ಶಿವಮೊಗ್ಗ ಜಿಲ್ಲೆಯ ಸಾಂಪ್ರದಾಯಿಕ ಕುಸ್ತಿ ಕ್ರೀಡೆಯ ಬೆಳವಣಿಗೆ ಹಾಗೂ ಮಿಳಘಟ್ಟ ಗ್ರಾಮದ ಬಡ ನಿವಾಸಿಗಳ ಹಕ್ಕುಪತ್ರ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರು ಭೇಟಿಯ ವೇಳೆ ಉಪಮುಖ್ಯಮಂತ್ರಿಗಳನ್ನು ಭೇಟಿಯಾದ ಶಾಸಕ ಚನ್ನಬಸಪ್ಪ ಅವರು ಶಿವಮೊಗ್ಗ ನಗರ ಮತ್ತು ತಾಲೂಕಿಗೆ ಸಂಬಂಧಿಸಿದ ಎರಡು ಪ್ರಮುಖ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಿ ಜ್ಞಾಪನಾ ಪತ್ರ ಸಲ್ಲಿಸಿದರು.
ಶಿವಮೊಗ್ಗ ಜಿಲ್ಲೆಯು ಕುಸ್ತಿ ಕ್ರೀಡೆಗೆ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದ್ದು, ಇಲ್ಲಿನ ಅನೇಕ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಈ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕುಸ್ತಿ ಕ್ರೀಡಾ ಶಾಲೆಯನ್ನು ಮುಂದುವರಿಸಲು ಅಗತ್ಯ ಅನುದಾನ ಹಾಗೂ ಮೂಲಸೌಕರ್ಯ ಒದಗಿಸಬೇಕೆಂದು ಶಾಸಕರು ಮನವಿ ಮಾಡಿದರು.
ಇದೇ ವೇಳೆ ಶಿವಮೊಗ್ಗ ತಾಲೂಕಿನ ಕಸಬಾ-01 ಹೋಬಳಿಯ ಮಿಳಘಟ್ಟ ಗ್ರಾಮದ ಸರ್ವೆ ನಂ. 92ರ ಸರ್ಕಾರಿ ಕರಾಬು ಗುಂಡು ತೋಪು ಜಾಗದಲ್ಲಿ ಹಲವು ದಶಕಗಳಿಂದ ವಾಸಿಸುತ್ತಿರುವ ನೂರಾರು ಬಡ ಕುಟುಂಬಗಳಿಗೆ ಇನ್ನೂ ಹಕ್ಕುಪತ್ರ ದೊರೆತಿಲ್ಲ ಎಂಬ ವಿಷಯವನ್ನು ಸಚಿವರ ಗಮನಕ್ಕೆ ತಂದರು. ಕಂದಾಯ ಇಲಾಖೆಯ ನಿಯಮಾವಳಿಗಳಡಿ ಈ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಅರ್ಹ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
