Shimoga News ವಿದ್ಯಾರ್ಥಿಗಳಿಗೆ ಗ್ರಾಮೀಣ ಪ್ರದೇಶದ ಅರಿವು ಆಗುವುದರ ಜತೆಯಲ್ಲಿ ಸೇವಾ ಮನೋಭಾವ ವೃದ್ಧಿಸುತ್ತದೆ. ಆತ್ಮವಿಶ್ವಾಸ ಹೆಚ್ಚಿಸುವಲ್ಲಿ ಎನ್ಎಸ್ಎಸ್ ಮಹತ್ತರ ಪಾತ್ರ ವಹಿಸುತ್ತದೆ ಎಂದು ಸರ್ ಎಂ.ವಿ. ವಿಜ್ಞಾನ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗದ ಪ್ರೊ. ವಸಂತಕುಮಾರ.ಬಿ. ಹೇಳಿದರು.
ಮಲೇಶಂಕರದಲ್ಲಿ ಆಯನೂರಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2ರ ವಿಶೇಷ ವಾರ್ಷಿಕ ಶಿಬಿರದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಗಳಿಸಲು ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮತ್ತು ಇತರ ಪರೀಕ್ಷೆಗಳನ್ನು ಎದುರಿಸಲು ಸಿದ್ಧತೆ ನಡೆಸಬೇಕು ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಮಕ್ಕಳಲ್ಲಿ ವಿಶೇಷ ಜ್ಞಾನ ವೃದ್ಧಿಸಲು ಎನ್ಎಸ್ಎಸ್ ತುಂಬಾ ಸಹಕಾರಿಯಾಗುತ್ತದೆ. ವ್ಯಕ್ತಿತ್ವ ವಿಕಸನಕ್ಕೆ ನೆರವಾಗುತ್ತದೆ. ವಿದ್ಯಾರ್ಥಿಗಳು ತಂತ್ರಜ್ಞಾನ ಯುಗದಲ್ಲಿ ಆರ್ಟಿಫಿಸಿಯಲ್ ಇಂಟಲಿಜೆನ್ಸ್ ಎಐ ಕಲಿತು ಸಾಧನೆ ಮಾಡಬೇಕು ಎಂದು ಹೇಳಿದರು.
Shimoga News ಎನ್ಎಸ್ಎಸ್ ಶಿಬಿರಗಳಿಂದ ಪ್ರತಿಭೆ ಅನಾವರಣಕ್ಕೂ ವೇದಿಕೆ ದೊರಕುತ್ತದೆ. ವಿದ್ಯಾರ್ಥಿಗಳ ನಡುವೆ ಪರಸ್ಪರ ಓಡನಾಟ ಹೆಚ್ಚುತ್ತದೆ. ಶಿಸ್ತಿನ ಜೀವನಶೈಲಿ ರೂಪಿಸಿಕೊಳ್ಳಲು ನೆರವಾಗುತ್ತದೆ ಎಂದು ತಿಳಿಸಿದರು.
ಪ್ರಾಂಶುಪಾಲ ಪ್ರೊ. ಬಿ.ಪಿ.ಮಹಾದೇವ್ ಮಾತನಾಡಿ, ಮಕ್ಕಳು ಶಿಬಿರದಲ್ಲಿ ಶಿಸ್ತು, ಸಂಸ್ಕಾರ ಜತೆಗೆ ಪರಿಸರ ಸ್ವಚ್ಛತೆ, ಆರೋಗ್ಯದ ಮಹತ್ವದ ಬಗ್ಗೆ ಅರಿತುಕೊಳ್ಳುತ್ತಾರೆ. ಗ್ರಾಮಸ್ಥರ ಸಹಕಾರದಿಂದ ಶಿಬಿರ ಯಶಸ್ವಿಯಾಗುತ್ತದೆ ಎಂದು ತಿಳಿಸಿದರು.
ಪ್ರಮುಖರಾದ ಎಂ.ಕೆ.ರಮೇಶ್, ಜಗದೀಶ್, ಶಿಲ್ಪಾ ಪಾಟೀಲ್, ಕೀರ್ತಿನಾಥ್, ಲೋಕೇಶಪ್ಪ, ಬಿಂದು ವಿಜಯಕುಮಾರ್, ಶ್ರೀಕಾಂತ್, ಆರ್.ಮನೋಹರ್ ಮತ್ತಿತರರು ಉಪಸ್ಥಿತರಿದ್ದರು.
