ಕುಟುಂಬದ ಕ್ಷುಲ್ಲಕ ಕಾರಣದಿಂದ ಮನನೊಂದ ಮಹಿಳೆಯೊಬ್ಬರು ನಗರದ ವಾದಿ-ಏ-ಹುದಾ ಸಮೀಪದ ಹೊಸ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಬಂದಿದ್ದ ವೇಳೆ, ಸಾರ್ವಜನಿಕರು ಸಮಯಪ್ರಜ್ಞೆ ಪ್ರದರ್ಶಿಸಿ ಅವರನ್ನು ರಕ್ಷಿಸಿದ ಘಟನೆ ಶುಕ್ರವಾರ ಸಂಜೆ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸೇತುವೆಯ ಮೇಲೆ ಮಹಿಳೆಯ ವರ್ತನೆ ಅನುಮಾನಾಸ್ಪದವಾಗಿ ಕಂಡ ಹಿನ್ನೆಲೆಯಲ್ಲಿ ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣ ಆಕೆಯೊಂದಿಗೆ ಮಾತುಕತೆ ನಡೆಸಿ ಆತ್ಮಹತ್ಯೆಯ ನಿರ್ಧಾರದಿಂದ ಹಿಂದೆ ಸರಿಯುವಂತೆ ಮನವೊಲಿಸಿದರು.
ಬಳಿಕ ಆಕೆಯ ಮನಸ್ಥಿತಿಯನ್ನು ಶಾಂತಗೊಳಿಸಿ, ಆತ್ಮಸ್ಥೈರ್ಯ ತುಂಬಿ ಸುರಕ್ಷಿತವಾಗಿ ಮನೆಗೆ ಕಳುಹಿಸಿದರು.
ಸಾರ್ವಜನಿಕರ ಮಾನವೀಯತೆ ಹಾಗೂ ಸಮಯೋಚಿತ ಮಧ್ಯಪ್ರವೇಶದಿಂದ ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿದ್ದು, ಸ್ಥಳೀಯರು ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.
