Friday, March 20, 2026
Friday, March 20, 2026

Dr. Selvamani ಅತಿಸಾರ ಬೇಧಿ ನಿರ್ಲಕ್ಷ್ಯ ಬೇಡ-ಸೂಕ್ತ ಚಿಕಿತ್ಸೆ ಪಡೆಯುವಂತೆ ಡಿಸಿ ಸಲಹೆ

Date:

Dr. Selvamani ಮಕ್ಕಳಲ್ಲಿ ಕಂಡುಬರುವ ಅತಿಸಾರ ಬೇಧಿಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ಕೂಡಲೇ ಸೂಕ್ತ ಚಿಕಿತ್ಸೆ ಕೊಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಬಸವನಗುಡಿ ಅಂಗನವಾಡಿ ಕೇಂದ್ರದಲ್ಲಿ ಏರ್ಪಡಿಸಲಾಗಿದ್ದ ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


Dr. Selvamani ಮಕ್ಕಳ ಸಾವಿನ ಪ್ರಕರಣದಲ್ಲಿ ಮುಖ್ಯ ಕಾರಣ ಅತಿಸಾರ ಬೇಧಿ ಆಗಿದೆ. ವರ್ಷದಲ್ಲಿ ಪ್ರತಿ ಸಾವಿರ ಮಕ್ಕಳಲ್ಲಿ 14 ಮಕ್ಕಳ ಮರಣವಾಗುತ್ತಿದ್ದು ಅದರಲ್ಲಿ 5 ಮಕ್ಕಳು ಅತಿಸಾರ ಬೇಧಿಯಿಂದ ಸಾವನ್ನಪ್ಪುತ್ತಿದ್ದಾರೆ. ಆದರಿಂದ ಅತಿಸಾರ ಬೇಧಿ ಕುರಿತು ನಿರ್ಲಕ್ಷ್ಯ ಸಲ್ಲದು. ಬೇಧಿಗೆ ಏನು ಸೂಕ್ತ ಚಿಕಿತ್ಸೆ ಎಂದು ಗೊತ್ತಾಗದೇ ಪೋಷಕರು ಅವೈಜ್ಞಾನಿಕ ಪದ್ದತಿಯನ್ನು ಅನುಸರಿಸಿ ಮಗು ಸುಸ್ತಾದ ಮೇಲೆ ಆಸ್ಪತ್ರೆಗೆ ಕರುತರುತ್ತಾರೆ. ಇದು ಸರಿಯಲ್ಲ.
ಅತಿಸಾರ ಬೇಧಿಯಿಂದಾಗುವ ಮಕ್ಕಳ ಸಾವನ್ನು ತಪ್ಪಿಸಲು ಸರ್ಕಾರ ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಪಾಕ್ಷಿಕದಲ್ಲಿ ಪ್ರತಿ ಮನೆ ಮನೆಗೆ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಬಂದು ಅತಿಸಾರ ಬೇಧಿ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವರು. ಹಾಗೂ ಓಆರ್‍ಎಸ್ ಪಾನಕ ತಯಾರಿಸುವ ಬಗೆಯನ್ನು ತಿಳಿಸಿ ಓಆರ್‍ಎಸ್ ಪೊಟ್ಟಣ ನೀಡುವರು. ಈ ಪಾನಕ ಮಾಡುವುದು ಕಷ್ಟವಲ್ಲ. ಸರಳವಾಗಿದ್ದು, ಇದನ್ನು ಬೇಧಿ ಆಗುವ ಸಮಯ ನೀಡಲೇಬೇಕು. ಇದಿಲ್ಲವಾದರೆ ಮನೆಯಲ್ಲಿ ನೀರನ್ನು ಕಾಯಿಸಿ ಆರಿಸಿ ಅದಕ್ಕೆ ಚಿಟಕಿ ಉಪ್ಪು ಮತ್ತು ಸಕ್ಕರೆ ಸೇರಿಸಿದ ನೀರನ್ನು ನೀಡುತ್ತಿರಬೇಕು ಎಂದರು.
ಮಕ್ಕಳು ಆರೋಗ್ಯವಾಗಿರಲು ಕಾಲಕಾಲಕ್ಕೆ ಲಸಿಕೆಗಳನ್ನು ಹಾಕಿಸಬೇಕು. ಪೊಲೀಯೋ ಲಸಿಕೆ ಅಭಿಯಾನಗಳಿಂದಾಗಿ ಈಗ ದೇಶ ಪೊಲೀಯೋ ಮುಕ್ತವಾಗಿದೆ. ಅದೇ ರೀತಿ ಅತಿಸಾರ ಬೇಧಿ ಮುಕ್ತ ಹೀಗೆ ಎಲ್ಲ ರೋಗಗಳಿಂದ ಮುಕ್ತವಾಗಲು ಎಲ್ಲ ಚುಚ್ಚುಮದ್ದುಗಳನ್ನು ಯಾವುದೇ ಹಿಂಜರಿಕೆ, ನಿರ್ಲಕ್ಷ್ಯ ವಹಿಸದೇ ಮಕ್ಕಳಿಗೆ ಕೊಡಿಸಬೇಕು ಎಂದು ತಾಯಂದಿರಿಗೆ ಕಿವಿ ಮಾತು ಹೇಳಿದರು.
ಪಾಲಿಕೆ ಸದಸ್ಯ ರಮೇಶ್ ಹೆಗಡೆ ಮಾತನಾಡಿ, ಮೊದಲು ಜನರ ರಕ್ಷಣೆ ಮತ್ತು ಆಡಳಿತ ಮಾತ್ರ ಸರ್ಕಾರದ ಕರ್ತವ್ಯವಾಗಿತ್ತು. ಆದರೆ ಈಗ ಎಲ್ಲರ ಕಲ್ಯಾಣ ಮತ್ತು ಆರೋಗ್ಯ ಸರ್ಕಾರದ ಹೊಣೆಯಾಗಿದೆ. ಆದ್ದರಿಂದ ಸರ್ಕಾರ ಆರೋಗ್ಯಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದು, ತಾಯಂದಿರಾದ ನೀವು ಅತಿಸಾರ ಬೇಧಿ ನಿಯಂತ್ರಣ, ಲಸಿಕೆ ಹಾಕಿಸುವುದು ಸೇರಿದಂತೆ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ತಿಳಿದುಕೊಂಡು ಸಮುದಾಯದಲ್ಲಿ ಈ ಕುರಿತು ಉಳಿದವರಿಗೂ ತಿಳಿಸಬೇಕು.
ಕೋವಿಡ್ ಸಮಯದಲ್ಲಿ ವೈದ್ಯರು, ವಿಜ್ಞಾನಿಗಳು, ಜಿಲ್ಲಾಡಳಿತ, ಆಶಾ, ಅಂಗನವಾಡಿ ಕಾರ್ಯಕರ್ತರು, ಪೌರಕಾರ್ಮಿಕರು ತಮ್ಮ ಜೀವದ ಹಂಗು ತೊರೆದು ಸೇವೆ ಸಲ್ಲಿಸಿರುವುದು ಅಭಿನಂದನೀಯ. ನಮ್ಮ ಮಕ್ಕಳಿಗೆ, ಯಾವುದೇ ರೀತಿಯ ಅನಾರೋಗ್ಯ ಬಾರದಂತೆ ತಾಯಂದಿರು, ಎಲ್ಲ ನಾಗರೀಕರು ನೋಡಿಕೊಳ್ಳಬೇಕೆಂದರು.
ಡಿಹೆಚ್‍ಓ ಡಾ.ರಾಜೇಶ್ ಸುರಗಿಹಳ್ಳಿ ಮಾತನಾಡಿ, ಯಾವುದೇ ಮಗುವಿಗೆ ಕನಿಷ್ಟ 2 ವರ್ಷದವರೆಗೆ ತಾಯಿ ಹಾಲನ್ನು ಕುಡಿಸಬೇಕು. ಆರು ತಿಂಗಳವರೆಗೆ ಯಾವುದೇ ಪೂರಕ ಆಹಾರ ನೀಡದೆ ಕೇವಲ ಎದೆಹಾಲು ಕುಡಿಸಬೇಕು. ಮಗುವಿಗೆ ಬೇಧಿ ಶುರುವಾಗಿದೆ ಎಂದು ಎದೆ ಹಾಲು ನಿಲ್ಲಿಸಬಾರದು. ಯಾಕೆಂದರೆ ತಾಯಿಹಾಲಿನಲ್ಲಿ ಸಾಕಷ್ಟು ಪ್ರಮಾಣದ ಪೌಷ್ಟಿಕಾಂಶ ಜೊತೆಗೆ ನೀರು ಇರುವುದರಿಂದ ಇದು ಅತ್ಯುತ್ತಮ ಆಹಾರ. ಶೇ.80 ರಷ್ಟು ವೈರಲ್ ಅತಿಸಾರ ಬೇಧಿಗೆ ರೋಟಾವೈರಸ್ ಲಸಿಕೆ ನೀಡಲಾಗುವುದು. ಸ್ವಚ್ಚತೆ, ಕೈತೊಳೆಯುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು, ಅತಿಸಾರ ಬೇಧಿ ವೇಳೆ ಹಣ್ಣಿನ ರಸ, ನಿಂಬೆ ಪಾನಕ, ಚಿಟಿಕೆ ಉಪ್ಪು ಮತ್ತು ಸಕ್ಕರೆ ಮಿಶ್ರಿತ ನೀರು ಅಥವಾ ಓಆರ್‍ಎಸ್ ಪಾನಕವನ್ನು ನೀಡುತ್ತಿರಬೇಕು ಎಂದು ಸಲಹೆ ನೀಡಿದರು.


ಆರ್‍ಸಿಹೆಚ್ ಅಧಿಕಾರಿ ಡಾ.ನಾಗರಾಜ್ ನಾಯ್ಕ್ ಮಾತನಾಡಿ ಅತಿಸಾರ ಬೇಧಿಯನ್ನು ನಿಯಂತ್ರಿಸಲು ನ.15 ರಿಂದ ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು ಸಮುದಾಯ ಜಾಗೃತಿ ಮತ್ತು ಸೇವೆ ನೀಡಲಾಗುವುದು. ಜಿಲ್ಲೆಯಾದ್ಯಂತ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು ಮನೆ ಮನೆ ಸಮೀಕ್ಷೆ ನಡೆಸಿ 0 ಯಿಂದ 5 ವರ್ಷದೊಳಗಿನ ಮಕ್ಕಳಿರುವ ಮನೆಯನ್ನು ಗುರುತಿಸಿ, ಓಆರ್‍ಎಸ್ ಪ್ಯಾಕೆಟ್ ನೀಡುವರು. ಅತಿಸರ ಲಕ್ಷಣವುಳ್ಳ ಮಕ್ಕಳಿದ್ದಲ್ಲಿ ಓಆರ್‍ಎಸ್ ಜೊತೆ ಝಿಂಕ್ ಮಾತ್ರೆ ನೀಡುವರು. 14 ದಿನಗಳವರೆಗೆ ಮಾತ್ರೆ ತೆಗೆದುಕೊಳ್ಳಬೇಕು. ಜೊತೆಗೆ ಸ್ವಚ್ಚತೆ, ನೈರ್ಮಲ್ಯ ಕಾಪಾಡಿಕೊಳ್ಳಲು ತಿಳುವಳಿಕೆ ನೀಡಲಾಗುವುದು ಎಂದರು.
ಮಕ್ಕಳಲ್ಲಿ ಕಾಣುವ ಪಕ್ಕೆ ನೋವು-ಬಾಲ್ಯಾವಧಿ ನ್ಯೂಮೋನಿಯಾ ನಿರ್ವಹಣೆ ಕಾರ್ಯಕ್ರಮದಡಿ ಸಮುದಾಯಲ್ಲಿ ಅರಿವು ಮೂಡಿಸಲಾಗುವುದು. ಪಕ್ಕೆ ನೋವು, ಶ್ವಾಸಕೋಸದ ಸೋಂಕಿರುವ ಮಕ್ಕಳಿಗೆ ತಕ್ಷಣ ಚಿಕಿತ್ಸೆ ನೀಡಬೇಕು. ಹಾಗೂ ಎಲ್ಲಾ ಅರ್ಹ ಮಕ್ಕಳಿಗೆ 3 ಡೋಸ್ ಪಿಸಿವಿ ಲಸಿಕೆಯನ್ನು ತಪ್ಪದೆ ನೀಡಬೇಕು.
ರಾಜ್ಯವನ್ನು ಅಪೌಷ್ಟಿಕ ಮುಕ್ತ ರಾಜ್ಯವನ್ನಾಗಿಸಲು ರಕ್ತಹೀನತೆ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಯನ್ನು ಸಹ ಅನುಷ್ಟಾನಗೊಳಿಸಲಾಗುತ್ತಿದ್ದು, ಗರ್ಭಿಣಿಯರು, ಮಕ್ಕಳು, ಹದೆಹರೆಯದ ಹೆಣ್ಣು-ಗಂಡುಮಕ್ಕಳು, ಎಲ್ಲ ಮಹಿಳೆಯರು, ಪುರುಷರು ಮತ್ತು ಅಪೌಷ್ಟಿಕ ಮಕ್ಕಳು ಈ ಯೋಜನೆಯ ಫಲಾನುಭವಿಗಳಾಗಿದ್ದು , ಇವರಿಗೆ ರಕ್ತ ಪರೀಕ್ಷೆ ನಡೆಸಿ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದರು.
ಇದೇ ವೇಳೆ ಸಿಡಿಪಿಓ ಚಂದ್ರಪ್ಪ ಓಆರ್‍ಎಸ್ ಪಾನಕ ತಯಾರಿಕೆ ವಿಧಾನವನ್ನು ತೋರಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್, ಆರೋಗ್ಯ ಶಿಕ್ಷಣಾಧಿಕಾರಿ ಅಕ್ತರ್, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು, ತಾಯಂದಿರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...