Sunday, August 2, 2026
Sunday, August 2, 2026

Karnataka Advanced Attendance Management System ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ : ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ

Date:

Karnataka Advanced Attendance Management System ರಾಜ್ಯ ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರವು ‘ಕರ್ತವ್ಯ’ (KAAMS – Karnataka Advanced Attendance Management System) ಎಂಬ ನೂತನ ಮುಂದುವರಿದ ಹಾಜರಾತಿ ನಿರ್ವಹಣಾ ತಂತ್ರಜ್ಞಾನವನ್ನು ಜಾರಿಗೆ ತಂದಿದೆ.

​ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಇಲಾಖಾ ಕಾರ್ಯದರ್ಶಿಗಳೊಂದಿಗೆ ನಡೆಸಿದ ಮೊದಲ ಸಭೆಯಲ್ಲೇ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ಕಚೇರಿ ವೇಳೆಯಲ್ಲಿ ಕಡ್ಡಾಯವಾಗಿ 100% ಹಾಜರಿರಬೇಕು ಮತ್ತು ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಖಡಕ್ ಸೂಚನೆ ನೀಡಿದ್ದರು.
ಈ ಹಿಂದೆ ಜಾರಿಯಲ್ಲಿದ್ದ ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಉದ್ಯೋಗಿಗಳು ಕೇವಲ ಡಿಜಿಟಲ್ ಸಹಿ ಮಾಡಿ ಕಚೇರಿಯಿಂದ ಗೈರಾಗುವ ಸಾಧ್ಯತೆಗಳಿದ್ದವು. ಈ ದೋಷವನ್ನು ನಿವಾರಿಸಲು, ಉದ್ಯೋಗಿಗಳ ಭೌತಿಕ ಉಪಸ್ಥಿತಿ ಮತ್ತು ಕಚೇರಿಯ ಭೌಗೋಳಿಕ ಸ್ಥಳವನ್ನು (Geographical Location) ನಿಖರವಾಗಿ ಪತ್ತೆಹಚ್ಚುವ ಈ ಹೊಸ ವ್ಯವಸ್ಥೆಯನ್ನು ರೂಪಿಸಲಾಗಿದೆ.

​ಸಂಪೂರ್ಣ “ಮೇಡ್-ಇನ್-ಕರ್ನಾಟಕ” ಆವಿಷ್ಕಾರ

​ಯಾವುದೇ ಬಾಹ್ಯ ಖಾಸಗಿ ತಂತ್ರಜ್ಞಾನ ಸಂಸ್ಥೆಗಳ ನೆರವಿಲ್ಲದೆ, ಸಂಪೂರ್ಣವಾಗಿ ಸರ್ಕಾರದ ಪರಿಸರ ವ್ಯವಸ್ಥೆಯಲ್ಲೇ “ಕರ್ತವ್ಯ” ಸಾಫ್ಟ್‌ವೇರ್ ಅನ್ನು ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ) ಉಸ್ತುವಾರಿಯಲ್ಲಿ, ಸೆಂಟರ್ ಫಾರ್ ಇ-ಗವರ್ನೆನ್ಸ್ (CeG) ಮತ್ತು ಕರ್ನಾಟಕ ಎಐ ಸೆಲ್ (Karnataka AI Cell) ಜಂಟಿಯಾಗಿ ಇದನ್ನು ಸಿದ್ಧಪಡಿಸಿವೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ವೆಂಡರ್ ವೆಚ್ಚ ಉಳಿತಾಯವಾಗಿದ್ದು, ದತ್ತಾಂಶ ಸುರಕ್ಷತೆ ಮತ್ತು ಸ್ವಾಯತ್ತತೆ ಹೆಚ್ಚಾಗಿದೆ. ಕರ್ನಾಟಕದ ಈ ಯಶಸ್ವಿ ಮಾದರಿಯನ್ನು ದೇಶದ ಇತರೆ ರಾಜ್ಯಗಳೂ ಅಳವಡಿಸಿಕೊಳ್ಳಬಹುದಾಗಿದೆ.

ತಂತ್ರಜ್ಞಾನದ ಪ್ರಮುಖ ವೈಶಿಷ್ಟ್ಯಗಳು :

​ಕೃತಕ ಬುದ್ಧಿಮತ್ತೆ (AI) ಆಧಾರಿತ ಮುಖ ಗುರುತಿಸುವಿಕೆ – ವಂಚನೆಯ ಹಾಜರಾತಿಯನ್ನು ತಡೆಯಲು ಲೈವ್‌ನೆಸ್ ಡಿಟೆಕ್ಷನ್ (Liveness Detection) ತಂತ್ರಜ್ಞಾನದೊಂದಿಗೆ ಎಐ ಫೇಶಿಯಲ್ ರೆಕಗ್ನಿಷನ್ ಬಳಸಲಾಗಿದೆ.

​ಜಿಯೋಫೆನ್ಸಿಂಗ್ (Geofencing) – ಜಿಐಎಸ್ (GIS) ತಂತ್ರಜ್ಞಾನದ ಮೂಲಕ ಉದ್ಯೋಗಿ ತನ್ನ ಕಚೇರಿಯ ನಿಗದಿತ ಪರಿಧಿಯೊಳಗೆ ಇದ್ದಾಗ ಮಾತ್ರ ಹಾಜರಾತಿ ದಾಖಲಿಸಲು ಸಾಧ್ಯವಾಗುತ್ತದೆ.

​ಸಂಯೋಜಿತ ಡೇಟಾಬೇಸ್ – ಇದನ್ನು ಆಧಾರ್ ಇ-ಕೆವೈಸಿ (e-KYC) ಮತ್ತು ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ (HRMS) ಯೊಂದಿಗೆ ಸಂಯೋಜಿಸಲಾಗಿದೆ.

ಮೊಬೈಲ್ ಆಪ್ ಮತ್ತು ರಜೆ ನಿರ್ವಹಣೆ – ಆಂಡ್ರಾಯ್ಡ್ ಮತ್ತು ಐಒಎಸ್ ಆಪ್‌ಗಳ ಮೂಲಕ ಹಾಜರಾತಿ, ರಜೆ ಮತ್ತು ಅಧಿಕೃತ ಹೊರಗಿನ ಕೆಲಸದ (OOD) ವಿವರಗಳನ್ನು ದಾಖಲಿಸುವ ಸೌಲಭ್ಯವಿದೆ.

​ಇಲಾಖೆಗಳಲ್ಲಿ ದಾಖಲೆ ವೇಗದ ಅನುಷ್ಠಾನ
​ಮುಖ್ಯಮಂತ್ರಿಗಳ ಕಟ್ಟುನಿಟ್ಟಿನ ಆದೇಶದ ಬೆನ್ನಲ್ಲೇ ಈ ತಂತ್ರಜ್ಞಾನವು ಇಲಾಖೆಗಳಲ್ಲಿ ಅತ್ಯಂತ ವೇಗವಾಗಿ ಅನುಷ್ಠಾನಗೊಳ್ಳುತ್ತಿದೆ.

ಕಳೆದ ವಾರ ಅಂದಾಜು 2,46,000 ರಷ್ಟಿದ್ದ ಒಟ್ಟು ನೋಂದಾಯಿತ ಉದ್ಯೋಗಿಗಳ ಸಂಖ್ಯೆ ಪ್ರಸ್ತುತ ವಾರದಲ್ಲಿ 3,01,034 ಕ್ಕೆ ಏರಿಕೆಯಾಗಿದೆ. ಇದು ಕೇವಲ ಒಂದೇ ವಾರದಲ್ಲಿ ಶೇಕಡಾ 25% ಕ್ಕಿಂತಲೂ ಹೆಚ್ಚು (55,000ಕ್ಕೂ ಅಧಿಕ ಹೊಸ ಸೇರ್ಪಡೆ) ಬೆಳವಣಿಗೆಯಾಗಿದೆ. ಇದೇ ಅವಧಿಯಲ್ಲಿ, ಆ್ಯಪ್ ಮೂಲಕ ಪ್ರತಿದಿನ ದಾಖಲಾಗುವ ದೈನಂದಿನ ಹಾಜರಾತಿ ಸಂಖ್ಯೆಯು ಸಹ 1,85,308 ರಿಂದ 2,32,612 ಕ್ಕೆ ಜಿಗಿದಿದ್ದು, ಸಕ್ರಿಯ ಬಳಕೆಯಲ್ಲಿ ಶೇಕಡಾ 25% ರಷ್ಟು ಭಾರಿ ಏರಿಕೆ ದಾಖಲಾಗಿದೆ.

ಪ್ರಸ್ತುತ 42 ಇಲಾಖೆಗಳ 4,78,522 ನೌಕರರನ್ನು ಈ ವ್ಯವಸ್ಥೆಗೆ ಒಳಪಡಿಸಲಾಗಿದ್ದು, ಈ ಪೈಕಿ 3.01 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಈಗಾಗಲೇ ನೋಂದಾಯಿಸಿಕೊಂಡಿದ್ದಾರೆ. ಕೇವಲ ಒಂದೇ ವಾರದಲ್ಲಿ ನೋಂದಣಿ ಪ್ರಕ್ರಿಯೆಯಲ್ಲಿ ಶೇಕಡಾ 25 ರಷ್ಟು ಅಭೂತಪೂರ್ವ ಪ್ರಗತಿ ಕಂಡುಬಂದಿದೆ.

ಶಾಲಾ ಶಿಕ್ಷಣ ಇಲಾಖೆ: ಒಟ್ಟು 1,76,055 ಉದ್ಯೋಗಿಗಳಲ್ಲಿ ಈಗಾಗಲೇ 1,68,252 ನೌಕರರು ನೋಂದಾಯಿಸಿಕೊಂಡಿದ್ದು, 1,41,800ಕ್ಕೂ ಹೆಚ್ಚು ದೈನಂದಿನ ಚೆಕ್-ಇನ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ: 66,969 ನೋಂದಣಿ ಹಾಗೂ 54,400ಕ್ಕೂ ಹೆಚ್ಚು ದೈನಂದಿನ ಹಾಜರಾತಿಯೊಂದಿಗೆ ಎರಡನೇ ಸ್ಥಾನದಲ್ಲಿದೆ.

​ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಗಳಲ್ಲಿ ಪ್ರಾಯೋಗಿಕವಾಗಿ ಯಶಸ್ವಿಯಾದ ನಂತರ, ಶಾಲಾ ಶಿಕ್ಷಣ ಇಲಾಖೆಯ ಸಿಬ್ಬಂದಿ ಇದನ್ನು ಸಕ್ರಿಯವಾಗಿ ಬಳಸುತ್ತಿದ್ದಾರೆ. ಇನ್ನುಳಿದ ಹಲವು ಇಲಾಖೆಗಳು ಈಗಾಗಲೇ ಶೇಕಡಾ 90 ಕ್ಕಿಂತ ಹೆಚ್ಚು ನೋಂದಣಿ ಮೈಲಿಗಲ್ಲನ್ನು ದಾಟಿವೆ.

​ಇತರ ಇಲಾಖೆಗಳು: ಪದವಿ ಪೂರ್ವ ಮಂಡಳಿ, ಆಯುಷ್ (AYUSH), ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮತ್ತು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಗಳು ಈಗಾಗಲೇ 90% ಕ್ಕಿಂತ ಹೆಚ್ಚು ನೋಂದಣಿ ಗುರಿಯನ್ನು ಯಶಸ್ವಿಯಾಗಿ ತಲುಪಿವೆ.

“ಮುಖ್ಯಮಂತ್ರಿಗಳು, ಮುಖ್ಯ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಮಟ್ಟದಲ್ಲಿ ಡಿಸಿ/ಸಿಇಒಗಳು ದಿನನಿತ್ಯ ಈ ವ್ಯವಸ್ಥೆಯ ಡ್ಯಾಶ್‌ಬೋರ್ಡ್ ಅನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಕಚೇರಿ ಅವಧಿಯಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ಸಿಗದಿರುವ ಬಗ್ಗೆ ನಾಗರಿಕರು ನೀಡುವ ಪ್ರತಿಕ್ರಿಯೆ (Feedback) ಈ ಸುಶಾಸನದ ಗುರಿಯನ್ನು ತಲುಪಲು ಪ್ರಮುಖ ಪಾತ್ರ ವಹಿಸಲಿದೆ.”

​ಸಾರ್ವಜನಿಕರಿಗೆ ಸಿಗಲಿದೆ ಉತ್ತಮ ಸೇವೆ:

​ಸಾರ್ವಜನಿಕ ಸೇವೆಗೆ ಹೊಸ ವೇಗ
​ಮೊಬೈಲ್ ಮೂಲಕವೇ ಹಾಜರಾತಿ ದಾಖಲಿಸುವ ಸೌಲಭ್ಯ ಇರುವುದರಿಂದ ಕಚೇರಿಗಳ ಮುಂಭಾಗದಲ್ಲಿ ಬಯೋಮೆಟ್ರಿಕ್‌ಗಾಗಿ ಸಾಲಿನಲ್ಲಿ ನಿಲ್ಲುವುದು ತಪ್ಪಿದೆ ಎಂದು ಸರ್ಕಾರಿ ನೌಕರರು ಸಂತಸ ವ್ಯಕ್ತಪಡಿಸಿದ್ದಾರೆ.

​”ಕರ್ತವ್ಯ ಆ್ಯಪ್ ಪ್ರತಿಯೊಬ್ಬ ಸರ್ಕಾರಿ ನೌಕರನೂ ತನ್ನ ಜವಾಬ್ದಾರಿಯನ್ನು ಹೆಮ್ಮೆ, ಶಿಸ್ತು ಮತ್ತು ನಿರ್ದಿಷ್ಟ ಉದ್ದೇಶದೊಂದಿಗೆ ನಿರ್ವಹಿಸಲು ಶಕ್ತಿ ತುಂಬುತ್ತಿದೆ”.

​ಅಂತಿಮವಾಗಿ, ಕಚೇರಿಗಳಲ್ಲಿ ಅಧಿಕಾರಿಗಳ ಭೌತಿಕ ಲಭ್ಯತೆ ಮತ್ತು ವಿಶ್ವಾಸಾರ್ಹತೆಯನ್ನು ಖಾತರಿಪಡಿಸುವ ಮೂಲಕ ಸಾರ್ವಜನಿಕರಿಗೆ ಸಿಗುವ ಸೇವೆಗಳು ಇನ್ನು ಮುಂದೆ ಹೆಚ್ಚು ಸುಲಭ ಹಾಗೂ ತಡೆರಹಿತವಾಗಲಿವೆ. ಈ ಮೂಲಕ ಕರ್ನಾಟಕವು ಡಿಜಿಟಲ್ ಆಡಳಿತ ಮತ್ತು ನಾಗರಿಕ ಕೇಂದ್ರಿತ ಸುಧಾರಣೆಯಲ್ಲಿ ದೇಶದಲ್ಲೇ ಮುಂಚೂಣಿ ರಾಜ್ಯವಾಗಿ ಹೊರಹೊಮ್ಮಿದೆ ಎಂದು
​ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...