S. N. Channabasappa ಶಿವಮೊಗ್ಗ ನಗರದ 6 ಘೋಷಿತ ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲು ಇರುವ ತಾಂತ್ರಿಕ ಅಡೆತಡೆಗಳನ್ನು ತಕ್ಷಣ ನಿವಾರಿಸುವಂತೆ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ವಸತಿ ಸಚಿವರಿಗೆ ಒತ್ತಾಯಿಸಿದರು.
ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ಶಾಸಕರು ಈ ವಿಷಯದ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ ಸಭಾಧ್ಯಕ್ಷರ ಸೂಚನೆಯಂತೆ ಇಂದು ವಿಧಾನಸೌಧದಲ್ಲಿ ವಸತಿ ಸಚಿವ ಶ್ರೀ ಜಮೀರ್ ಅಹ್ಮದ್ ಖಾನ್ ಅವರ ನೇತೃತ್ವದಲ್ಲಿ ವಿಶೇಷ ಸಭೆ ನಡೆಯಿತು. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಖಾರಾಬು ಕಟ್ಟೆ, ಕೆರೆ ಅಂಗಳ ಹಾಗೂ ಸರ್ಕಾರಿ ಜಮೀನುಗಳಲ್ಲಿ ದಶಕಗಳಿಂದ ನೆಲೆಸಿರುವ ಕುಟುಂಬಗಳಿಗೆ ಕಾನೂನುಬದ್ಧ ಭದ್ರತೆ ಒದಗಿಸುವ ಕುರಿತು ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಯಿತು.
S. N. Channabasappa ಸಭೆಯಲ್ಲಿ ಉಪಸ್ಥಿತರಿದ್ದ ಶಿವಮೊಗ್ಗ ಜಿಲ್ಲಾಧಿಕಾರಿ ಶ್ರೀ ಪ್ರಭುಲಿಂಗ ಕವಲಿಕಟ್ಟಿ ಅವರು, ಜಮೀನು ಲಭ್ಯತೆ ಮತ್ತು ವರ್ಗಾವಣೆ ಪ್ರಕ್ರಿಯೆಯಲ್ಲಿರುವ ಕಾನೂನು ತೊಡಕುಗಳ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಆಶ್ರಯ ಯೋಜನೆಯಡಿ ಮನೆಗಳ ನಿರ್ಮಾಣ ಮತ್ತು ಹಕ್ಕುಪತ್ರ ವಿತರಣೆಗೆ ಆದ್ಯತೆ ನೀಡುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ವಸತಿ ಇಲಾಖೆಯ ರಾಜ್ಯ ಮಟ್ಟದ ಅಧಿಕಾರಿಗಳು ಹಾಗೂ ಕೊಳಗೇರಿ ಮಂಡಳಿಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಬಡವರಿಗೆ ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿರಬೇಕು ಎಂದು ಶಾಸಕರು ಈ ಸಂದರ್ಭದಲ್ಲಿ ತಿಳಿಸಿದರು.
