ಶಿವಮೊಗ್ಗ “ನಗರದ ಮೂಲಸೌಕರ್ಯ ಅಭಿವೃದ್ಧಿಯ ಜೊತೆಗೆ ಶಿವಮೊಗ್ಗ ನಗರವನ್ನು ಸಾಂಸ್ಕೃತಿಕವಾಗಿ ಅತ್ಯಂತ ಸುಂದರ ಉದ್ಯಾನ ನಗರಿಯನ್ನಾಗಿ ರೂಪಿಸುವುದು ನಮ್ಮ ಸಾಂಸ್ಕೃತಿಕ ನಗರಿಯ ಹಿರಿಮೆಯನ್ನು ಹೆಚ್ಚಿಸುವ ಮೊದಲ ಆದ್ಯತೆಯಾಗಿದೆ ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.
ಇಂದು ಬೆಳಿಗ್ಗೆ ಶಿವಮೊಗ್ಗ ನಗರದ ಪ್ರಮುಖ ಸಂಪರ್ಕ ರಸ್ತೆಯಾದ ಬಿ.ಹೆಚ್. ರಸ್ತೆಗೆ ಹೊಂದಿಕೊಂಡಿರುವ ಶ್ರೀ ಸರ್ ಎಂ. ವಿಶ್ವೇಶ್ವರಯ್ಯ ರಸ್ತೆಯಲ್ಲಿ, ಭಾರತ ರತ್ನ ಶ್ರೀ ಸರ್ ಎಂ. ವಿಶ್ವೇಶ್ವರಯ್ಯ ಅವರ ಪ್ರತಿಮೆಯ ಹಿಂಭಾಗದ ಆವರಣದಲ್ಲಿ ಶಾಸಕರ ವಿಶೇಷ ಅನುದಾನದಡಿಯಲ್ಲಿ ನಿರ್ಮಿಸಲಾಗಿರುವ ಸ್ಥಿರ ಕಲಾ ಚಿತ್ರಣದ ಉದ್ಘಾಟನೆಯನ್ನು ಶಾಸಕರು ಪುಷ್ಪಾರ್ಚನೆ ನೆರವೇರಿಸುವ ಮೂಲಕ ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಳಿಸಿದರು.
ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳ ಬದಿಗಳನ್ನು ಕಲಾತ್ಮಕವಾಗಿ ನವೀಕರಿಸುವ ಯೋಜನೆಯ ಭಾಗವಾಗಿ ಈ ಕಲಾ ಚಿತ್ರಣವನ್ನು ಸಿದ್ಧಪಡಿಸಲಾಗಿದೆ. ಇದು ಸಾರ್ವಜನಿಕರ ಗಮನ ಸೆಳೆಯುವ ಜೊತೆಗೆ ನಗರದ ಶಿಸ್ತು ಮತ್ತು ಅಂದವನ್ನು ಹೆಚ್ಚಿಸಲಿದೆ ಎಂದು ಶಾಸಕರು ಈ ಸಂದರ್ಭದಲ್ಲಿ ತಿಳಿಸಿದರು.
ಕಲಾಕೃತಿಯ ಸುತ್ತಮುತ್ತಲಿನ ಜಾಗದಲ್ಲಿ ನಿರಂತರ ಸ್ವಚ್ಛತೆ ಕಾಪಾಡಲು ಹಾಗೂ ರಾತ್ರಿಯ ಅವಧಿಯಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಶಾಸಕರು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಶ್ರೀ ಡಿಎಸ್ ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್, ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಕೆಎಸ್ ಈಶ್ವರಪ್ಪನವರು, ಶಿವಮೊಗ್ಗದ ಖ್ಯಾತ ಶಿಲ್ಪಿ ಶ್ರೀ ಜೀವನ್, ಪ್ರಮುಖರಾದ ಶ್ರೀ ಎಂಬಿ ಹರಿಕೃಷ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಜ್ಞಾನೇಶ್ವರ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮಂಜುನಾಥ್ ನವಲೆ, ಶ್ರೀ ದೀನ್ ದಯಾಳ್ ಸೇರಿದಂತೆ ಸರ್ ಎಂ ವಿಶ್ವೇಶ್ವರಯ್ಯ ಕೋ ಆಪರೇಟಿವ್ ಸೊಸೈಟಿಯ ಪದಾಧಿಕಾರಿಗಳು, ಚೇಂಬರ್ ಆಫ್ ಕಾಮರ್ಸ್ ನ ಪದಾಧಿಕಾರಿಗಳು, ಶಿವಮೊಗ್ಗ ಇಂಜಿನಿಯರ್ ಅಸೋಸಿಯೇಷನ್ ಪದಾಧಿಕಾರಿಗಳು, ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಸಂಘದ ಪದಾಧಿಕಾರಿಗಳು ಹಾಗೂ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.
