Breaking News ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕರಡಿಗ ಗ್ರಾಮದಲ್ಲಿ ರಸ್ತೆ ಜಾಗದ ವಿವಾದ ದಂಪತಿಯ ಮೇಲೆ ಮಾರಣಾಂತಿಕ ಹಲ್ಲೆಗೆ ಕಾರಣವಾದ ಘಟನೆ ಬೆಳಕಿಗೆ ಬಂದಿದೆ.
ಈ ಸಂಬಂಧ ಆರು ಮಂದಿ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
ಹಾದಿಗಲ್ಲು ಸಮೀಪದ ಕರಡಿಗ ಗ್ರಾಮದಲ್ಲಿ ಮೇ 27ರಂದು ಬೆಳಿಗ್ಗೆ ಸುಮಾರು 8.15ರ ವೇಳೆಗೆ ಈ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿ ರಸ್ತೆಗೆ ಬೇಲಿ ಹಾಕುವ ವಿಚಾರವಾಗಿ ಅಮೂಲ್ಯ ಅವರು ಪ್ರಶ್ನೆ ಮಾಡಿದ ಹಿನ್ನೆಲೆ ಗಲಾಟೆ ಆರಂಭವಾಗಿದೆ ಎಂದು ತಿಳಿದುಬಂದಿದೆ.
ಪೊಲೀಸ್ ದೂರಿನ ಪ್ರಕಾರ, ಇದೇ ವೇಳೆ ಹಳೆಯ ದ್ವೇಷವನ್ನು ಮುಂದಿಟ್ಟುಕೊಂಡು ಆರೋಪಿಗಳು ಏಕಾಏಕಿ ಜಗಳಕ್ಕೆ ಮುಂದಾಗಿದ್ದಾರೆ. ಆರೋಪಿಗಳಾದ ಮಂಜುನಾಥ್, ಚಂದ್ರಶೇಖರ, ಜಯಮ್ಮ, ಲೋಲಮ್ಮ, ಸೀಮಾ ಹಾಗೂ ಮತ್ತೋರ್ವ ಚಂದ್ರಶೇಖರ ಒಟ್ಟಾಗಿ ಅಮೂಲ್ಯ ಮತ್ತು ಅವರ ಪತಿ ಶಿವಶಂಕರ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
Breaking News ದಂಪತಿಯನ್ನು ಎಳೆದಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಅಮಾನವೀಯವಾಗಿ ಥಳಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಲ್ಲೆಯ ಪರಿಣಾಮ ಶಿವಶಂಕರ ಅವರು ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.
ಇದಲ್ಲದೆ, ಮುಂದಿನ ದಿನಗಳಲ್ಲಿ ಪ್ರಾಣ ತೆಗೆಯುವುದಾಗಿ ಆರೋಪಿಗಳು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಆರು ಆರೋಪಿಗಳ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ.
