ಶಿವಮೊಗ್ಗ ಜಿಲ್ಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಕುರಿತು ಮಹತ್ವದ ಜಾಗೃತಿ ಕಾರ್ಯಕ್ರಮವೊಂದು ಇಂದು ನಡೆಯಲಿದೆ. ಆಹಾರ ಮತ್ತು ಕುಡಿಯುವ ನೀರಿನಲ್ಲಿ ಕಂಡುಬರುವ ಸೀಸದ ಮಾಲಿನ್ಯ ಹಾಗೂ ಅದರ ದುಷ್ಪರಿಣಾಮಗಳ ಬಗ್ಗೆ ಶಿಕ್ಷಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ ಜಿಲ್ಲೆ, ಸುಬ್ಬಯ್ಯ ಸಂಶೋಧನಾ ಸಂಸ್ಥೆ ಹಾಗೂ ರೋಟರಿ ಕ್ಲಬ್ ಆಫ್ ಶಿವಮೊಗ್ಗ ಈಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದ ಮಹತ್ವದ ಜಾಗೃತಿ ಕಾರ್ಯಕ್ರಮ ಇಂದು, ಜೂನ್ 15 ರಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗ ನಗರದ ದುರ್ಗಿಗುಡಿಯ ಸರ್ಕಾರಿ ಶಾಲೆಯಲ್ಲಿ ನಡೆಯಲಿದೆ.
“ಆಹಾರ ಮತ್ತು ಕುಡಿಯುವ ನೀರಿನಲ್ಲಿ ಸೀಸದ ಮಾಲಿನ್ಯ, ಮಕ್ಕಳಲ್ಲಿ ಸೀಸದ ವಿಷಬಾಧೆಯ ದುಷ್ಪರಿಣಾಮಗಳು ಹಾಗೂ ತಡೆಗಟ್ಟುವ ಕ್ರಮಗಳು” ಎಂಬ ವಿಷಯದಡಿ ನಡೆಯಲಿರುವ ಈ ಕಾರ್ಯಾಗಾರದಲ್ಲಿ ಖ್ಯಾತ ಪರಿಸರ ವಿಜ್ಞಾನಿ ಮತ್ತು ಸಾರ್ವಜನಿಕ ಆರೋಗ್ಯ ತಜ್ಞರಾದ ಡಾ. ತುಪ್ಪಿಲ್ ವೆಂಕಟೇಶ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. “ಭಾರತದ ಲೀಡ್ ಮ್ಯಾನ್” ಎಂದೇ ಖ್ಯಾತರಾಗಿರುವ ಅವರು, ಮಕ್ಕಳ ಆರೋಗ್ಯದ ಮೇಲೆ ಸೀಸದ ಮಾಲಿನ್ಯ ಬೀರುವ ಪರಿಣಾಮಗಳ ಕುರಿತು ಸಮಗ್ರ ಮಾಹಿತಿ ನೀಡಲಿದ್ದಾರೆ.
ಕಾರ್ಯಾಗಾರದಲ್ಲಿ ಆಹಾರ ಮತ್ತು ಕುಡಿಯುವ ನೀರಿನಲ್ಲಿನ ಸೀಸದ ಮಾಲಿನ್ಯದ ಮೂಲಗಳು, ಮಕ್ಕಳಲ್ಲಿ ಕಾಣಿಸಿಕೊಳ್ಳುವ ವಿಷಬಾಧೆಯ ಲಕ್ಷಣಗಳು, ಅದರ ದುಷ್ಪರಿಣಾಮಗಳು, ತಡೆಗಟ್ಟುವ ಕ್ರಮಗಳು ಹಾಗೂ ಶಾಲೆ ಮತ್ತು ಮನೆಯ ಮಟ್ಟದಲ್ಲಿ ಕೈಗೊಳ್ಳಬಹುದಾದ ಮುನ್ನೆಚ್ಚರಿಕೆಗಳ ಕುರಿತು ವಿವರವಾಗಿ ಚರ್ಚಿಸಲಾಗುತ್ತದೆ. ಜೊತೆಗೆ ಮಕ್ಕಳ ಆರೋಗ್ಯ ಸಂರಕ್ಷಣೆಯಲ್ಲಿ ಶಿಕ್ಷಕರ ಪಾತ್ರದ ಮಹತ್ವವನ್ನೂ ವಿವರಿಸಲಾಗುತ್ತದೆ.
ಮಕ್ಕಳ ಬುದ್ಧಿವಿಕಾಸ, ಕಲಿಕಾ ಸಾಮರ್ಥ್ಯ, ನಡವಳಿಕೆ ಹಾಗೂ ಒಟ್ಟಾರೆ ಆರೋಗ್ಯದ ಮೇಲೆ ಸೀಸದ ಮಾಲಿನ್ಯವು ಗಂಭೀರ ಪರಿಣಾಮ ಬೀರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಎಲ್ಲಾ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.
