CM Siddharamaiah ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ. ಎಲ್ಲಾ ಗ್ರಾಮಗಳು ಪೋಡಿಮುಕ್ತ ಗ್ರಾಮಗಳಾಗಬೇಕು. ಕೂಡಲೇ ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಕೆರೆ-ಕಟ್ಟೆ ಒತ್ತುವರಿ ತೆರವುಗೊಳಿಸಲು ಕೂಡಲೇ ಕ್ರಮವಹಿಸಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯ ಮಂತ್ರಿಗಳು ಪರವಾನಗಿ ಭೂಮಾಪಕರ ಖಾಯಂ ಮಾಡಲು ಗಂಭೀರ ಕ್ರಮ ವಹಿಸುವುದರ ಜೊತೆಗೆ 36 ಎ.ಡಿ.ಎಲ್.ಆರ್ ಗಳ ನೇಮಕ ಮಾಡಲಾಗುವುದು ಎಂದು ತಿಳಿಸಿದರು.
ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆ ರೀತಿ ಇದೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ. ಕೃಷ್ಣಬೈರೇಗೌಡರು ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡು, ನಾಲಗೆ ತುದಿಯಲ್ಲಿ ಅಂಕಿ ಅಂಶ ಇಟ್ಟುಕೊಂಡಿರುವ ಮಂತ್ರಿಗಳು. ಕೇವಲ ಮಂತ್ರಿ ಆದರೆ ಸಾಲದು. ಪರಿಣತಿ, ಕಾಳಜಿ ಇರಬೇಕು. ಇವೆರಡೂ ಕೃಷ್ಣಬೈರೇಗೌಡ ಅವರಲ್ಲಿದೆ ಅವರೊಬ್ಬ ಸಮರ್ಥ ಮಂತ್ರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
CM Siddharamaiah ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿ ಕಂದಾಯ ಇಲಾಖೆಯ, ನೌಕರರ ಬಹಳಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದೇನೆ. ಪೂರ್ತಿ ಸಮಸ್ಯೆ ಬಗೆಹರಿದಿಲ್ಲ ಎನ್ನುವ ಬೇಸರ ನನಗೂ ಇದೆ. ತಹಶೀಲ್ದಾರ್, ಎಸಿ ಕಚೇರಿಗಳಲ್ಲಿ ಸುಗಮವಾಗಿ, ಪ್ರಾಮಾಣಿಕವಾಗಿ ಕೆಲಸಗಳು ಆದರೆ ನಾಡಿನ ಜನತೆ, ರೈತ ಸಮುದಾಯ ಅತ್ಯಂತ ನೆಮ್ಮದಿಯಾಗಿರುತ್ತದೆ ಕಂದಾಯ ಇಲಾಖೆಗೆ ಅಗತ್ಯ ಇರುವಷ್ಟು ಹಣ ಕೊಟ್ಟಿದ್ದೇವೆ, ಮುಂದೆಯೂ ಕೊಡುತ್ತೇವೆ. ಅಗತ್ಯ ಸಿಬ್ಬಂದಿ ಬಲವನ್ನೂ ಕೊಟ್ಟಿದ್ದೇವೆ. ಅಗತ್ಯ ಇದ್ದರೆ ಮತ್ತೂ ಕೊಡುತ್ತೇನೆ. ಖಾಲಿ ಇರುವ ಎಲ್ಲಾ ಸರ್ವೇಯರ್ ಹುದ್ದೆಗಳ ನೇಮಕಾತಿ ಅತ್ಯಂತ ಪಾರದರ್ಶಕವಾಗಿ ಆಗಿದೆ. ಸದ್ಯದಲ್ಲೇ ನೇಮಕಾತಿ ಪತ್ರವನ್ನೂ ಕೊಡುತ್ತೇವೆ ಎಂದರು. ಹಿಂದೆ ಗೋವಿಂದೇಗೌಡರು ಅವರ ಕಾಲದಲ್ಲಿ ಪ್ರಾಮಾಣಿಕವಾಗಿ ಒಂದು ಲಕ್ಷ ಶಿಕ್ಷಕರ ನೇಮಕಾತಿ ಆಗಿರುವ ರೀತಿಯಲ್ಲೇ ಕೃಷ್ಣಬೈರೇಗೌಡರು ಸರ್ವೇಯರ್ ಗಳ ನೇಮಕಾತಿ ಮಾಡಿದ್ದಾರೆ.
ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕಾಗಿ ಇಲಾಖೆಯ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಶ್ರಮಿಸಿ, ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುವುದೇ ನಿಜವಾದ ಪುಣ್ಯದ ಕಾರ್ಯ ಎಂದು ಕರೆ ನೀಡುವುದರೊಂದಿಗೆ ಪ್ರತೀ ವರ್ಷ ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಆಚರಿಸಬೇಕು ಎಂದು ಸೂಚಿಸಿದರು.
ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಸಚಿವರಾದ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕ ರಿಜ್ವಾನ್ ಅರ್ಷದ್ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಕಂದಾಯ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಸೇರಿದಂತೆ ಗಣ್ಯರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
