ಶಿವಮೊಗ್ಗ “ನಗರದ ಉದ್ಯಾನವನಗಳು ಸಾರ್ವಜನಿಕರ ಮತ್ತು ಮಕ್ಕಳ ಆಹ್ಲಾದಕರ ಹಾಗೂ ಆರೋಗ್ಯಕರ ಜೀವನಶೈಲಿಗೆ ಪೂರಕವಾಗಿರಬೇಕು. ಪಾರ್ಕ್ಗಳಲ್ಲಿ ನಾಗರಿಕರ ಸುರಕ್ಷತೆಗೆ ಧಕ್ಕೆ ತರುವ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ಹಾಗೂ ಮೂಲಸೌಕರ್ಯಗಳ ಕೊರತೆಯನ್ನು ಸಹಿಸುವುದಿಲ್ಲ,” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 05ರ ಭುವನೇಶ್ವರಿ ಬಡಾವಣೆಗೆ ಇಂದು ಖುದ್ದಾಗಿ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿದ ಶಾಸಕರು, ಅಲ್ಲಿನ ಪ್ರಮುಖ ಪಾರ್ಕ್ನ ಭೌತಿಕ ಸ್ಥಿತಿಗತಿಗಳ ಪರಿಶೀಲನೆ ನಡೆಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳನ್ನು ಭೇಟಿಯಾದ ಶಾಸಕರು, ಪಾರ್ಕ್ ಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ಬಡಾವಣೆಯ ನಿವಾಸಿಗಳು ಪಾರ್ಕ್ನಲ್ಲಿ ಸಮರ್ಪಕವಾಗಿ ವಿದ್ಯುತ್ ದೀಪಗಳು ಉರಿಯದೆ ಇರುವುದು ಮತ್ತು ರಾತ್ರಿಯಾಗುತ್ತಿದ್ದಂತೆ ಪುಂಡುಪೋಕರ ಹಾವಳಿ ಹೆಚ್ಚಾಗುತ್ತಿರುವುದರಿಂದ ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರು ಓಡಾಡಲು ಭಯಪಡುವಂತಾಗಿದೆ ಎಂದು ಶಾಸಕರ ಗಮನಕ್ಕೆ ತಂದರು.
ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಶಾಸಕರು ಸ್ಥಳದಲ್ಲೇ ಇದ್ದ ಸಂಬಂಧಪಟ್ಟ ಇಲಾಖೆಯ ತಾಂತ್ರಿಕ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿ, “ಕೂಡಲೇ ಪಾರ್ಕ್ನಲ್ಲಿ ಬಾಕಿ ಇರುವ ವಿದ್ಯುತ್ ದೀಪಗಳ ನಿರ್ವಹಣಾ ಕೆಲಸಗಳನ್ನು ಮುಗಿಸಿ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು. ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ರಾತ್ರಿ ವೇಳೆ ಸೂಕ್ತ ಗಸ್ತು ತಿರುಗುವ ಮೂಲಕ ಪುಂಡುಪೋಕರ ಹಾವಳಿಗೆ ಶಾಶ್ವತ ಕಡಿವಾಣ ಹಾಕಬೇಕು,” ಎಂದು ಕ್ರಮ ಕೈಗೊಳ್ಳಲು ಸೂಚಿಸಿದರು.
ಈ ಪರಿಶೀಲನಾ ಭೇಟಿಯ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ಜ್ಞಾನೇಶ್ವರ್, ಶ್ರೀ ನಾಗರಾಜ್ ಸೇರಿದಂತೆ ಸ್ಥಳೀಯ ಪ್ರಮುಖ ಮುಖಂಡರು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
