High Court ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ಕಳೆದ ಹಲವು ದಿನಗಳಿಂದ ಶಿವಮೊಗ್ಗ ವಕೀಲರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ, ಶಿವಮೊಗ್ಗ ಘಟಕದಿಂದ ಬೆಂಬಲ ನೀಡಲಾಗಿದೆ. ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು ಎಂಬುದು ನಮ್ಮ ಒತ್ತಾಯ ಕೂಡಾ ಆಗಿದೆ ಎಂದು ಘಟಕದ ಜಿಲ್ಲಾಧ್ಯಕ್ಷ ಡಿ.ಜಿ.ನಾಗರಾಜ ಇವರು ವಕೀಲರ ಸಂಘಕ್ಕೆ ಬೆಂಬಲ ಪತ್ರ ನೀಡಿ ತಿಳಿಸಿದ್ದಾರೆ.
ಅವರು ಇಂದು ತಮ್ಮ ಪತ್ರಕರ್ತರ ಸಂಘದ ಬೆಂಬಲಿಗರೊಂದಿಗೆ ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು.
ಮಲೆನಾಡು ಮತ್ತು ಮಧ್ಯ ಕರ್ನಾಟಕದ ಲಕ್ಷಾಂತರ ಜನರ ನ್ಯಾಯ ಪ್ರಾಪ್ತಿಯ ಹಕ್ಕಿಗಾಗಿ ಪಕ್ಷಾತೀತವಾಗಿ ಒಗ್ಗೂಡಲು ನಮ್ಮ ಪತ್ರಿಕಾ ಸಂಘದ ಎಲ್ಲಾ ಪದಾಧಿಕಾರಿಗಳ, ಸದಸ್ಯರುಗಳ ಬೆಂಬಲ ಇದೆ. ಮಂಗಳೂರು ಪೀಠಕ್ಕೆ ಶಿವಮೊಗ್ಗ ಸೇರಿಸುವ ಪ್ರಸ್ತಾವನೆಗೆ ನಮ್ಮ ತೀವ್ರ ವಿರೋಧ ಇದೆ ಎಂದು ತಿಳಿಸಿದರು.
ನಮ್ಮ ಮಲೆನಾಡು ಮತ್ತು ಸುತ್ತ-ಮುತ್ತಲಿನ ಜಿಲ್ಲೆಗಳ ಜನರ ಸ್ವಾಭಿಮಾನದ ಹಾಗೂ ನ್ಯಾಯದ ಸಾಕಾರಗೊಳಿಸಲು ಶಿವಮೊಗ್ಗದಲ್ಲಿ ಪೀಠ ಸ್ಥಾಪನೆಯಾಗುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದರು.
High Court ಕರ್ನಾಟಕದ ಹೃದಯಭಾಗವಾದ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಸಾರ್ವಜನಿಕರು, ರೈತರು, ಕಾರ್ಮಿಕರು ಹಾಗೂ ತಾಯಂದಿರು ಸಣ್ಣಪುಟ್ಟ ವ್ಯಾಜ್ಯಗಳಿಗೂ 300ಕ್ಕೂ ಹೆಚ್ಚು ಕಿಲೋಮೀಟರ್ ದೂರದ ಬೆಂಗಳೂರಿಗೆ ಅಲೆಯುವ ಪರಿಸ್ಥಿತಿ ಇದೆ. ಶಿವಮೊಗ್ಗವು ಕೇವಲ ಒಂದು ಜಿಲ್ಲೆಯಲ್ಲ, ಇದು ಚಿತ್ರದುರ್ಗ, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಬೆಸೆಯುವ ಮಧ್ಯಬಿಂದು. ಹಾಗಾಗಿ ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು ಎಂದು ಒತ್ತಾಯಿಸಿದರು.
ನ್ಯಾಯಯುತ ಬೇಡಿಕೆಗಳನ್ನು ಈಡೇರಿಕೆಗೆ ವಕೀಲರು ಕಳೆದ ಹಲವು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದು, ಶಿವಮೊಗ್ಗ ಕೇಂದ್ರವಾಗಿರಿಸಿ ಹೈಕೋರ್ಟ್ ಸಂಚಾರಿ ಪೀಠ ಬೇಕು ಎನ್ನುವ ಅವರ ಬೇಡಿಕೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ, ಶಿವಮೊಗ್ಗ ಘಟಕದ ಸಂಪೂರ್ಣ ಬೆಂಬಲವಿದ್ದು, ಕೊನೆಯವರೆಗೂ ನಾವು ವಕೀಲರ ಸಂಘದೊಂದಿಗೆ ಬೆಂಬಲವಾಗಿ ನಿಲ್ಲಲಿದ್ದೇವೆ ಎಂದು ಜಿಲ್ಲಾಧ್ಯಕ್ಷ ಡಿ.ಜಿ.ನಾಗರಾಜ ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ, ಶಿವಮೊಗ್ಗ ಘಟಕದ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಮೊದಲಾದವರು ಹಾಜರಿದ್ದರು.
