Monday, February 2, 2026
Monday, February 2, 2026

ಸಾರಿಗೆ ಬಸ್ ಗಳ ನಿರ್ವಹಣೆ ಬಗ್ಗೆ ನಿಯಂತ್ರಣಾಧಿಕಾರಿಗಳೇ ಮುತುವರ್ಜಿವಹಿಸಿ, ಗ್ರಾಮೀಣರಿಗೆ ಅನುಕೂಲಮಾಡಿ- ದಿನೇಶ್ ಗೊಳಿಗೌಡ

Date:

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿನ ವಿದ್ಯಾರ್ಥಿಗಳು ಪಟ್ಟಣಗಳಿಗೆ ತೆರಳಲು, ಅನಾರೋಗ್ಯ ಪೀಡಿತರಾಗಿರುವ ವಯೋವೃದ್ಧರು ಚಿಕಿತ್ಸೆಗಾಗಿ ತೆರಳಲು ಸಕಾಲದಲ್ಲಿ ಬಸ್ಸುಗಳಿಲ್ಲದೆ ಜನಸಾಮಾನ್ಯರು ತೀವ್ರ ತರಹದ ಸಮಸ್ಯೆ ಎದುರಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ.

ನಿಗಮದ ವತಿಯಿಂದ ಸಾರ್ವಜನಿಕ ಸೇವೆ ಬಿಡಲಾಗಿರುವ ಬಸ್ಸುಗಳು, ಅವುಗಳ ನಿಲುಗಡೆ, ಹೊಸಮಾರ್ಗಗಳು, ಅಲ್ಲಿನ ಸಮಸ್ಯೆಗಳ ಕುರಿತು ನಿಯಂತ್ರಣಾಧಿಕಾರಿಗಳು ತಮ್ಮ ಹಂತದಲ್ಲಿಯೇ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ತಕ್ಷಣದ ಪರಿಹಾರವನ್ನು ಕಂಡುಕೊಳ್ಳುವಂತೆ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್‌ಗೊಳಿಗೌಡ ಅವರು ಹೇಳಿದರು.

ಅವರು ಜಿಲ್ಲಾ ಪಂಚಾಯಿತಿ ಅಬ್ದುಲ್‌ನಜೀರ್‌ಸಾಬ್‌ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಗ್ಯಾರಂಟಿ ಯೋಜನೆಗಳ ವ್ಯವಸ್ಥಿತ ಅನುಷ್ಟಾನಕ್ಕಾಗಿ ರಾಜ್ಯ ಸರ್ಕಾರ ಇದುವರೆಗೂ 1 ಲಕ್ಷದ 10 ಸಾವಿರ ಕೋಟಿ ರೂ. ಹಣ ವ್ಯಯಿಸಿದೆ. ಇದರಿಂದ ರಾಜ್ಯದ ತಲಾದಾಯ ಕೂಡ ಹೆಚ್ಚಲು ಸಹಕಾರಿಯಾಗಿದೆ. ಶಿವಮೊಗ್ಗ ಜಿಲ್ಲೆಗೆ 3023.95 ಕೋಟಿ ರೂ.ಹಣವನ್ನು ವೆಚ್ಚ ಮಾಡುವ ಮುಖಾಂತರ ಜಿಲ್ಲೆಯ ಜನತೆಗೆ ಬದುಕಿನ ಗ್ಯಾರಂಟಿಯನ್ನು ನೀಡಿದೆ ಎಂದರು.

2013-14ರಲ್ಲಿ ರಾಜ್ಯದ ತಲಾದಾಯ 1,05,000 ರೂ.ಗಳಷ್ಟಿತ್ತು. ಕಳೆದ ಮೂರು ತಿಂಗಳ ಹಿಂದೆ ಕೇಂದ್ರ ಸರ್ಕಾರವೇ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ ರಾಜ್ಯದ ತಲಾದಾಯ 2,04,485 ರೂ.ಗಳಿಗೆ ಏರಿಕೆಯಾಗಿದೆ.

ಇದಕ್ಕೆ ಗ್ಯಾರಂಟಿಗಳೇ ಪ್ರಮುಖ ಕಾರಣ. ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಭರವಸೆ, ಭದ್ರತೆ ಮತ್ತು ಗೌರವವನ್ನು ತರಲು ನೆರವಾಗಿವೆ. ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಇದು ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರ ದಿನನಿತ್ಯದ ಬದುಕಿಗೆ ನೇರ ಸ್ಪರ್ಶ ನೀಡಿವೆ. 1,24,10,685 ಮಹಿಳೆಯರಿಗೆ ಪ್ರತಿ ತಿಂಗಳು 2500 ಕೋಟಿ ರೂ. ಹಣವನ್ನು ನೇರವಾಗಿ ಅವರ ಖಾತೆಗೆ ಹಾಕಲಾಗುತ್ತಿದೆ. ಇದುವರೆಗೆ ಗೃಹಲಕ್ಷ್ಮಿ ಯೋಜನೆಯಡಿ 57,381 ಕೋಟಿ ರೂ. ಹಣವನ್ನು ಸರ್ಕಾರ ಪಾವತಿಸುವ ಮೂಲಕ ಪ್ರತಿ ಮಹಿಳೆಗೆ 48 ಸಾವಿರ ಗೃಹಲಕ್ಷ್ಮಿ ಹಣ ತಲುಪಿದೆ ಎಂದು ಮಾಹಿತಿ ನೀಡಿದರು.
ಗೃಹಜ್ಯೋತಿ ಯೋಜನೆಯಡಿ 21,500 ಕೋಟಿ, ಅನ್ನಭಾಗ್ಯ ಯೋಜನೆಯಡಿ 18 ಸಾವಿರ ಕೋಟಿ ರೂ., ಯುವನಿಧಿ ಯೋಜನೆಯಡಿ 800 ಕೋಟಿ ರೂ.ಹಣವನ್ನು ವೆಚ್ಚ ಮಾಡಲಾಗಿದೆ. ಶಕ್ತಿ ಯೋಜನೆಯಡಿ 656 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು ಇದರ ಟಿಕೆಟ್ ಮೌಲ್ಯ 17 ಸಾವಿರ ಕೋಟಿ ರೂ.ಗಳನ್ನು ಸಾರಿಗೆ ನಿಗಮಗಳಿಗೆ ಸರ್ಕಾರ ಭರಿಸಿದೆ. ದರ ಏರಿಕೆ, ಉದ್ಯೋಗ ಅಸ್ಥಿರತೆ ಮತ್ತು ಆದಾಯ ಅಸಮಾನತೆಗಳ ನಡುವೆ ಸಂಕಷ್ಟದಲ್ಲಿದ್ದ ಕುಟುಂಬಗಳಿಗೆ ಈ ಯೋಜನೆಗಳು ಆರ್ಥಿಕ ಭರವಸೆಯಾಗಿ ಪರಿಣಮಿಸಿವೆ. ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ಹಾವಳಿ ಹೆಚ್ಚಾಗಿದ್ದು ಸರ್ಕಾರಿ ಬಸ್ ಗಳು ಸಕಾಲಕ್ಕೆ ಬರುತ್ತಿಲ್ಲ. ಇದರಿಂದ ಶಕ್ತಿ ಯೋಜನೆಗೆ ಹಿನ್ನಡೆಯಾಗಿದೆ ಎಂಬ ಮಾತುಗಳು ಕೇಳಿಬಂದಿದೆ. ಅಧಿಕಾರಿಗಳು ಕೂಡಲೇ ಈ ಸಂಬಂಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಸೊರಬ, ತೀರ್ಥಹಳ್ಳಿ, ಹೊಸನಗರದಲ್ಲಿ ಡಿಫೋಗಳ ಸ್ಥಾಪನೆ ಸಂಬಂಧ ಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಜನತೆಗೆ 3023.95 ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ ಮಾಡಲಾಗಿದೆ. ಜಿಲ್ಲೆಯ 3,88,029 ಮಹಿಳೆಯರಿಗೆ ತಲಾ 2 ಸಾವಿರದಂತೆ 48 ಸಾವಿರ ಹಣ ಪಾವತಿಸಿದೆ. ಗೃಹಲಕ್ಷ್ಮಿ ಯೋಜನೆಯಡಿ 1805.56 ಕೋಟಿ ರೂ. ಹಂಚಿಕೆ ಮಾಡಲಾಗಿದೆ.

ದಿನೇಶ್ ಗೂಳಿಗೌಡ.
.ಗ್ಯಾರಂಟಿಗಳ ಜಿಲ್ಲಾ ಚಿತ್ರಣ : ಗೃಹಲಕ್ಷ್ಮಿ ಯೋಜನೆಯಡಿ 3,88,029 ಮನೆಯ ಯಜಮಾನಿಯರ ಬ್ಯಾಂಕ್ ಖಾತೆಗೆ 1805.56 ಕೋಟಿ ರೂ. ಹಣವನ್ನು ಜಮೆ ಮಾಡಲಾಗಿದೆ. ಪ್ರತಿ ಫಲಾನುಭವಿಗಳಿಗೆ ತಲಾ 2000ದಂತೆ ಒಟ್ಟು 48 ಸಾವಿರ ರೂ.ಗಳನ್ನು ಸರ್ಕಾರದ ನೀಡಿದೆ. ಈ ಯೋಜನೆಯಡಿ ನೋಂದಾಯಿತರಲ್ಲಿ 4717 ಮಂದಿ ಮೃತಪಟ್ಟಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 4,82,276 ಕುಟುಂಬಗಳಿಗೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗಿದೆ. ಇದಕ್ಕಾಗಿ 588.44 ಕೋಟಿ ಹಣ ವೆಚ್ಚವಾಗಿದ್ದು ಇದನ್ನು ರಾಜ್ಯ ಸರ್ಕಾರ ವಿದ್ಯುತ್ ನಿಗಮ ಕಂಪನಿಗೆ ಪಾವತಿಸಿದೆ. ಅನ್ನಭಾಗ್ಯ ಯೋಜನೆಯಡಿ 3,76,954 ಕಾರ್ಡ್ ಗಳು ನೋಂದಣಿಯಾಗಿದ್ದು 2,23,13,229 ಸದಸ್ಯರು ಫಲಾನುಭವಿಗಳಿದ್ದಾರೆ. ಅವರಿಗೆ ಉಚಿತ ಪಡಿತರ ವಿತರಣೆ ಮಾಡಲಾಗುತ್ತಿದ್ದು 360.55 ಕೋಟಿ ರೂ. ಹಣವನ್ನು ಸರ್ಕಾರ ವ್ಯಯಿಸಿದೆ. ಶಕ್ತಿ ಯೋಜನೆಯಡಿ 6,50,07,631 ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಿದ್ದಾರೆ.

ಇದರ ಟಿಕೆಟ್ ಮೌಲ್ಯ 244.98 ಕೋಟಿ ರೂ.ಹಣವನ್ನು ಸಾರಿಗೆ ನಿಗಮಕ್ಕೆ ಪಾವತಿ ಮಾಡಲಾಗಿದೆ. ಯೋಜನೆ ಜಾರಿಯಾದ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ 64.1% ಹೆಚ್ಚಳವಾಗಿದೆ. ಪ್ರಯಾಣಿಕರ ಅವಶ್ಯಕತೆಗೆ ಅನುಗುಣವಾಗಿ 50 ಬಸ್ ಗಳನ್ನು ಹೆಚ್ಚುವರಿಯಾಗಿ ಒದಗಿಸಲಾಗಿದೆ.

ಒಟ್ಟು ಪ್ರಯಾಣಿಕರಲ್ಲಿ 20.10% ಮಹಿಳೆಯರು‌ ಉದ್ಯೋಗ‌ ನಿಮಿತ್ತ ಸಂಚರಿಸಿದರೆ, 28.58% ಹೆಣ್ಣುಮಕ್ಕಳು ಶಾಲಾ ಕಾಲೇಜುಗಳಿಗೆ ಶಾಲೆ ಕಾಲೇಜುಗಳಿಗೆ, 10.75% ಮಂದಿ ಧಾರ್ಮಿಕ ಕ್ಷೇತ್ರಗಳಿಗೆ 5.15% ಮಹಿಳೆಯರು ಪ್ರವಾಸಿ ತಾಣಗಳಿಗೆ ಪ್ರಯಾಣಿಸಿದ್ದಾರೆ.

ಯುವನಿಧಿ ಯೋಜನೆಯಡಿ ನೋಂದಾಯಿತ 8233 ಯುವಕ ಯುವತಿಯರಿಗೆ, 24.41 ಕೋಟಿ ರೂ.ನಷ್ಟು ನಿರುದ್ಯೋಗ ಭತ್ಯೆ ನೀಡಲಾಗಿದೆ ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌ ಅವರು ಮಾತನಾಡಿ, ರಾಜ್ಯ ರಸ್ತೆ ಸಾರಿಗೆ ನಿಲ್ದಾಣಗಳ ಶೌಚಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಚತಾ ಕೆಲಸಗಾರರು ಸೇವಾ ಅವಧಿಯಲ್ಲಿ ಸಮವಸ್ತ್ರಗಳನ್ನು ಧರಿಸಿರುವಂತೆ ಹಾಗೂ ಮೊಬೈಲ್‌ಗಳನ್ನು ಬಳಸದಂತೆ ನೋಡಿಕೊಳ್ಳಬೇಕು. ಅಂತೆಯೇ ದೂರು ಪೆಟ್ಟಿಗೆಯನ್ನು ಇರಿಸಬೇಕು. ಬಸ್ಸುಗಳ ಓಡಾಟದಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಸೊರಬ, ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ಬಸ್ ಗಳು ಸಕಾಲದಲ್ಲಿ ಸಂಚರಿಸುತ್ತಿಲ್ಲ ಎಂಬ ದೂರುಗಳು ವ್ಯಕ್ತವಾಗುತ್ತಿವೆ.

ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು, ಸಮಿತಿ ಸಭೆಗೆ ಅಧಿಕಾರಿಗಳು ತಪ್ಪದೆ ಹಾಜರಾಗುವಂತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಗೃಹಜ್ಯೋತಿ ಯೋಜನೆಯಡಿ ನೋಂದಾಯಿತ ಫಲಾನುಭವಿಗಳು ಮನೆ ಬಳಕೆಗೆ ಮಾತ್ರ ವಿದ್ಯುತ್ ಬಳಕೆ ಮಾಡಬೇಕು. ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವುದು ಕಂಡುಬಂದರೆ ಕೂಡಲೇ ಕ್ರಮಕೈಗೊಳ್ಳಬೇಕು ಎಂದ ಅವರು ವಿವಿಧ ಕಾರಣಗಳಿಂದಾಗಿ ಜಿಲ್ಲೆಯ 276ಜನರಿಗೆ ಗೃಹಲಕ್ಷ್ಮೀ ಸೌಲಭ್ಯ ದೊರೆಯುತ್ತಿಲ್ಲ.. ಸೌಲಭ್ಯ ವಂಚಿತ ಫಲಾನುಭವಿಗಳನ್ನು ಗುರುತಿಸಿ, ಸೌಲಭ್ಯವನ್ನು ಅರ್ಹರಿಗೆ ತಲುಪಿಸುವ ಕಾರ್ಯ ತುರ್ತಾಗಿ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.

ಅವೈಜ್ಞಾನಿಕ ಮಾನದಂಡವನ್ನು ಅನುಸರಿಸಿ ಪಡಿತರ ಚೀಟಿ ರದ್ದುಗೊಳಿಸುವುದು ತರವಲ್ಲ. ಪಡಿತರ ಚೀಟಿ ರದ್ದುಗೊಳಿಸಿರುವುದನ್ನು ಪುನರ್‌ಪರಿಶೀಲಿಸಿ, ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು. -ಅನ್ವರ್‌ಪಾಷಾ, ಗ್ಯಾರಂಟಿ ಸಮಿತಿ ಸದಸ್ಯರು.

ಗ್ಯಾರಂಟಿ ಯೋಜನೆಗಳ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಲು ತಾಲೂಕು ಮಟ್ಟದ ಸಮಿತಿಗಳಿಂದ ವರದಿ ಪಡೆದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಯೋಜನೆಯ ಅನುಷ್ಟಾನದಲ್ಲಿ ಇನ್ನಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾಧಿಕಾರಿಗಳು, ಶಿವಮೊಗ್ಗ.

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ, ತಾಲೂಕು ಅಧ್ಯಕ್ಷ ಮಧು, ಜಿಲ್ಲಾ ಉಪಾಧ್ಯಕ್ಷರಾದ ಬಸವರಾಜಪ್ಪ, ಶಿವಣ್ಣ, ಇಕ್ಕೇರಿ ರಮೇಶ್, ಹಾಗೂ ಜಿಲ್ಲಾ, ತಾಲೂಕು ಮಟ್ಟದ ಸದಸ್ಯರು, ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...