S.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಶ್ರೀ ಕೆ. ವೆಂಕಟೇಶ್ ಅವರನ್ನು ಭೇಟಿಯಾಗಿ, ಪಶುಸಂಗೋಪನಾ ಇಲಾಖೆ ಹಾಗೂ ವೈದ್ಯಕೀಯ ಸಂಸ್ಥೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಹತ್ವದ ಮನವಿ ಸಲ್ಲಿಸಿದರು.
ವಿಧಾನಸೌಧದಲ್ಲಿ ನಡೆದ ಸಮಿತಿ ಸಭೆಯ ಬಳಿಕ ಸಚಿವರನ್ನು ಭೇಟಿಯಾದ ಶಾಸಕರು, ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿರುವ ‘ಜಾನುವಾರುಗಳ ನಿಗೂಢ ಕಾಯಿಲೆಗಳ ಸಂಶೋಧನಾ ಕೇಂದ್ರ’ದ ಬಲವರ್ಧನೆಗಾಗಿ 10 ಕೋಟಿ ರೂಪಾಯಿಗಳ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಹಾಗೂ ಕೇಂದ್ರಕ್ಕೆ ಅಗತ್ಯವಿರುವ 16 ತಾಂತ್ರಿಕ ಸಿಬ್ಬಂದಿಗಳನ್ನು ತಕ್ಷಣವೇ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ಇಲಾಖೆಗೆ ಮಂಜೂರಾಗಿರುವ 2 ಎಕರೆ ಜಮೀನಿನಲ್ಲಿ ಆರ್ಐಡಿಎಫ್ (RIDF) ಯೋಜನೆಯಡಿ ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಹಾಗೂ ಚಿಕಿತ್ಸಾ ಸಂಕೀರ್ಣಕ್ಕೆ ಆಧುನಿಕ ಉಪಕರಣಗಳನ್ನು ಒದಗಿಸುವಂತೆ ಸಚಿವರಿಗೆ ಮನವಿ ಮಾಡಿದರು. ಶಿವಮೊಗ್ಗದ ಈ ಸಂಸ್ಥೆಗಳು ಜಿಲ್ಲೆಯ ರೈತರ ಮತ್ತು ಪಶುಪಾಲಕರ ಹಿತದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದು, ಇಲ್ಲಿನ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ಶಾಸಕರು ಈ ಸಂದರ್ಭದಲ್ಲಿ ತಿಳಿಸಿದರು.
S.N. Channabasappa ಶಾಸಕರ ಪ್ರಸ್ತಾವನೆಗಳನ್ನು ಆಲಿಸಿದ ಸಚಿವರು, ಈ ಕುರಿತು ಶೀಘ್ರವೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
