ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದಲ್ಲಿ ಭೀಷ್ಮ ಆನೆಯ ಮಾವುತನಾಗಿ ಸೇವೆ ಸಲ್ಲಿಸುತ್ತಿದ್ದ ಸಿದ್ದಿಕ್ ಪಾಶ ಹೆಚ್ (39) ಅವರು ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದಿಕ್ ಪಾಶ ಅವರು ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.
ಆದರೆ ಮಾರ್ಗ ಮಧ್ಯೆ ಅವರ ರಕ್ತದೊತ್ತಡ (ಬಿಪಿ) ತೀವ್ರವಾಗಿ ಕುಸಿದಿದ್ದು, ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಸಿದ್ದಿಕ್ ಪಾಶ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಆಸ್ಪತ್ರೆಯಲ್ಲಿ ಮುಗಿಲು ಮುಟ್ಟಿದ್ದು, ದುಃಖದ ವಾತಾವರಣ ನಿರ್ಮಾಣವಾಗಿದೆ.
ಸಕ್ರೆಬೈಲು ಆನೆ ಬಿಡಾರದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ್ದ ಸಿದ್ದಿಕ್ ಪಾಶ ಅವರು ಭೀಷ್ಮ ಆನೆಯೊಂದಿಗೆ ವಿಶೇಷ ಬಾಂಧವ್ಯ ಹೊಂದಿದ್ದರು. ಅವರ ಅಗಲಿಕೆ ಆನೆ ಬಿಡಾರದ ಸಿಬ್ಬಂದಿ, ಸ್ನೇಹಿತರು ಹಾಗೂ ಆನೆ ಪ್ರಿಯರಿಗೆ ತೀವ್ರ ಆಘಾತ ಉಂಟುಮಾಡಿದೆ.
