Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ನಿರಂತರವಾಗಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಫೆರೋಕಾಸ್ಟ್ ಸಭಾಂಗಣದಲಿ ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ವತಿಯಿಂದ ಜೆಸಿಐ ಶಿವಮೊಗ್ಗ ಸಹ್ಯಾದ್ರಿ, ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘ ಹಾಗೂ ಹರಪನಹಳ್ಳಿಯ ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರದಲ್ಲಿ ಮಾತನಾಡಿದರು.
ಇಂದಿನ ಯುಗದಲ್ಲಿ ಆಹಾರ ಪದ್ಧತಿ, ಜೀವನಶೈಲಿ ಬದಲಾಗಿದ್ದು, ಒತ್ತಡ, ಮಾಲಿನ್ಯ ವಾತಾವರಣದಿಂದ ಆರೋಗ್ಯ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಆರೋಗ್ಯ ಕಾಳಜಿ ವಹಿಸಬೇಕು. ಪ್ರಕೃತಿ ಚಿಕಿತ್ಸೆ ಬಗ್ಗೆ ಹಿಂದೂ ಸಮಾಜ ಹೆಚ್ಚಿನ ಆಸಕ್ತಿ ಹೊಂದುತ್ತಿದೆ ಎಂದು ತಿಳಿಸಿದರು.
ಜನನಿ ಸಮೂಹ ಸಂಸ್ಥೆಗಳ ಸಾರ್ವಜನಿಕ ಸಂಪರ್ಕ ಮುಖ್ಯಸ್ಥ ಉದಯಶಂಕರ ಭಟ್ ಮಾತನಾಡಿ, ಶರೀರಕ್ಕೆ ರೋಗಗಳು ಬಂದಾಗ ಅವುಗಳನ್ನು ಪರಿಹರಿಸುವ ಶಕ್ತಿ ಪಂಚಭೂತಗಳಲ್ಲಿದೆ ಎಂಬ ತತ್ವವನ್ನು ಆಧರಿಸಿರುವುದು ಪ್ರಕೃತಿ ಚಿಕಿತ್ಸೆ ಎಂದು ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿ.ಆರ್.ಧನಂಜಯ ಮಾತನಾಡಿ, ಪ್ರತಿ ದಿನದ ಆಹಾರ ಪದ್ಧತಿ ಹಾಗೂ ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಂಡರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು.
Chamber Of Commerce Shivamogga ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಯೋಗ, ಪ್ರಕೃತಿ ಚಿಕಿತ್ಸೆಯು ಇಂದಿನ ಕಾಲಘಟ್ಟದಲ್ಲಿ ತುಂಬಾ ಅಗತ್ಯವಾಗಿದ್ದು, ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಪ್ರಕೃತಿ ಚಿಕಿತ್ಸೆ ಅನುಸರಿಸಬೇಕು ಎಂದು ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಕಿಶೋರ್ ಕುಮಾರ್, ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಸಂತೋಷ್ ಕುಮಾರ್ ಬಿ.ಎನ್, ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ವಾಗೀಶ್ ಕೋಟಿ, ಜನನಿ ಆಸ್ಪತ್ರೆಯ ಡಾ. ಬಿ.ಜಯರಾಮ್, ಡಾ. ನಿಶ್ಚಿತ್, ಡಾ. ಸಹನಾ, ಪೂಜಾ ದೇವರಾಜ್, ಸಂದೀಪ್, ಅನಿಶ್, ಕೃಷ್ಣಮೂರ್ತಿ, ಮಧುಮಲಾ, ಉಮಾಮಣಿ, ಬಿಂದು ವಿಜಯಕುಮಾರ್, ಗಿರಿಜಾ ಧನಂಜಯ, ವೀಣಾ ಕಿಶೋರ್, ರೋಟರಿ, ಜೆಸಿಐ ಸದಸ್ಯರು ಇದ್ದರು.
