Monday, June 29, 2026
Monday, June 29, 2026

ಜಿಲ್ಲೆಯ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಕಾಯಕಲ್ಪ ಒದಗಿಸಲಿ- ಬಿ.ವೈ.ರಾಘವೇಂದ್ರ

Date:

ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೃಷಿಗೆ ಉತ್ತೇಜನ ಮತ್ತು ರೈತರಿಗೆ ಸಮರ್ಪಕ ನೀರಾವರಿ ಲಭ್ಯವಾಗುವ ನಿಟ್ಟಿನಲ್ಲಿ ಹಾಗೂ ಮಳೆಗಾಲಕ್ಕೂ ಮುನ್ನ ಜಿಲ್ಲೆಯ ಪ್ರಮುಖ ಕೆರೆಗಳಿಗೆ ಅಗತ್ಯ ಕಾಯಕಲ್ಪ ಒದಗಿಸುವಂತೆ ಕೋರಿ ಸಂಸದ ಬಿ.ವೈ.ರಾಘವೇಂದ್ರ ಅವರು ಇಂದು ಬೆಂಗಳೂರಿನಲ್ಲಿ ಜಲಸಂಪನ್ಮೂಲ ಸಚಿವರಾದ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಜಿಲ್ಲೆಯ ತುಂಗಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿ ಬರುವ ಕೆರೆಗಳ ಆಧುನೀಕರಣ ಯೋಜನೆಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಕ್ಷೇತ್ರದ ರೈತರ ಜೀವನಾಡಿಯಂತಿರುವ ಪ್ರಮುಖ ಹಾಯ್‌ಹೊಳೆ, ಬಾರೆಹಳ್ಳ (ಪುರದಾಳ್) ಮತ್ತು ಗೌಡನಕೆರೆಗಳ ಕೆರೆಗಳ ಕಾಲುವೆ ಆಧುನೀಕರಣ ಸೇರಿದಂತೆ ವಿವಿಧ ನೀರಾವರಿ ಯೋಜನೆಗಳಿಗೆ ಕಾಯಕಲ್ಪ ಒದಗಿಸಲು ಅಗತ್ಯ ಅನುದಾನವನ್ನು ತುರ್ತಾಗಿ ಬಿಡುಗಡೆಗೊಳಿಸಿ, ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಈ ಸಂದರ್ಭದಲ್ಲಿ ಅವರು ಸಚಿವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದ್ದಾರೆ.

ವಾರ್ಷಿಕ ದುರಸ್ತಿ ಇಲ್ಲದೆ ಮಣ್ಣಿನ ಕಾಲುವೆಗಳು ಹೂಳು ತುಂಬಿ ಹೋಗಿರುವುದರಿಂದ, ನೀರು ಕಾಲುವೆಯ ಕೊನೆಯ ಭಾಗದ ರೈತರಿಗೆ ತಲುಪುತ್ತಿಲ್ಲ. ಈ ಪ್ರಮುಖ ಮೂರು ಕೆರೆಗಳ ವ್ಯಾಪ್ತಿಯ ನಾಲಾ ಜಾಲದ ಅಭಿವೃದ್ಧಿ ಹಾಗೂ ಆಧುನೀಕರಣಕ್ಕಾಗಿ ಸುಮಾರು 80 ಕೋಟಿ ರೂ. ಮತ್ತು ಐತಿಹಾಸಿಕ ಪುಣ್ಯಕ್ಷೇತ್ರ ಕೂಡ್ಲಿ ಹಾಗೂ ಹೊಳೆಬೆನವಳ್ಳಿ ಗ್ರಾಮದ ಬಳಿ ಪ್ರವಾಹ ನಿಯಂತ್ರಣಕ್ಕಾಗಿ ತುಂಗಾ ನದಿಗೆ ತಡೆಗೋಡೆ ನಿರ್ಮಿಸಲು 20 ಕೋಟಿ ರೂ. ಸೇರಿದಂತೆ ಒಟ್ಟು ಸುಮಾರು 100 ಕೋಟಿ ರೂ. ಮೊತ್ತದ ಕಾಮಗಾರಿಗಳ ಆಡಳಿತಾತ್ಮಕ ಅನುಮೋದನೆಯ ಪ್ರಸ್ತಾವನೆಗೆ ತಕ್ಷಣವೇ ಅನುಮೋದನೆ ನೀಡಬೇಕೆಂದು ಬಿ.ವೈ.ರಾಘವೇಂದ್ರ ಜಲಸಂಪನ್ಮೂಲ ಸಚಿವರನ್ನು ಆಗ್ರಹಿಸಿದ್ದಾರೆ.

ಜಿಲ್ಲೆಯ ಏತ ನೀರಾವರಿ ಯೋಜನೆಗಳ ವಿದ್ಯುತ್ ಸಂಪರ್ಕ ಕಡಿತಕ್ಕೆ ಸಂಸದ ಬಿ.ವೈ.ರಾಘವೇಂದ್ರ ತೀವ್ರ ಆಕ್ಷೇಪ; ಬಾಕಿ ಬಿಲ್ ಪಾವತಿಗೆ ಅನುದಾನ ಬಿಡುಗಡೆ ಮಾಡಲು ಸಚಿವರಿಗೆ ಒತ್ತಾಯ: ಜಿಲ್ಲೆಯಲ್ಲಿ ನಿರೀಕ್ಷಿತ ಮಳೆಯಾಗದೆ ನೀರಿನ ಮಟ್ಟ ಕುಸಿದಿರುವ ಈ ಸಂದರ್ಭದಲ್ಲಿ, ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಕಾರ್ಯ ಸ್ಥಗಿತಗೊಳ್ಳದಂತೆ ತಡೆಯಲು ಮನವಿ ಸಲ್ಲಿಸಿರುವ ಸಂಸದ ಬಿ.ವೈ.ರಾಘವೇಂದ್ರ, ಕ್ಷೇತ್ರ ವ್ಯಾಪ್ತಿಯ ಸಣ್ಣ ಮತ್ತು ಬೃಹತ್ ಏತ ನೀರಾವರಿ ಯೋಜನೆಗಳ ವಿದ್ಯುತ್ ಬಿಲ್ ಬಾಕಿ ನೆಪದಲ್ಲಿ ಮೆಸ್ಕಾಂ ಇಲಾಖೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವುದನ್ನು ಸಚಿವರ ಗಮನಕ್ಕೆ ತಂದರು. ಆಡಳಿತಾತ್ಮಕ ಹಾಗೂ ಆರ್ಥಿಕ ಕಾರಣಗಳಿಂದ ಉಂಟಾಗಿರುವ ಸಮಸ್ಯೆಯ ಹೊರೆಯನ್ನು ರೈತರ ಮೇಲೆ ಹಾಕುವುದರಿಂದ ತೊಂದರೆಯಾಗುತ್ತಿದ್ದು, ಇದು ಯಾವುದೇ ಕಾರಣಕ್ಕೂ ನ್ಯಾಯಸಮ್ಮತವಲ್ಲ ಎಂದು ಹೇಳಿದ್ದಾರೆ.

ಶಿಕಾರಿಪುರದ ಉಡುಗಣಿ-ತಾಳಗುಂದ-ಹೊಸೂರು, ಕಸಬಾ ಮತ್ತು ಸನ್ಯಾಸಿಕೊಪ್ಪ ಯೋಜನೆಗಳು ಹಾಗೂ ಸೊರಬ ತಾಲೂಕಿನ ಮೂಡಿ, ಮೂಗೂರು ಮತ್ತು ಕಚವಿ ಏತ ನೀರಾವರಿ ಯೋಜನೆಗಳು ಸೇರಿದಂತೆ ಒಟ್ಟು 8 ಪ್ರಮುಖ ಯೋಜನೆಗಳ ಒಟ್ಟು ಸುಮಾರು 62.56 ಕೋಟಿ ರೂ. ಬಾಕಿ ವಿದ್ಯುತ್ ಬಿಲ್ ಪಾವತಿಸಲು ರಾಜ್ಯ ಸರ್ಕಾರ ತುರ್ತಾಗಿ ಅನುದಾನ ಬಿಡುಗಡೆ ಮಾಡಬೇಕು ಎಂದು ಬಿ.ವೈ.ರಾಘವೇಂದ್ರ ಆಗ್ರಹಿಸಿದರು. ಸಾರ್ವಜನಿಕ ಹಾಗೂ ರೈತರ ಹಿತದೃಷ್ಟಿಯಿಂದ ಅನುದಾನ ಬಿಡುಗಡೆಯಾಗುವವರೆಗೆ ಯಾವುದೇ ನೀರಾವರಿ ಯೋಜನೆಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸದಂತೆ ಮೆಸ್ಕಾಂ ಅಧಿಕಾರಿಗಳಿಗೆ ತಕ್ಷಣವೇ ಸೂಕ್ತ ನಿರ್ದೇಶನ ನೀಡಬೇಕೆಂದು ಜಲಸಂಪನ್ಮೂಲ ಸಚಿವರನ್ನು ಸಂಸದರು ವಿನಂತಿಸಿಕೊಂಡಿದ್ದಾರೆ.

ಇದೇ ಸಂದರ್ಭದಲ್ಲಿ ಸಂಸದ ರಾಘವೇಂದ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ಧಾಪುರ ಏತ ನೀರಾವರಿ ಯೋಜನೆ ತಡೆಹಿಡಿದಿರುವನ್ನು ತೆರವುಗೊಳಿಸಿ, ಕಾಮಗಾರಿ ಮುಂದುವರಿಸುವಂತೆಯೂ ಪ್ರತ್ಯೇಕವಾಗಿ ಸಚಿವರ ಗಮನ ಸೆಳೆದರು.

ಯೋಜನೆ ಜಾರಿಗೆ ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಆಡಳಿತಾತ್ಮಕ ಪ್ರಯತ್ನಗಳು: ಈ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಟ್ಟದಲ್ಲಿ ನಿರಂತರವಾಗಿ ನಡೆಸುತ್ತಾ ಪ್ರಯತ್ನಗಳನ್ನು ನಡೆಸಿಕೊಂಡೆ ಬಂದಿದ್ದಾರೆ. ಈ ಹಿಂದೆ 2024ರ ಅಕ್ಟೊಬರ್ ನಲ್ಲಿ ಕೇಂದ್ರದ ಜಲಶಕ್ತಿ ಸಚಿವ ವಿ.ಸೋಮಣ್ಣನವರಿಗೆ ಪತ್ರ ಬರೆದು ಈ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ಮತ್ತು ಅನುದಾನ ಬಿಡುಗಡೆ ಮಾಡಲು ಸಂಸದರು ಕೋರಿದ್ದರು. ಸಂಸದರ ಪ್ರಯತ್ನಗಳಿಗೆ ಸ್ಪಂದಿಸಿದ್ದ ಕೇಂದ್ರ ಸಚಿವರು ಜಲಶಕ್ತಿ ಇಲಾಖೆಯ ಜಂಟಿ ಆಯುಕ್ತರಿಗೆ ಸೂಕ್ತ ಕ್ರಮಕ್ಕಾಗಿ ನಿರ್ದೇಶಿಸಿದ್ದರು. ಕೇಂದ್ರ ಜಲಶಕ್ತಿ ಇಲಾಖೆಯ ನಿರ್ದೇಶನದ ಮೇರೆಗೆ ಕೇಂದ್ರ ಜಲ ಆಯೋಗದ (CWC) ಬೆಂಗಳೂರು ಪ್ರಾದೇಶಿಕ ಕಚೇರಿಯು 2024ರ ನವೆಂಬರ್ ನಲ್ಲಿ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಈ ಕುರಿತು ವರದಿ ಸಲ್ಲಿಸಲು ಸೂಚಿಸಿತ್ತು. ಸಂಸದರ ಈ ನಿರಂತರ ಪ್ರಯತ್ನಗಳ ಫಲವಾಗಿ ರಾಜ್ಯ ಜಲಸಂಪನ್ಮೂಲ ಇಲಾಖೆ ಕಳೆದ ವರ್ಷ ನಿಗಮಕ್ಕೆ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ನಿರ್ದೇಶನ ನೀಡಿತ್ತು. ಸಂಸದರ ಅವಿರತ ಪ್ರಯತ್ನಗಳಿಂದಾಗಿ ಪ್ರಸ್ತಾವನೆ ಅಂತಿಮ ಹಂತಕ್ಕೆ ಬಂದಿದ್ದು 100 ಕೋಟಿ ರೂ ಮಾನ್ಯ ಜಲಸಮನ್ಮೂಲ ಸಚಿವರ ಮಂಜೂರಾತಿ ದೊರೆತ ಕೂಡಲೇ ಕಾಮಗಾರಿ ಪ್ರಾರಂಭಗೊಳ್ಳಲಿದೆ.

ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು, ಶಿವಮೊಗ್ಗ ಜಿಲ್ಲೆಯ ರೈತರ ನೀರಾವರಿ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ. ಈ ಎಲ್ಲ ಕಾಮಗಾರಿಗಳ ಆಡಳಿತಾತ್ಮಕ ಅನುಮೋದನೆ ಪ್ರಸ್ತಾವನೆಯನ್ನು ಇಲಾಖೆಯ ಉನ್ನತ ಮಟ್ಟದಲ್ಲಿ ಪರಿಶೀಲಿಸಿ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು, ಅನುದಾನ ಬಿಡುಗಡೆಗೆ ಅಧಿಕಾರಿಗಳಿಗೆ ಆದಷ್ಟು ಬೇಗ ನಿರ್ದೇಶನ ನೀಡುವುದಾಗಿ ಸಚಿವರು ಸಂಸದರ ಕೋರಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಗರದ ಜಲಮೂಲವಾಗಿರುವ ಚಾನಲ್ ಗಳನ್ನು ಸ್ವಚ್ಛವಾಗಿಡುವುದು ಇಲಾಖೆಯ ಹೊಣೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ...

International Anti-Drug Day ಕಳೆದ ಆರು ತಿಂಗಳಲ್ಲಿ ಸು.₹ 25 ಲಕ್ಷ ಮೌಲ್ಯದ ಮಾದಕ ವಸ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ- ಬಿ.ನಿಖಿಲ್

International Anti-Drug Day ಶಿವಮೊಗ್ಗ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಗಾಂಜಾ ಸೇರಿದಂತೆ...

B.Y. Raghavendra ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಇಂದಿನ ಮತ್ತು ಮುಂದಿನ ಪೀಳಿಗೆಗೆ ಸದಾ ಆದರ್ಶಪ್ರಾಯ- ಬಿ.ವೈ.ರಾಘವೇಂದ್ರ

B.Y. Raghavendra ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ...

S.N. Channabasappa ಮಾಚೇನಹಳ್ಳಿ ಕೈಗಾರಿಕಾ ವಲಯದ ವಿದ್ಯುತ್ ಸಮಸ್ಯೆ ನಿವಾರಣೆ ಬಗ್ಗೆ ಶಾಸಕ ಚನ್ನಿ ಅವರಿಂದ ಮಹತ್ವದ ಸಭೆ

S.N. Channabasappa ಮಾಚೇನಹಳ್ಳಿ ಕೈಗಾರಿಕಾ ವಲಯದ ವಿದ್ಯುತ್ ಸಮಸ್ಯೆ ನಿವಾರಣೆಗೆ ‘ಕರ್ತವ್ಯ...