Chamber of Commerece Shivamogga ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಸಂಚಾರ ಸೇವೆ ಮುಂದುವರಿಸುವಂತೆ ಸರ್ಕಾರದ ಮೇಲೆ ಒತ್ತಡ ತರಲು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಧ್ಯಕ್ಷ ಬಿ.ಗೋಪಿನಾಥ್ ಮತ್ತು ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಶಿವಮೊಗ್ಗ ಮತ್ತು ಬೆಂಗಳೂರು ವಿಮಾನ ಸೇವೆಗಳನ್ನು ಪ್ರಾರಂಭಿಸಿರುವುದು ಮಲೆನಾಡು ಪ್ರದೇಶಕ್ಕೆ ಅನುಕೂಲವಾಗಿದೆ. ಪ್ರಯಾಣಿಕರ ಸಂಖ್ಯೆಯು ಹೆಚ್ಚಿನ ಸಂಖ್ಯೆಯಲ್ಲಿದ್ದು, ಲಾಭದಾಯಕ ಮಾರ್ಗವಾಗಿ ನಡೆಯುತ್ತಿದೆ. ಆದರೂ ಪ್ರಸ್ತುತ ಇರುವ ವಿಮಾನ ಸಂಪರ್ಕ ಮತ್ತು ಹಾರಾಟಗಳ ಸಂಖ್ಯೆಗಳು ಕಡಿಮೆ ಇದ್ದು, ವೇಗವಾಗಿ ಬೆಳೆಯುತ್ತಿರುವ ಶಿವಮೊಗ್ಗದ ಕೈಗಾರಿಕೆ, ವ್ಯಾಪಾರ, ಶಿಕ್ಷಣ, ಆರೋಗ್ಯ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳ ಹೆಚ್ಚುತ್ತಿರುವ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಇಲ್ಲ. ಬೆಂಗಳೂರು ಮತ್ತು ಶಿವಮೊಗ್ಗ ಸಂಪರ್ಕವನ್ನು ಇನ್ನಷ್ಟು ಬಲಪಡಿಸಬೇಕು ಎಂದು ಬಿ.ಗೋಪಿನಾಥ್ ಮನವಿ ಮಾಡಿದರು.
ಕೈಗಾರಿಕೆಗಳು ಮತ್ತು ಉದ್ಯಮಿಗಳಿಗೆ ಹೊಸ ಹೂಡಿಕೆಗಳನ್ನು ಆಕರ್ಷಿಸಲು ವಿಮಾನ ಸಂಪರ್ಕ ನೆರವಾಗುತ್ತದೆ. ರಾಜ್ಯ ಸರ್ಕಾರದ ಮಹತ್ವದ ಐಟಿ ಬಿಯಾoಡ್ ಬೆಂಗಳೂರು ಯೋಜನೆಗೆ ಸಹಕಾರಿ ಆಗುತ್ತದೆ. ಪ್ರವಾಸೋದ್ಯಮ ಉತ್ತೇಜಿಸುತ್ತದೆ. ಕೃಷಿ ಉತ್ಪನ್ನಗಳನ್ನು ರಾಷ್ಟ್ರೀಯ ಮಾರುಕಟ್ಟೆಗೆ ತಲುಪಿಸಲು ಕೃಷಿ ಲಾಜಿಸ್ಟಿಕ್ಸ್ ಅನ್ನು ಸುಧಾರಿಸುತ್ತದೆ. ಇಂಡಿಗೋ, ಸ್ಟಾರ್ ಏರ್ ಮತ್ತು ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆಗಳೊಂದಿಗೆ ಸಂವಹನ ನಡೆಸಿ ಶಿವಮೊಗ್ಗದಿಂದ ಬೆಂಗಳೂರಿಗೆ ಹೆಚ್ಚಿನ ವಿಮಾನ ಸೇವೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಸರ್ಕಾರ ಈ ಸಮಸ್ಯೆಗೆ ಆದಷ್ಟು ಬೇಗ ಪರಿಹಾರ ಒದಗಿಸಬೇಕು. ಶಿವಮೊಗ್ಗ ಬೆಂಗಳೂರು ನಡುವೆ ವಿಮಾನ ಸಂಚಾರ ಸೇವೆ ಮುಂದುವರಿಸುವುದರಿಂದ ಮುಂದಿನ ದಿನಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣವು ಮಲೆನಾಡಿನ ಆರ್ಥಿಕ, ಪ್ರವಾಸೋದ್ಯಮ ಹಾಗೂ ಉದ್ಯೋಗಾವಕಾಶಗಳಿಗೆ ಶಕ್ತಿ ತುಂಬಿ ಜಿಲ್ಲೆಯ ವ್ಯಾಪಾರ ವಾಣಿಜ್ಯ ಮತ್ತು ಕೈಗಾರಿಕಾ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮಾತನಾಡಿ, ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸಿ ಶಿವಮೊಗ್ಗ ಬೆಂಗಳೂರು ವಿಮಾನಯಾನ ಸೇವೆಯನ್ನು ಮುಂದುವರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರ, ಇಂಡಿಗೋ ಮತ್ತು ಇತರ ವಿಮಾನಯಾನ ಸಂಸ್ಥೆಗಳ ಜೊತೆ ನಿರಂತರ ಸಂಪರ್ಕದಲ್ಲಿ ಇದ್ದು, ಸಂಚಾರ ಸೇವೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲು ಬಿಡುವುದಿಲ್ಲ ಎಂದರು.
Chamber of Commerece Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಎ.ಎಂ.ಸುರೇಶ್, ಸಹ ಕಾರ್ಯದರ್ಶಿ ಕೆ.ಎಸ್.ಸುಕುಮಾರ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ಗಣೇಶ ಎಂ.ಅಂಗಡಿ, ಕೆ.ಬಿ.ಶಿವಕುಮಾರ್, ಎಸ್.ಎಸ್.ಉದಯಕುಮಾರ್, ರವಿ ಪ್ರಕಾಶ್ ಜನ್ನಿ, ವಿನೋದ್ ಕುಮಾರ್, ಪ್ರದೀಪ್ ವಿ ಎಲಿ ಹಾಜರಿದ್ದರು.
