DVS College of Arts, Science and Commerce ಅಧ್ಯಾಪಕರು ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡುವಾಗ ಸ್ವತಃ ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳುವ ಅವಶ್ಯಕತೆ ಇದೆ ಎಂದು ಕುವೆಂಪು ವಿವಿ ನಿವೃತ್ತ ಇಂಗ್ಲೀಷ್ ಪ್ರಾಧ್ಯಾಪಕ ಪ್ರೊ. ರಾಜೇಂದ್ರ ಚೆನ್ನಿ ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಭಾಂಗಣದಲ್ಲಿ ಪದವಿ ಕಾಲೇಜುಗಳ ಅಧ್ಯಾಪಕರಿಗೆ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ವಿದ್ಯಾರ್ಥಿ ಕಲಿಕೆಯ ಮೌಲ್ಯ ನಿರ್ಣಯ ಮತ್ತು ಮೌಲ್ಯಮಾಪನ ತಂತ್ರಗಳು ವಿಷಯ ಕುರಿತು ಮಾತನಾಡಿದರು.
ವಿದ್ಯಾರ್ಥಿಗಳ ಕಲಿಕೆಯು ಒಂದೇ ರೀತಿಯಲ್ಲಿ ಇರದೆ ಪ್ರತಿಯೊಬ್ಬ ವಿದ್ಯಾರ್ಥಿಯ ಕಲಿಕೆಯ ಮಟ್ಟವು ವಿಭಿನ್ನವಾಗಿ ಇರುತ್ತದೆ. ಆ ವಿಭಿನ್ನತೆಯನ್ನು ಅರ್ಥ ಮಾಡಿಕೊಂಡು ಅದಕ್ಕೆ ತಕ್ಕಂತೆ ಅಧ್ಯಾಪಕರು ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡಬೇಕಾಗುತ್ತದೆ. ಇಂದಿನ ಆಧುನಿಕ ಯುಗದಲ್ಲಿ ಈ ಮೌಲ್ಯಮಾಪನ ಎಂಬುದು ಸಾಂಪ್ರದಾಯಿಕತೆಗಿಂತ ಭಿನ್ನವಾಗಿದ್ದು, ವಿದ್ಯಾರ್ಥಿಗಳಿಗೆ ತಮ್ಮ ಅಗತ್ಯಗಳು ಮತ್ತು ಅವಶ್ಯಕತೆಗಳಿಗೆ ಅನುಗುಣವಾಗಿ ಬೋಧನೆ ಮಾಡಬೇಕಾಗುತ್ತದೆ ಎಂದು ಸಲಹೆ ನೀಡಿದರು.
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ. ಎಚ್.ಕೇಶವ ಮಾತನಾಡಿ, ಪ್ರತಿಯೊಬ್ಬ ಅಧ್ಯಾಪಕನು ಸರಿಯಾಗಿ ತಯಾರಿ ನಡೆಸಿಕೊಂಡು ಅಧ್ಯಾಪನ ಮಾಡಿದಾಗ ಮಾತ್ರ ವಿದ್ಯಾರ್ಥಿಗಳಿಗೆ ಸಂಪೂರ್ಣ ಜ್ಞಾನ ವರ್ಗಾವಣೆ ಆಗುತ್ತದೆ ಎಂದು ಅಭಿಪ್ರಾಯಪಟ್ಟರು.
ದೇಶೀಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಬಸಪ್ಪಗೌಡ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡುವ ರೀತಿಯಲ್ಲಿ ಅಧ್ಯಾಪಕರು ಹೆಚ್ಚು ಹೆಚ್ಚು ಜ್ಞಾನವನ್ನು ಪಡೆದುಕೊಂಡು ಪಾಠ ಪ್ರವಚನಗಳನ್ನು ನೆರವೇರಿಸಬೇಕು. ಇಂದು ಮೊದಲು ಮೌಲ್ಯಮಾಪನ ಆಗಬೇಕಾಗಿರುವುದು ವಿದ್ಯಾರ್ಥಿಗಳದ್ದಲ್ಲ, ಅಧ್ಯಾಪಕರದ್ದು ಎಂದು ತಿಳಿಸಿದರು.
DVS College of Arts, Science and Commerce ವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಜಿ.ಮಧು, ಬೆಂಗಳೂರಿನ ಕ್ರೈಸ್ಟ್ ವಿವಿ ಸಹಾಯಕ ಪ್ರಾಧ್ಯಾಪಕ ಡಾ. ಪ್ರಮೋದ್ ಕುಮಾರ್, ಕಾರ್ಯಕ್ರಮ ಸಂಯೋಜಕ ಡಾ. ನವೀನ್.ವಿ, ಕಾಲೇಜಿನ ಐಕ್ಯೂಎಸಿ ಸಂಯೋಜಕ ಪ್ರೊ. ಎನ್.ಕುಮಾರಸ್ವಾಮಿ, ಸಹಾಯಕ ಪ್ರಾಧ್ಯಾಪಕಿ ಪಿ.ಅರ್ಪಿತಾ, ಡಯಾನ ಎ ಡಿಬೆರ್ಟಾ ಉಪಸ್ಥಿತರಿದ್ದರು.
