ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್ನಲ್ಲಿ ಹಾಕಿದ್ದ ವೀರ್ ಸಾವರ್ಕರ್ ಫ್ಲೆಕ್ಸ್ ತೆಗೆದಿದ್ದರಿಂದ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ.
ಶಿವಮೊಗ್ಗ ನಗರದಲ್ಲಿ ಎರಡು ಗುಂಪುಗಳ ಮಧ್ಯೆ ವೀರ್ ಸಾವರ್ಕರ್ ಫ್ಲೆಕ್ಸ್, ಬ್ಯಾನರ್ ಕಟ್ಟುವ ವಿಚಾರ ಸಂಬಂಧ ಭಿನ್ನಾಭಿಪ್ರಾಯ ಉಂಟಾಗಿ ಜಗಳ ನಡೆದು ವ್ಯಕ್ತಿಗೆ ಚಾಕು ಇರಿತ ಉಂಟಾಗಿತ್ತು. ಕಾನೂನು ಸುವ್ಯವಸ್ಥೆ ಹದಗೆಟ್ಟ ಹಿನ್ನೆಲೆಯಲ್ಲಿ ಶಾಂತಿ ಹದಗೆಟ್ಟಿತ್ತು. ಹೀಗಾಗಿ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ನಿಷೇಧಾಜ್ಞೆ ಹೊರಡಿಸಿ ಶಾಲೆ ಕಾಲೇಜಿಗೆ ರಜೆ ನೀಡಲಾಗಿದೆ.
ಸದ್ಯ ನಗರದಲ್ಲಿ ಕರ್ಫ್ಯೂ ಜಾರಿಯಲ್ಲಿದ್ದು, ಜನರು ಶಾಂತಿ ಕಾಪಾಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.
ಘಟನೆಯಲ್ಲಿ ಚೂರಿ ಇರಿತಕ್ಕೊಳಗಾದ ಇಬ್ಬರಲ್ಲಿ ಒಬ್ಬರನ್ನು ಭೇಟಿಯಾಗಿ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ, ‘ನಾವು ಕಳೆದ ಮೂರು ದಿನಗಳಿಂದ ಭಾರತ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದೇವೆ. ಇಂತಹ ಸಂತಸದ ಸಂದರ್ಭದಲ್ಲಿ ಇಂತಹ ಅಹಿತಕರ ಘಟನೆ ನಡೆದಿರುವುದು ದುರಾದೃಷ್ಟಕರ.
ಇಲ್ಲಿ ಪೊಲೀಸರು ಎಲ್ಲಾ ಅಪರಾಧಿಗಳನ್ನು ಬಂಧಿಸಿ ನ್ಯಾಯಾಲಯದ ಮುಂದೆ ನಿಲ್ಲುತ್ತಾರೆ ಎಂದರು.
ಚೂರಿ ಇರಿತ ಘಟನೆಯ ಹಿಂದಿರುವ ಕೋಮುವಾದಿ ಶಕ್ತಿಗಳನ್ನು ಬಯಲಿಗೆಳೆಯುವ ಅಗತ್ಯವಿದೆ. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಶೀಘ್ರದಲ್ಲೇ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಅವರು ಹೇಳಿದರು.