Gruhalakshmi Yojana ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳು ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಯಾವುದೇ ವಿಳಂಬವಿಲ್ಲದೆ ತಲುಪುವಂತೆ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಶಿವಮೊಗ್ಗ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಧು ಹೆಚ್ ಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಗೃಹಲಕ್ಷ್ಮಿ ಯೋಜನೆಯಡಿ ತಾಂತ್ರಿಕ ಕಾರಣಗಳಿಂದ ಅಥವಾ ಬ್ಯಾಂಕ್ ಖಾತೆ ಜೋಡಣೆ ಸಮಸ್ಯೆಯಿಂದ ಬಾಕಿ ಉಳಿದಿರುವ ಮಹಿಳೆಯರ ಖಾತೆಗಳಿಗೆ ಶೀಘ್ರವಾಗಿ ಹಣ ಜಮಾ ಆಗಲು ಕ್ರಮ ಕೈಗೊಳ್ಳಬೇಕು ಎಂದ ಅವರು ಬಾಕಿ ಇರುವ ಅರ್ಜಿಗಳನ್ನು ತಕ್ಷಣವೇ ಇತ್ಯರ್ಥಪಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತಾಲ್ಲೂಕಿನಲ್ಲಿ ಈವರೆಗೆ 108159 ಫಲಾನುಭವಿಗಳು ನೋಂದಣಿಯಾಗಿದ್ದು, 42 ಫಲಾನುಭವಿಗಳ ಎನ್ಪಿಸಿಐ ಬಾಕಿ ಇದೆ. 2044 ಐಟಿ/ಜಿಎಸ್ಜಿ ಫಲಾನುಭವಿಗಳಿದ್ದು 304 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮರಣ ಹೊಂದಿರುವ ಬಗ್ಗೆ 332 ಅರ್ಜಿ ಸ್ವೀಕರಿಸಲಾಗಿದೆ.
ಗೃಹಲಕ್ಷ್ಮಿ ಯೋಜನೆಯಲ್ಲಿ ತಂತ್ರಜ್ಞಾನ ಆಧಾರಿತ ಬದಲಾವಣೆಯೊಂದನ್ನು ತರಲಿದ್ದು ಫಲಾನುಭವಿಗಳು ತಮ್ಮ ಖಾತೆಯನ್ನು ಬಯೋಮೆಟ್ರಿಕ್ ಹಾಗೂ ಮೊಬೈಲ್ ಸಂಖ್ಯೆಯೊAದಿಗೆ ಮರು ನೋಂದಣಿ ಮಾಡಿಕೊಳ್ಳಬೇಕಿದೆ. ಈ ಕುರಿತು ರಾಜ್ಯ ಸರ್ಕಾರ ಶೀಘ್ರದಲ್ಲೇ ಆದೇಶ ಹೊರಡಿಸಲಿದೆ ಎಂದು ತಿಳಿಸಿದರು.
ಹಾಗೂ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಾಲ ನೀಡುವುದರ ಮಾಹಿತಿ ಸುಳ್ಳಾಗಿದ್ದು ಫಲಾನುಭವಿಗಳು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದರು.
Gruhalakshmi Yojana ತಾಲ್ಲೂಕಿನಲ್ಲಿ ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರದ 2013ರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ಮೇ ಮತ್ತು ಜೂನ್ ತಿಂಗಳ 5ಕೆಜಿ ಅಕ್ಕಿ ಬಂದಿದೆ. ಅದೇ ರಿತಿ ರಾಜ್ಯ ಸರ್ಕಾರ ನಿಡಬೇಕಿದ್ದ ಮೇ ಮತ್ತು ಜೂನ್ ತಿಂಗಳ ಅಕ್ಕಿಯು ಮುಂದಿನ ತಿಂಗಳು ನೀಡಲಾಗುವುದು.
ಬಿಪಿಎಲ್ ಕಾರ್ಡ್ ರದ್ದಾಗಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆಯಾಗಿರುವ 4260 ಕಾರ್ಡ್ಗಳಲ್ಲಿ 4057 ಕಾರ್ಡ್ಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗಿದೆ. 203 ಕಾರ್ಡ್ಗಳು ಬಾಕಿ ಉಳಿದಿದ್ದು ಇದರಲ್ಲಿ 114 ಜನರು ಆದಾಯ ತೆರಿಗೆ ಫೈಲ್ ಮಾಡಿ 45 ದಿನಗಳಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಕಾರ್ಡುದಾರರ ಕಾರ್ಡ್ಗಳನ್ನು ಬಿಪಿಎಲ್ ಕಾರ್ಡ್ಗಳಾಗಿ ಪರಿವರ್ತನೆ ಮಾಡಲಾಗಿದೆ ಮತ್ತು ಪಡಿತರದಾರರು ನಿಗದಿತ ದಾಖಲೆಗಳಾದ ರೂ.1,20,000 ದೊಳಗಿನ ಆದಾಯದ ಕುರಿತು ಐಟಿ ಫೈಲ್ ಮಾಡುವುದು ಮತ್ತು 10 ಚದರ ಅಡಿಯೊಳಗೆ ಮನೆ ಇದ್ದರೆ ಬಿಪಿಎಲ್ ಕಾರ್ಡ್ ಪರಿವರ್ತನೆಗೆ ಅರ್ಜಿಯನ್ನು ಸಲ್ಲಿಸಬಹುದು ಎಂದು ತಿಳಿಸಿದರು.
ತಾಲ್ಲೂಕಿನಲ್ಲಿ ಶೂನ್ಯ ವಿದ್ಯುತ್ ಬಿಲ್ ಪಡೆಯುತ್ತಿರುವ ಗ್ರಾಹಕರ ವಿವರಗಳನ್ನು ಪಡೆದ ಅಧ್ಯಕ್ಷರು, ತಾಂತ್ರಿಕ ದೋಷಗಳಿಂದ ವಂಚಿತರಾದ ಗ್ರಾಹಕರ ಸಮಸ್ಯೆಗಳನ್ನು ಮೆಸ್ಕಾಂ ಅಧಿಕಾರಿಗಳು ಸ್ಥಳದಲ್ಲೇ ಪರಿಹರಿಸಬೇಕು ಎಂದರು.
ಯುವನಿಧಿ ಮತ್ತು ಶಕ್ತಿ ಯೋಜನೆ: ಪದವಿ ಮುಗಿಸಿ ನಿರುದ್ಯೋಗಿಗಳಾಗಿರುವ ಯುವಕ-ಯುವತಿಯರಿಗೆ ಭತ್ಯೆ ತಲುಪುತ್ತಿರುವ ಬಗ್ಗೆ ಮಾಹಿತಿ ಪಡೆದ ಅವರು ತಾಲ್ಲೂಕಿನಲ್ಲಿ ಈವರೆಗೆ 3551 ಫಲಾನುಭವಿಗಳಿಗೆ ರೂ.9,32,14,500 ಹಣವನ್ನು ಜಮಾ ಮಾಡಲಾಗಿದೆ ಎಂದರು.
ತಾಲ್ಲೂಕಿನಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣದ ಯಶಸ್ವಿ ಅನುಷ್ಠಾನದ ಕುರಿತು ಸಾರಿಗೆ ಸಂಸ್ಥೆಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.
ಸಭೆಯಲ್ಲಿ ತಾಲ್ಲೂಕು ಗ್ಯಾರಂಟಿ ಸಮಿತಿ ಸದಸ್ಯರು, ತಾಲ್ಲೂಕು ಇಓ ಪರಮೇಶ್ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
