B.Y. Raghavendra ರಾಜ್ಯ ಕಾಂಗ್ರೆಸ್ ಸರ್ಕಾರದ ನಿರಂತರ ರೈತ ವಿರೋಧಿ ಧೋರಣೆಗಳನ್ನು ಖಂಡಿಸಿ ಹಾಗೂ ಶಿಕಾರಿಪುರ ತಾಲ್ಲೂಕಿನ ರೈತ ಬಾಂಧವರ ವಿವಿಧ ಪ್ರಮುಖ ಬೇಡಿಕೆಗಳನ್ನು ತಕ್ಷಣವೇ ಈಡೇರಿಸುವಂತೆ ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಶಿಕಾರಿಪುರದಲ್ಲಿ ಇತ್ತೀಚೆಗೆ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು.
ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಮಾನ್ಯ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಅಧಿಕೃತ ಮನವಿ ಪತ್ರವನ್ನು ಸಲ್ಲಿಸಲಾಯಿತು.
ರಾಜ್ಯ ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ರೈತಪರ ಬೇಡಿಕೆಗಳು ಹೀಗಿವೆ…
ಅತಿವೃಷ್ಟಿ ಪರಿಹಾರ ವಿತರಣೆ: ಕಳೆದ ತಿಂಗಳಿಂದ ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಯಿಂದಾಗಿ ತತ್ತರಿಸಿರುವ ನೊಂದ ರೈತ ಕುಟುಂಬಗಳಿಗೆ ರಾಜ್ಯ ಸರ್ಕಾರ ನೀಡಿದ್ದ ಭರವಸೆಯಂತೆ ತಕ್ಷಣವೇ ನಿಯಮಾವಳಿಗಳ ಪ್ರಕಾರ ಸೂಕ್ತ ಪರಿಹಾರ ಧನ ವಿತರಿಸಬೇಕು.
ಮಳೆ ಮಾಪನ ಕೇಂದ್ರಗಳ ದುರಸ್ತಿ ಮತ್ತು ಬೆಳೆ ವಿಮೆ: ತಾಲ್ಲೂಕಿನಲ್ಲಿರುವ 46 ಮಳೆ ಮಾಪನ ಕೇಂದ್ರಗಳಲ್ಲಿ 30ಕ್ಕೂ ಹೆಚ್ಚು ಕೇಂದ್ರಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೆಲಸ ಮಾಡುತ್ತಿಲ್ಲ. ಇದರಿಂದ ರೈತರಿಗೆ ಸರಿಯಾದ ಬೆಳೆ ವಿಮೆ ಜಾರಿಯಾಗುತ್ತಿಲ್ಲ ಹಾಗೂ ಕಳೆದ ವರ್ಷದ ನೂರಾರು ಕೋಟಿ ರೂ. ಬೆಳೆ ವಿಮೆ ಹಣ ಇನ್ನು ಬಂದಿಲ್ಲ. ಇದನ್ನು ಕೂಡಲೇ ಬಗೆಹರಿಸಬೇಕು.
ಮುಂಗಾರು ಸಿದ್ಧತೆ: ಮುಂಗಾರು ಹಂಗಾಮು ಪ್ರಾರಂಭವಾಗುತ್ತಿರುವುದರಿಂದ ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ, ಕೀಟನಾಶಕ ಹಾಗೂ ರಸಗೊಬ್ಬರಗಳನ್ನು ಯಾವುದೇ ಕೊರತೆಯಾಗದಂತೆ ಸಕಾಲದಲ್ಲಿ ಪೂರೈಸಬೇಕು.
ಕೃಷಿ ಉಪಕರಣಗಳ ಸಹಾಯಧನ: ನಿಂತುಹೋಗಿರುವ ಕೃಷಿ ಉಪಕರಣಗಳ ವಿತರಣೆಯನ್ನು ಬೇಡಿಕೆಗೆ ಅನುಗುಣವಾಗಿ ತಕ್ಷಣವೇ ಪುನರಾರಂಭಿಸಬೇಕು.
ಹಾಲಿನ ಪ್ರೋತ್ಸಾಹಧನ ಬಿಡುಗಡೆ: ಕ್ಷೀರೋದ್ಯಮವನ್ನೇ ನಂಬಿರುವ ಸಾವಿರಾರು ರೈತರಿಗೆ ಕಳೆದ ಸುಮಾರು 6 ತಿಂಗಳಿಂದ ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹಧನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು.
B.Y. Raghavendra ಸರ್ವೆ ಇಲಾಖೆ ಸುಧಾರಣೆ: ಸರ್ವೆ ಇಲಾಖೆಯಲ್ಲಿ ರೈತರಿಗೆ ಉಂಟಾಗುತ್ತಿರುವ ತೊಂದರೆಗಳನ್ನು ತಪ್ಪಿಸಿ, ರೈತರು ಪದೇ ಪದೇ ಕಚೇರಿಗಳಿಗೆ ಅಲೆಯುವುದನ್ನು ತಡೆಗಟ್ಟಬೇಕು.
ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಈ ಸರ್ಕಾರಕ್ಕೆ ಕಡಕ್ ಎಚ್ಚರಿಕೆ ನೀಡುವ ಈ ಹೋರಾಟದಲ್ಲಿ ರೈತ ಮೋರ್ಚಾದ ಪದಾಧಿಕಾರಿಗಳು, ಪ್ರಮುಖ ಜನಪ್ರತಿನಿಧಿಗಳು, ಮುಖಂಡರು ಹಾಗೂ ತಾಲ್ಲೂಕಿನ ಸಹಸ್ರಾರು ರೈತ ಬಾಂಧವರು ಪಾಲ್ಗೊಂಡು ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಒಮ್ಮತದ ಧ್ವನಿ ಎತ್ತಿದರು.
ರೈತರ ಹಿತರಕ್ಷಣೆಗೆ ನಮ್ಮ ಹೋರಾಟ ಸದಾ ನಿರಂತರ ಎಂದು ಬಿ.ವೈ.ರಾಘವೇಂದ್ರ ಹೇಳಿದರು.
