DC Shivamogga ಮುಂಬರುವ ಬಕ್ರೀದ್ ಹಬ್ಬವನ್ನು ಜಿಲ್ಲೆಯಾದ್ಯಂತ ಅತ್ಯಂತ ಶಾಂತಿ, ಸೌಹಾರ್ದತೆ ಮತ್ತು ಧಾರ್ಮಿಕ ಶ್ರದ್ಧಾಭಕ್ತಿಗಳಿಂದ ಆಚರಿಸೋಣವೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ಶನಿವಾರ ನಗರದ ಡಿಎಆರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಬಕ್ರೀದ್ ಹಬ್ಬ ಕುಎಇತಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡದಂತೆ ಸೌಹಾರ್ದಯುತವಾಗಿ ರಾಜ್ಯಕ್ಕೇ ಮಾದರಿಯಾಗಿ ಹಬ್ಬವನ್ನು ಆಚರಿಸೋಣ.
ಹಬ್ಬದ ವೇಳೆ ಸ್ವಚ್ಚತೆ ಕಾಪಾಡುವುದು ಮತ್ತು ಸುರಕ್ಷತೆ ಕುರಿತು ಈಗಾಗಲೇ ಎರಡು ಬಾರಿ ಸಭೆಯನ್ನು ಮಾಡಿ ಸಮಾಲೋಚನೆ ನಡೆಸಿ, ಅದೇ ರೀತಿ ಯೋಜನೆಗಳನ್ನು ರೂಪಿಸಿಕೊಂಡು
ಪೂರ್ವಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ಹಬ್ಬದ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದ್ದು ಹಬ್ಬದ ದಿನದಂದು ಯಾವುದೇ ರೀತಿಯ ಕಾನೂನುಬಾಹಿರ ಘಟನೆಗಳು ನಡೆದರೆ ಅದನ್ನು ನಮ್ಮ ಗಮನಕ್ಕೆ ತರಬೇಕು ಎಂದರು.
ಎಲ್ಲರನ್ನೂ ನಾವು ಸಮಾನವಾಗಿ ಕಾಣುತ್ತೇವೆ. ಯಾರೇ ತಪ್ಪು ಮಾಡಿದರೂ ಅವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮವನ್ನು ಕ್ಯೆಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸ್ವಚ್ಛತೆಯನ್ನು ನಿರಂತರವಾಗಿ ಮಾಡಲಾಗುತ್ತಿದೆ. ಹಬ್ಬದ ವೇಳೆ ಶೀಘ್ರವಾಗಿ ತ್ಯಾಜ್ಯವನ್ನು ವಿಲೇವಾರಿ ಮಾಡಲು ಪಾಲಿಕೆಯಿಂದ ಕ್ರಮ ಕೈಗೊಳ್ಳಲಾಗುತ್ತದೆ. ಒಂದು ವೇಳೆ ಮಳೆ ಬಂದರೆ ಅದಕ್ಕೂ ಸಹ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ ಮಾತನಾಡಿ, ಜಿಲ್ಲೆಯಲ್ಲಿ ಸೌಹಾರ್ದತೆಯನ್ನು ಮೆರೆದು ಹಬ್ಬಗಳನ್ನು ಆಚರಣೆ ಮಾಡಿಕೊಂಡು ಹೋಗಬೇಕು.
DC Shivamogga ಹಬ್ಬದ ನೆಪದಲ್ಲಿ ಜಿಲ್ಲೆಯ ಶಾಂತಿ ಕದಡಲು ಯತ್ನಿಸುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಏನೇ ಸಮಸ್ಯೆ ಬಂದರು ಮೊದಲು ಪೊಲೀಸರಿಗೆ ವಿಷಯ ತಿಳಿಸಬೇಕು. 112 ಸಂಖ್ಯೆಗೆ ಕರೆ ಮಾಡಿ ತಿಳಿಸಬೇಕು ಎಂದರು.
ವಿವಿಧ ಸಂಘಟನೆಗಳ ಮುಖಂಡರು ಸಲಹೆಗಳನ್ನು ನೀಡಿದ್ದೀರಿ. ಅದರಂತೆ ಎಲ್ಲ ರೀತಿಯ ಪೂರ್ವಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಸುರಕ್ಷಿತೆಗೆ ಅಗತ್ಯವಾದ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ.
ಚೆಕ್ ಪೋಸ್ಟ್ ನಿಗಾ : ಜಿಲ್ಲೆಯಲ್ಲಿ 30 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದ್ದು, ತೀವ್ರ ನಿಗಾವಣೆ ನಡೆಸಲಾಗುತ್ತಿದ್ದು,ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ ಅವರು ಬಕ್ರೀದ್ ಹಬ್ಬವನ್ನು ಸೌಹಾರ್ದತೆ ಹಾಗೂ ವಿಜೃಂಭಣೆಯಿಂದ ಆಚರಣೆ ಮಾಡೋಣ ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಹಿಂದೂ-ಮುಸ್ಲಿಂ ಧರ್ಮಗಳ ಮುಖಂಡರು ಮಾತನಾಡಿ, ಶಿವಮೊಗ್ಗದ ಸೌಹಾರ್ದ ಪರಂಪರೆಯನ್ನು ಎತ್ತಿಹಿಡಿಯಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವುದಾಗಿ ತಿಳಿಸಿದರು.
ಸಭೆಯಲ್ಲಿ ಎಎಸ್ ಪಿ ಕಾರಿಯಪ್ಪ, ಪಾಲಿಕೆ ಅಧಿಕಾರಿಗಳು, ಜಿಲ್ಲೆಯ ಮುಸ್ಲಿಂ ಮತ್ತು ಹಿಂದೂ ಧರ್ಮದ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.
DC Shivamogga ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬ ಆಚರಿಸೋಣ- ಪ್ರಭುಲಿಂಗ ಕವಳಿಕಟ್ಟಿ
Date:
