Madhu Bangarappa ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಶಿಕ್ಷಕರ ಪ್ರೋತ್ಸಾಹದ ಜೊತೆಗೆ ಪೋಷಕರ ಸಹಕಾರವೂ ಅತ್ಯಗತ್ಯವಾಗಿದೆ. ಶಾಲೆಗಳಲ್ಲಿ ನೈತಿಕ ಶಿಕ್ಷಣಕ್ಕೆ ಒತ್ತುಕೊಟ್ಟಿರುವುದರಿಂದ ಮಕ್ಕಳಿಗೆ ಪೋಷಕರ, ಹಿರಿಯರ ಬಗ್ಗೆ ಗೌರವದ ಭಾವನೆಗಳು ಮೂಡಲಿವೆ. ಅಲ್ಲದೇ ಭಾವನಾತ್ಮಕ ಸಂಬಂಧಗಳು ಗಟ್ಟಿಗೊಳ್ಳುತ್ತವೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.
ಅವರು ಇಂದು ನಗರದ ಡಿ.ವಿ.ಎಸ್. ಮಹಾವಿದ್ಯಾಲಯದ ಸಿಂಗಾರ ಸಭಾಂಗಣದಲ್ಲಿ 2022-23 ಮತ್ತು 2023-24ನೇ ಸಾಲಿನಲ್ಲಿ 10ನೇ ತರಗತಿಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆದು ಸಾಧನೆ ಮಾಡಿದ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗಾಗಿ ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭಕ್ಕೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು.
ಧಾರವಾಡ ಮತ್ತು ಕಲಬುರಗಿ ವಿಭಾಗಗಳ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಸುಧಾರಣಾ ಕ್ರಮಗಳು, ಗುಣಾತ್ಮಕ ಶಿಕ್ಷಣ ಅನುಷ್ಠಾನ ಕ್ರಮಗಳ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿದೆ. ಎಲ್.ಕೆ.ಜಿ.ಯಿಂದ ಪದವಿಪೂರ್ವ ಶಿಕ್ಷಣದವರೆಗೆ ವ್ಯಾಸಂಗ ಮಾಡುವ ಎಲ್ಲಾ ಮಕ್ಕಳಿಗೆ ಉಚಿತ ನೋಟ್ಪುಸ್ತಕ ಮತ್ತು ಪಠ್ಯಪುಸ್ತಕವನ್ನು ವಿತರಿಸಲು ಕ್ರಮ ವಹಿಸಲಾಗುತ್ತಿದೆ. ಈವರೆಗೆ ಎಸ್.ಎಸ್.ಎಲ್.ಸಿ. ವರೆಗಿನ ವಿದ್ಯಾರ್ಥಿಗಳಿಗೆ ಮಾತ್ರ ಪಠ್ಯಪುಸ್ತಕ, ನೋಟ್ ಪುಸ್ತಕ, ಬಿಸಿಯೂಟ, ಹಾಲು, ಮೊಟ್ಟೆ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗುತ್ತಿತ್ತು ಎಂದ ಅವರು, ಕಲಿಕೆಯಲ್ಲಿ ದ್ವಿಭಾಷಾ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಅಂತೆಯೇ ಆರಂಭದಿಂದಲೇ ಕಂಫ್ಯೂಟರ್ ಕಲಿಕೆಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದರು.
ಈಗಾಗಲೇ ನಿರ್ಣಯ ಕೈಗೊಂಡಿರುವಂತೆ 500ಕೆ.ಪಿ.ಎಸ್. ಶಾಲೆಗಳ ಜೊತೆಗೆ ಹೆಚ್ಚುವರಿಯಾಗಿ 300ಕೆ.ಪಿ.ಎಸ್. ಶಾಲೆಗಳು ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ಅನುದಾನದಿಂದ 100ಕೆ.ಪಿ.ಎಸ್. ಶಾಲೆಗಳು ಸೇರಿದಂತೆ ಒಟ್ಟು 900ಕೆ.ಪಿ.ಎಸ್. ಶಾಲೆಗಳನ್ನು ಮುಂದಿನ ವರ್ಷಾರಂಭದಲ್ಲಿ ಆರಂಭಿಸಲು ಉದ್ದೇಶಿಸಲಾಗಿದೆ. ಅದಕ್ಕಾಗಿ ಡಿ.ಪಿ.ಆರ್ ಸಿದ್ದಗೊಳ್ಳುತ್ತಿದ್ದು, ಟೆಂಡರ್ ಪ್ರಕ್ರಿಯೆ ಕೂಡ ಪ್ರಗತಿಯಲ್ಲಿದೆ. ಯೋಜನೆಯ ಅಧಿಕೃತ ಉದ್ಘಾಟನೆಗಾಗಿ ಮಾನ್ಯ ಮುಖ್ಯಮಂತ್ರಿಗಳಲ್ಲಿ ದಿನಾಂಕ ನಿಗಧಿಗೊಳಿಸಿಕೊಡಲು ಕೋರಲಾಗಿದೆ.
Madhu Bangarappa ಪ್ರಸ್ತುತ ಬಂದಿರುವ ಪರೀಕ್ಷಾ ಫಲಿತಾಂಶವೂ ಕೂಡ ಸಮಾಧಾನಕರವಾಗಿದೆ. ಶಿಕ್ಷಣ ಇಲಾಖೆ ಸಮಸ್ಯೆಗಳಿಂದ ಮುಕ್ತವಾಗಿಲ್ಲ. ಆದಾಗ್ಯೂ ಇತ್ತೀಚಿನ ಶಿಕ್ಷಣ ಕ್ಷೇತ್ರದಲ್ಲಿನ ಮಹತ್ವದ ಬದಲಾವಣೆಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದ ಅವರು, ಶಿಕ್ಷಣ ಇಲಾಖೆಯ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗುವ ವಿಷಯಗಳನ್ನು, ಸಮಸ್ಯೆ-ಸವಾಲುಗಳನ್ನು ಗಮನಿಸಿ, ಅಗತ್ಯ ಕ್ರಮ ವಹಿಸಲಾಗುತ್ತಿದೆ ಎಂದರು.
ಶಿಕ್ಷಣ ಇಲಾಖೆಯ ಕಾರ್ಯಕ್ರಮಗಳ ವ್ಯವಸ್ಥಿತ ಅನುಷ್ಠಾನಕ್ಕೆ ಯಾವುದ ಹಣಕಾಸಿನ ಅಡಚಣ ಇಲ್ಲ. ದೈಹಿಕ ಶಿಕ್ಷಣ ಮತ್ತು ಸಂಗೀತ ಶಿಕ್ಷಕರ ನೇಮಕಕ್ಕೆ ಕ್ರಮವಹಿಸಲಾಗುವುದು. 1995ರ ನಂತರದ ಖಾಸಗಿ ಶಾಲೆಗಳನ್ನು ಅನುದಾನದ ವ್ಯಾಪ್ತಿಗೊಳಪಡಿಸಲು ಯೋಚಿಸಲಾಗುತ್ತಿದೆ. ಶಿಕ್ಷಕರ ಕೊರತೆಯನ್ನು ನೀಗಿಸುವಲ್ಲಿ 12000ಶಿಕ್ಷಕರ ನೇಮಕಾತಿಗೆ ಕ್ರಮ ಇವೆಲ್ಲವುಗಳು ಪ್ರತಿ ಮಗುವಿನ ಕಲಿಕೆಯಲ್ಲಿ ಪೂರಕ ವಾತಾವರಣ ನಿರ್ಮಾಣಗೊಳ್ಳಲಿದೆ ಎಂಬ ಆಶಯ ತಮಗಿದೆ ಎಂದರು.
ಮಕ್ಕಳಿಗೆ ಉಚಿತ ಮತ್ತು ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಸರ್ಕಾರ ಬದ್ಧವಾಗಿದೆ. ಹಲವು ದಶಕಗಳ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಮನುಷ್ಯ ಮತ್ತು ವನ್ಯ ಪ್ರಾಣಿಗಳ ಸಂಘರ್ಷಕ್ಕೆ ನಿಯಂತ್ರಣ ಕ್ರಮ ವಹಿಸಲಾಗುತ್ತಿದೆ. ಚಂದ್ರಗುತ್ತಿ ದೇವಳ ಅಭಿವೃದ್ಧಿಗೆ ಪ್ರಾಧಿಕಾರ ರಚಿಸಲಾಗಿದ್ದು, ಶೀಘ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇನ್ನಷ್ಟು ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸಲಾಗುವುದು. ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ನಿಯಂತ್ರಣಕ್ಕೂ ಕ್ರಮ ವಹಿಸಲಾಗುವುದು ಎಂದರು.
ಜಿಲ್ಲೆಯ ಮಲೆನಾಡು ಭಾಗದ ಜನರಲ್ಲಿ ಆತಂಕ ಮೂಡಿಸಿರುವ ಮಂಗನಕಾಯಿಲೆ, ಅಡಿಕೆ ಬೆಳೆಗೆ ಎಲೆಚುಕ್ಕೆ ರೋಗ ಅವುಗಳ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿದ್ದು, ಸಂಶೋಧನಾ ಚಟುವಟಿಕೆಗಳಿಗೆ ಸರ್ಕಾರದ ಅನುದಾನ ಬಿಡುಗಡೆಗೊಳಿಸಿದೆ. ಗಾಂಜಾ, ಅಫೀಮು ಮತ್ತಿತರ ಮಾದಕ ವಸ್ತುಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ನಿಯಂತ್ರಣ ಕಾರ್ಯದಲ್ಲಿ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು. ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ಜನಸ್ನೇಹಿಯಾಗಿವೆ. ಇದರಿಂದಾಗಿ ರಾಜ್ಯದ ಜಿಡಿಪಿ ದರದಲ್ಲಿ ಗಣನೀಯ ಏರಿಕೆಯಾಗಿದೆ ಎಂದರು.
ಈ ಸಂದರ್ಭದಲ್ಲಿ ಆರ್.ಪ್ರಸನ್ನಕುಮಾರ್, ಚಂದ್ರಭೂಪಾಲ, ಬಂಡಿ ರಾಮಚಂದ್ರ, ರವಿಕುಮಾರ್, ಮಧು, ದೇವಿಪ್ರಸಾದ್, ಜಿ.ಡಿ.ಮಂಜುನಾಥ್, ಬಷೀರ್ ಅಹ್ಮದ್ ಸೇರಿದಂತೆ ಹಲವರು ಗಣ್ಯರು ಉಪಸ್ಥಿತರಿದ್ದರು.
Madhu Bangarappa ಶಾಲೆಗಳಲ್ಲಿ ನೈತಿಕ ಶಿಕ್ಷಣಕ್ಕೆ ಒತ್ತು- ಸಚಿವ ಮಧು ಬಂಗಾರಪ್ಪ
Date:
