Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ ಶಿಕ್ಷಣಕ್ಕೆ ಕಂಪ್ಯೂಟರ್ ಅನುಕೂಲವಾಗಲಿದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಆದಿ ಜಾಂಬವ ರಾಜ್ಯ ಸಮಿತಿಯ ರಾಜ್ಯಾಧ್ಯಕ್ಷ ಎನ್. ಪ್ರಕಾಶ್ ಹೇಳಿದರು.
ತಾಲೂಕಿನ ಆನವಟ್ಟಿ ಹೋಬಳಿಯ ಗುಡ್ಡದ ಬೆಣ್ಣಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿವಮೊಗ್ಗದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಆದಿ ಜಾಂಬವ ರಾಜ್ಯ ಸಮಿತಿ ಸಹಯೋಗದೊಂದಿಗೆ ಕಂಪ್ಯೂಟರ್ ಮತ್ತು ಕ್ರೀಡಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಲು ಸಾಧ್ಯವಿದೆ. ಜೊತೆಗೆ ಆಧುನಿಕ ಯುಗದಲ್ಲಿ ಕಂಪ್ಯೂಟರ್ ಕಲಿಕೆ ಅತ್ಯಗತ್ಯ ಎನ್ನುವಂತಾಗಿದೆ. ಈ ನಿಟ್ಟಿನಲ್ಲಿ ಹಿಂದುಳಿದ ಪ್ರದೇಶಗಳ ಶಾಲೆಗಳನ್ನು ಗುರುತಿಸಿ ಕಂಪ್ಯೂಟರ್ಗಳನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ತಿಳಿಸಿದರು.
Shivamogga News ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ದಯಾನಂದ ಕಲ್ಲೇರ್ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನದ ಪರಿಚಯ ಮಾಡಿಕೊಡುವ ಉದ್ದೇಶದಿಂದ ಕಂಪ್ಯೂಟರ್ನ್ನು ಕೊಡುಗೆಯಾಗಿ ನೀಡಲಾಗುತ್ತಿರುವುದು ಸ್ವಾಗತಾರ್ಹ. ಉತ್ತಮ ಕಲಿಕಾ ವಾತಾವರಣವನ್ನು ಸರ್ಕಾರಿ ಶಾಲೆಗಳಲ್ಲಿ ಕಲ್ಪಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಸುಧಾರಣೆಯಾಗಿದ್ದು, ಜಾಗತಿಕ ಬದಲಾವಣೆಗೆ ಹೊಂದಿಕೊಳ್ಳಲು ಕಂಪ್ಯೂಟರ್ ಕಲಿಕೆ ಅಗತ್ಯವಾಗಿದೆ ಎಂದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸೋಮಪ್ಪ ಅಧ್ಯಕ್ಷತೆ ವಹಿಸಿದ್ದರು. ಬಾರಂಗಿ ಗ್ರಾಪಂ ಪಿಡಿಒ ರಮೇಶ್, ಡಾ.ಬಿ.ಆರ್. ಅಂಬೇಡ್ಕರ್ ಆದಿ ಜಾಂಬವ ತಾಲೂಕು ಸಮಿತಿ ಅಧ್ಯಕ್ಷೆ ಕೆಂಚಮ್ಮ ರಮೇಶ್, ಮುಖ್ಯ ಶಿಕ್ಷಕ ಪಿ. ಗುತ್ಯಪ್ಪ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಶಿವಮೊಗ್ಗ ವಿಶು ಕುಮಾರ್ ಸೇರಿದಂತೆ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕರು ಹಾಗೂ ಊರ ಗ್ರಾಮಸ್ಥರು ಉಪಸ್ಥಿತರಿದ್ದರು.
