Ambedkar Jayanti 2025 ನಮ್ಮ ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ನಮ್ಮ ಸರ್ಕಾರ ಅತ್ಯಂತ ಗೌರವ, ನಮ್ರತೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸುತ್ತಿದೆ. ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅನ್ಯಾಯದಿಂದ ಮುಕ್ತಿ ಪಡೆಯಬೇಕೆಂದು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದರು ಎಂದು ಡಾ.ಅಂಬೇಡ್ಕರ್ ಜನ್ಮದಿನಾಚರಣೆ ಉದ್ಘಾಟಿಸಿ ಮಾತನಾಡುತ್ತಿದ್ದರು.
ಮಹಾನ್ ಮೇಧಾವಿಯಾಗಿದ್ದ ಅಂಬೇಡ್ಕರ್, ತಮ್ಮ ಸ್ವಾರ್ಥಕ್ಕಾಗಿ ಓದಿಕೊಳ್ಳದೆ ಶೋಷಿತರ, ಅಸ್ಪೃಶ್ಯತೆಯಿಂದ ನರಳುತ್ತಿರುವ ಜನರಿಗೆ ವಿಮೋಚನೆ ನೀಡಲೆಂದೇ ಜ್ಞಾನಾರ್ಜನೆ ಮಾಡಿಕೊಂಡಿದ್ದರು. ದೇಶದ ಕೆಲವೇ ಮೇಧಾವಿಗಳಲ್ಲಿ ಅವರೂ ಒಬ್ಬರು. ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ. ಎಲ್ಲರೂ ಮನುಷ್ಯರಾಗಿ ಬದುಕಬೇಕು. ಸಮಾಜದಲ್ಲಿ ಎಲ್ಲರಿಗೂ ಸಮಾನತೆ ದೊರಕಬೇಕು. ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಬೇಕು. ಹಾಗಾದಾಗ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುತ್ತದೆ. ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು. ಅಸ್ಪೃಶ್ಯತೆ ನಾಶವಾಗಬೇಕು ಎಂದು ಅಂಬೇಡ್ಕರ್ ಶ್ರಮಿಸಿದ್ದರು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವ್ಯಕ್ತಿತ್ವ ಗುಣಗಾನ ಮಾಡಿದರು.
ಇತ್ತೀಚೆಗೆ ಕೆಲವರು ಮಹಾತ್ಮಾ ಗಾಂಧಿ ಹಾಗೂ ಅಂಬೇಡ್ಕರ್ ಅವರನ್ನು ತಮಗೆ ಸೇರಿದವರೆಂದು ಬಿಂಬಿಸಲು ಪ್ರಾರಂಭಿಸಿದ್ದಾರೆ. ಮಹಾತ್ಮ ಗಾಂಧಿಯವರನ್ನು ಕೊಂದವರು, ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ ಮನುವಾದಿಗಳೇ ಇಂದು ಅವರನ್ನು ತಮ್ಮ ಸ್ವಂತ ಎನ್ನಲು ಪ್ರಾರಂಭಿಸಿದ್ದಾರೆ. ಸಂವಿಧಾನ ಜಾರಿಗೆ ಬಂದ ನಾಲ್ಕೈದು ದಿನಗಳಲ್ಲೇ ‘ದಿ ಆರ್ಗನೈಜರ್’ ಪತ್ರಿಕೆಯಲ್ಲಿ ವಿರೋಧ ಮಾಡಿ ಬರೆದಿದ್ದರು. ಈಗ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿತ್ತು ಎಂದು ಮಾತನಾಡುತ್ತಾರೆ. ಅಂಬೇಡ್ಕರ್ ಅವರೇ ನನ್ನನ್ನು ಸೋಲಿಸಿದವರು ಸಾವರ್ಕರ್ ಮತ್ತು ಕಮ್ಯುನಿಸ್ಟ್ ನಾಯಕ ಎಸ್.ಎ ಡಾಂಗೆ ಎಂದು ಪತ್ರ ಬರೆದಿದ್ದರು.
Ambedkar Jayanti 2025 ಬಿಜೆಪಿ ಸ್ವಾರ್ಥಕ್ಕಾಗಿ ಮಹಾತ್ಮಾ ಗಾಂಧಿ, ಸರ್ದಾರ್ ವಲ್ಲಭಭಾಯ್ ಪಟೇಲ್, ಅಂಬೇಡ್ಕರ್ ಅವರನ್ನು ತಮ್ಮದೇ ಸ್ವಂತ ಎಂದು ಬಿಂಬಿಸಲು ಪ್ರಯತ್ನಿಸುತ್ತಿದೆ. ಅಂಬೇಡ್ಕರ್ ಅವರು ‘ನಾನು ಹಿಂದೂ ಆಗಿ ಹುಟ್ಟಿದ್ದೇನೆ ಆದರೆ ಹಿಂದೂವಾಗಿ ಸಾಯಲಾರೆ’ ಎಂದು ಹೇಳಿದ್ದರು. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಿಸಿ, ಅದು ಸಾಧ್ಯವಾಗುವುದಿಲ್ಲ ಎಂದು ಅರಿವಾದ ನಂತರ ಹಿಂದೂ ಧರ್ಮವನ್ನು ತ್ಯಜಿಸಿ, ಮಾನವೀಯತೆ ಮತ್ತು ಸಮಾನತೆ ಇದ್ದ ಭೌದ್ಧ ಧರ್ಮವನ್ನು ಸ್ವೀಕರಿಸಿದರು.
ಬಿಜೆಪಿಯವರು ಜವಾಹಾರ್ ನೆಹರೂ ಅವರನ್ನು ವಿರೋಧಿಸುತ್ತಾರೆ. ಅಂಬೇಡ್ಕರ್ ಅವರನ್ನು ನೆಹರೂ ವಿರೋಧಿಸಲಿಲ್ಲ. ಹಾಗಿದ್ದರೆ, ಅಂಬೇಡ್ಕರ್ ಅವರನ್ನು ಸಂವಿಧಾನ ಬರೆಯಲು ಆಯ್ಕೆ ಮಾಡುತ್ತಿರಲಿಲ್ಲ. ಹಿಂದೂ ಕೋಡ್ ಬಿಲ್ ತಂದಾಗ ನೆಹರೂ ಅದರ ಪರವಾಗಿಯೇ ಇದ್ದರು. ನಮ್ಮಲ್ಲಿರುವ ಕೆಲವು ಶಕ್ತಿಗಳು ನೆಹರೂ ಅವರಿಗೆ ಅದನ್ನು ಜಾರಿ ಮಾಡಲು ಬಿಡಲಿಲ್ಲ. ಆದರೆ ಹಿಂದೂ ಕೋಡ್ ಬಿಲ್ ನಲ್ಲಿರುವ ಅಂಶಗಳನ್ನು ನೆಹರೂ ಅವರು ಅವರ ಅಧಿಕಾರದ ಅವಧಿಯಲ್ಲಿ ಜಾರಿ ಮಾಡುವ ಪ್ರಯತ್ನ ಮಾಡಿದ್ದರು ಎಂದು ಸಿದ್ಧರಾಮಯ್ಯ ಹೇಳಿದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು