ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಸೈನ್ಸ್ ಮೈದಾನದಿಂದ ಸಾವಿರಾರು ವಿದ್ಯಾರ್ಥಿಗಳು ಎನ್.ಎಸ್.ಯು.ಐ. ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಮಹಾವೀರವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಮುಖಂಡ ಹಾಗೂ ಪದವೀಧರರ ಸಹಕಾರ ಸಂಘದ ಅಧ್ಯಕ್ಷ ಎಸ್.ಪಿ. ದಿನೇಶ್, ಕೇಂದ್ರ ಸರ್ಕಾರ ಯಾವುದೇ ಪೂರ್ವ ತಯಾರಿ ಇಲ್ಲದೇ ಜಾರಿಗೊಳಿಸಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗಿ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಶಿಕ್ಷಣ ವಿರೋಧಿ ನೀತಿಯಿಂದಾಗಿ ವಿದ್ಯಾರ್ಥಿಗಳಿಗೆ ಅನಗತ್ಯ ತೊಂದರೆ, ಹೊರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗಿ ಮುಖ್ಯವಾಗಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ವಿಳಂಬವಾಗುತ್ತಿದೆ. ವಾರ್ಷಿಕ ಪ್ರವೇಶ ಶುಲ್ಕದಲ್ಲಿ ವಿಪರೀತ ಹೆಚ್ಚಳವಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆ ವಸತಿ ಸಮಸ್ಯೆ, 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಯಾಗಿಲ್ಲ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯದ ಸಮಸ್ಯೆ ಉಂಟಾಗಿದೆ. ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಣೆ ಸ್ಥಗಿತಗೊಳಿಸಲಾಗಿದೆ. ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ವಿಸ್ತರಣೆ ಮಾಡುತ್ತಿಲ್ಲ. ಕುವೆಂಪು ಮುಕ್ತ ವಿಶ್ವವಿದ್ಯಾಲಯದ ಪರೀಕ್ಷಾ ನಕಲು, 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ವಿದ್ಯಾರ್ಥಿ ವೇತನ ರದ್ದುಪಡಿಸಿರುವುದು, ಪ್ರಸ್ತುತ ಸಾಲಿನ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳ ಕೊರತೆ ಮುಂತಾದ ಸಮಸ್ಯೆಗಳು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯಿಂದ ಉಂಟಾಗಿದ್ದು, ಇದರಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಮಾರಕ ಪರಿಣಾಮ ಬೀರುತ್ತಿದೆ ಕೂಡಲೇ ಸರ್ಕಾರಗಳು ಈ ದ್ವಂದ್ವ ನೀತಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಹೊಸ ಶಿಕ್ಷಣ ನೀತಿ ಇರಿಸುಮುರಿಸಿನ ಬಗ್ಗೆ ಎನ್,ಎಸ್,ಯು,ಐ,ಪ್ರತಿಭಟನೆ
Date: