ಜಾರಿ ನಿರ್ದೇಶನಾಲಯದಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ದೆಹಲಿಯಲ್ಲಿರುವ ನ್ಯಾಷನಲ್ ಹೆರಾಲ್ಡ್ ಕಚೇರಿಯನ್ನು ಸೀಲ್ ಮಾಡಲಾಗಿದೆ. ಇದಲ್ಲದೇ ಏಜೆನ್ಸಿಯ ಪೂರ್ವಾನುಮತಿಯಿಲ್ಲದೆ ಆವರಣವನ್ನು ತೆರೆಯಬಾರದು ಎಂದು ಸೂಚಿಸಿದೆ.
ದೇಶದಲ್ಲಿ ಅಲ್ಲೋಲ ಕಲ್ಲೋಲವನ್ನು ಸೃಷ್ಠಿಸಿದ್ದ ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ, ದಿನಕ್ಕೊಂದು ತಿರುವನ್ನು ಪಡೆಯುತ್ತಿದೆ. ಇದೇ ಪ್ರಕರಣದಲ್ಲಿ ಈಗಾಗಲೇ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಸರಣಿ ವಿಚಾರಣೆಯನ್ನು ಇಡಿ ಅಧಿಕಾರಿಗಳು ನಡೆಸಿದ್ದರು.
ಇದಲ್ಲದೇ ಕಾಂಗ್ರೆಸ್ ನ ಸಾಲು ಸಾಲು ನಾಯಕರನ್ನು ಇಡಿ ವಿಚಾರಣೆ ನಡೆಸಿತ್ತು. ಹೀಗಾಗಿ ಇಡಿ ಕಿರುಕುಳ ವಿರೋಧಿಸಿ ಕಾಂಗ್ರೆಸ್ ನಿಂದ ದೇಶಾದ್ಯಂತ ಪ್ರತಿಭಟನೆ ಕೂಡ ನಡೆಸಲಾಗಿತ್ತು.
ಈ ಬೆನ್ನಲ್ಲೇ ಇದೀಗ ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಇಡಿ ಅಧಿಕಾರಿಗಳು ಬೀಗಮುದ್ರೆ ಜಡಿದಿದ್ದಾರೆ. ಅಲ್ಲದೇ ತಮ್ಮ ಪೂರ್ವಾನುಮತಿ ಇಲ್ಲದೆ ಕಚೇರಿಯ ಆವರಣವನ್ನು ತೆರೆಯದಂತೆ ಖಡಕ್ ಸೂಚನೆ ನೀಡಿದ್ದಾರೆ