MADHU BANGARAPPA ರಾಜ್ಯದ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಮಂತ್ರಿಗಳಾದ ಮಧುಬಂಗಾರಪ್ಪ ಅವರ ಬೆಂಗಳೂರಿನ ನಿವಾಸದಲ್ಲಿ “ಹಿಂದಿ ಹೇರಿಕೆ ವಿರೋಧಿ ಕರ್ನಾಟಕ ಒಕ್ಕೂಟ” ದವರೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಯಿತು.
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಅಗ್ರಸ್ಥಾನವಿರಬೇಕು ಮತ್ತು ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಮೇಲೆ ಅನ್ಯ ಭಾಷೆಯ ಹೇರಿಕೆ ಇರಬಾರದು ಎಂಬುದು ನಮ್ಮ ಸರ್ಕಾರದ ಸ್ಪಷ್ಟ ನಿಲುವಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
“ಪಾಸ್ ವಿಥೌಟ್ ಹಿಂದಿ” (Pass Without Hindi) ಶಾಲಾ ಹಂತದಲ್ಲಿ ಹಿಂದಿ ವಿಷಯದಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರಬಾರದು ಮತ್ತು ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗಬಾರದು ಎಂಬ ಕಾನೂನು ಜಾರಿಗೊಳಿಸುವ ಕುರಿತು ಒಕ್ಕೂಟವು ಒತ್ತಾಯಿಸಿ, ಸಲ್ಲಿಸಿರುವ ಮನವಿಯನ್ನು ಸಕಾರಾತ್ಮಕವಾಗಿ ಸ್ವೀಕರಿಸಲಾಗಿದ್ದು, ಈ ಕುರಿತು ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಶಿಕ್ಷಣ ಇಲಾಖೆಯ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಇಲಾಖೆಯ ಕ್ರಮದ ಬಗ್ಗೆ ಮಧು ಬಂಗಾರಪ್ಪ ಚರ್ಚೆಯಲ್ಲಿ ತಿಳಿಸಿದರು.
MADHU BANGARAPPA ಕನ್ನಡ ಪರ ಸಂಘಟನೆಗಳು ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕುವ ನಿರ್ಧಾರವನ್ನು ತಕ್ಷಣವೇ ಕೈಬಿಡಬೇಕು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಶಾಂತಿಯುತವಾಗಿ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದರು .ಇದಕ್ಕೆಚರ್ಚೆಯಲ್ಲಿ ಭಾಗವಹಿಸಿದ್ದ ಹೋರಾಟಗಾರರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದರು.
ನಮ್ಮ ನೆಲ, ನಮ್ಮ ಭಾಷೆ ಮತ್ತು ನಮ್ಮ ವಿದ್ಯಾರ್ಥಿಗಳ ಭವಿಷ್ಯ ಕಾಪಾಡಲು ಸರ್ಕಾರ ಬದ್ಧವಾಗಿದೆ. ಯಾವುದೇ ಕಾರಣಕ್ಕೂ ಅನ್ಯ ಭಾಷೆಯ ಹೇರಿಕೆಯನ್ನು ಸಹಿಸುವುದಿಲ್ಲ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು
ಈ ಸಂದರ್ಭದಲ್ಲಿ ಹಿರಿಯ ಕನ್ನಡ ಪರ ಹೋರಾಟಗಾರರಾದ ಶ್ರೀ ಸಾ.ರ ಗೋವಿಂದ್, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಧ್ಯಕ್ಷರಾದ ಶ್ರೀ ಶಿವರಾಮೇಗೌಡ, ಶ್ರೀ ರಾಧಾಕೃಷ್ಣ, ಶ್ರೀ ರಾಮಪ್ರಸಾದ್, ಶ್ರೀ ಪಾರ್ವತೀಶ್ ಸೇರಿದಂತೆ ಅನೇಕ ಪದಾಧಿಕಾರಿಗಳು ಹಾಜರಿದ್ದರು.
