ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ “ಹರ್ ಘರ್ ತಿರಂಗಾ’ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳ ಸಹಿತ ವಿವಿಧ ಅಧಿಕಾರಿ ಗಳಿಗೆ ಸೂಚಿಸಿದರು.
ಈ ಕಾರ್ಯಕ್ರಮವನ್ನು ಕಾಟಾಚಾರಕ್ಕೆ ಮಾಡದೆ ದೇಶದ ಮೇಲಿನ ಅಭಿಮಾನ, ಪ್ರೀತಿಯಿಂದ ಆಯೋಜಿಸಬೇಕು. ಅರ್ಥಪೂರ್ಣವಾಗಿ ಆಚರಿಸ ಬೇಕೆಂಬ ತುಡಿತದೊಂದಿಗೆ ಕಾರ್ಯನಿರ್ವಹಿಸ ಬೇಕು ಎಂದು ಸೋಮವಾರ ಅಭಿಯಾನದ ಸಿದ್ಧತೆಯನ್ನು ಪರಿಶೀಲಿಸಿದ ನಂತರ ಅವರು, ಅಧಿಕಾರಿಗಳಿಗೆ ಸಲಹೆ ನೀಡಿದರು.
ರಾಜ್ಯದಲ್ಲಿ ಒಂದು ಕೋಟಿಗೂ ಹೆಚ್ಚು ಮನೆ ಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಗುರಿ ಹೊಂದಲಾಗಿದೆ. ಈಗಾಗಲೇ ಧ್ವಜ ವಿತರಣೆ ನಡೆಯುತ್ತಿದೆ. ಆ. 13ರಂದೇ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದ ವಾತಾವರಣ ನಿರ್ಮಾಣವಾಗಬೇಕು ಎಂದು ಸೂಚಿಸಿದರು.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಸರ್ಕಾರಿ ಕಚೇರಿಗಳಲ್ಲಿ ಈ ಮೂರು ದಿನ ಬೆಳಗ್ಗೆ ಧ್ವಜಾ ರೋಹಣ ಮಾಡಿ, ಸಂಜೆ ಇಳಿಸಬೇಕು. ಮನೆಗಳಲ್ಲಿ ಆ. 13ರಂದು ಧ್ವಜಾರೋಹಣ ಮಾಡಿ, 15ರ ವರೆಗೆ ಇರಿಸಬಹುದಾಗಿದೆ ಎಂದು ತಿಳಿಸಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮತ್ತೊಮ್ಮೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ, ನಿಗದಿತ ಗುರಿ ಸಾಧಿಸಲು ಮಾರ್ಗದರ್ಶನ ನೀಡುವಂತೆ ಸೂಚಿಸಿದರು.
ಇದರೊಂದಿಗೆ ಕ್ವಿಟ್ ಇಂಡಿಯಾ ಚಳವಳಿಯ ಸ್ಮರಣಾರ್ಥ ಆ. 9ರಿಂದ 14ರ ನಡುವೆ ಆಯಾ ಜಿಲ್ಲೆಗಳ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಸಮ್ಮಾನಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಇದರಲ್ಲಿ ಭಾಗಿಯಾಗುವಂತೆ ಸೂಚಿಸಿದರು.