ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಮಹಿಷಿ ಉತ್ತರಾಧಿ ಮಠದಲ್ಲಿ ಮತ್ತೊಮ್ಮೆ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನದ ಹಲಗಾರತಿಗಳು ನಾಪತ್ತೆಯಾಗಿರುವುದು ಭಕ್ತರಲ್ಲಿ ಆತಂಕ ಮೂಡಿಸಿದೆ.
ತುಂಗಾ ನದಿಯ ದಡದಲ್ಲಿರುವ ಮಹಿಷಿ ಉತ್ತರಾಧಿ ಮಠವು ಮಧ್ವ ಪರಂಪರೆಯ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿದೆ. ಪ್ರತಿದಿನ ನೂರಾರು ಭಕ್ತರು ಭೇಟಿ ನೀಡುವ ಈ ಮಠದಲ್ಲಿ ಇದೀಗ ಚಿನ್ನಾಭರಣ ಕಳವು ಪ್ರಕರಣ ಬೆಳಕಿಗೆ ಬಂದಿದೆ.
ಮಠದ ಮೂಲಗಳ ಪ್ರಕಾರ, ಸುಮಾರು 750 ಗ್ರಾಂ ತೂಕದ ಚಿನ್ನದ ಹಲಗಾರತಿಗಳು ನಾಪತ್ತೆಯಾಗಿವೆ. ಒಂದೊಂದು ಹಲಗಾರತಿ ಸುಮಾರು 50 ಗ್ರಾಂ ಚಿನ್ನದಿಂದ ನಿರ್ಮಿತವಾಗಿದ್ದು, ಒಟ್ಟು 15 ಹಲಗಾರತಿಗಳು ಕಾಣೆಯಾಗಿರುವುದಾಗಿ ತಿಳಿದುಬಂದಿದೆ.
ಪ್ರಾಥಮಿಕ ಅಂದಾಜಿನ ಪ್ರಕಾರ, ಕಳುವಾಗಿರುವ ಚಿನ್ನಾಭರಣದ ಮೌಲ್ಯ ಒಂದು ಕೋಟಿಗೂ ಅಧಿಕ ಎಂದು ಹೇಳಲಾಗುತ್ತಿದೆ. ಈ ಘಟನೆ ಮಠದ ಆಡಳಿತ ಮಂಡಳಿ ಹಾಗೂ ಭಕ್ತರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಮಹಿಷಿ ಉತ್ತರಾಧಿ ಮಠದಲ್ಲಿ ಚಿನ್ನದ ಹಲಗಾರತಿಗಳ ನಾಪತ್ತೆ ಪ್ರಕರಣ ಇದೀಗ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಭದ್ರತಾ ವ್ಯವಸ್ಥೆಯ ನಡುವೆಯೂ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹೇಗೆ ನಾಪತ್ತೆಯಾಯಿತು ಎಂಬುದರ ಕುರಿತು ತನಿಖೆ ನಡೆಯಬೇಕಿದೆ. ಈ ಪ್ರಕರಣದ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪೊಲೀಸರು ಪತ್ತೆಹಚ್ಚಬೇಕಿದೆ.
ಗಮನಾರ್ಹ ಸಂಗತಿಯೆಂದರೆ, ಇದೇ ಮಠದಲ್ಲಿ ಕಳೆದ ವರ್ಷ ಏಪ್ರಿಲ್ 5ರಂದು ದರೋಡೆ ಯತ್ನ ನಡೆದಿತ್ತು. ಮಠದಲ್ಲಿ ಸುಮಾರು 300 ಕೋಟಿ ರೂಪಾಯಿ ಹಣ ಸಂಗ್ರಹಿಸಲಾಗಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ 12 ರಿಂದ 15 ಮಂದಿಯ ತಂಡ ದರೋಡೆಗೆ ಯತ್ನಿಸಿತ್ತು.
ಆ ಸಂದರ್ಭದಲ್ಲಿ ನಗದು, ಲ್ಯಾಪ್ಟಾಪ್ ಹಾಗೂ ಮೊಬೈಲ್ ಸೇರಿದಂತೆ ಸುಮಾರು 1.16 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ದರೋಡೆಕೋರರು ಕೊಂಡೊಯ್ದಿದ್ದರು. ಬಳಿಕ ಪ್ರಕರಣದ ತನಿಖೆ ವೇಳೆ ಪ್ರಮುಖ ಆರೋಪಿಯನ್ನು ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು.
