬಸ್ಗಳನ್ನು ಬುಕ್ ಮಾಡಲಾಗಿದೆ
ಇದರಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್ 2ರ ರಾತ್ರಿಯಿಂದ ಆಗಸ್ಟ್ 4ರ ತನಕ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ದೂರ ಪ್ರಯಾಣ ಮಾಡುವ ಯೋಜನೆ ಹಾಕಿಕೊಂಡವರು ಬಸ್ಗಳ ಲಭ್ಯತೆ ಬಗ್ಗೆ ಒಮ್ಮೆ ಪರಿಶೀಲಿಸಿಕೊಳ್ಳುವುದು ಅತ್ಯಗತ್ಯವಾಗಿದೆ.
