B.Y. Raghavendra ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಸಂಸದ ಬಿ.ವೈ. ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಸ್ತುತ ಸ್ಥಿತಿಗತಿ, ಕಾಮಗಾರಿ ವೇಗ ಹಾಗೂ ಎದುರಾಗಿರುವ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಪ್ರಾದೇಶಿಕ ಅಧಿಕಾರಿ (RO) ಶ್ರೀಧರ್, ಅಪರ ಜಿಲ್ಲಾಧಿಕಾರಿಗಳು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (CCF) ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (DFO) ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ–206 (ತುಮಕೂರು–ಶಿವಮೊಗ್ಗ–ಹೊನ್ನಾವರ) ಮಾರ್ಗದ ಭದ್ರಾವತಿ ಬೈಪಾಸ್ ಸೇರಿದಂತೆ ಪ್ರಮುಖ ಬೈಪಾಸ್ಗಳು, ಮೇಲ್ಸೇತುವೆಗಳು ಹಾಗೂ ರೈಲ್ವೆ ಮೇಲ್ಸೇತುವೆಗಳ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಲಾಯಿತು. ರಾಷ್ಟ್ರೀಯ ಹೆದ್ದಾರಿ–169 (ಶಿವಮೊಗ್ಗ–ಮಂಗಳೂರು) ವ್ಯಾಪ್ತಿಯ ಮೋಟೆಬೆನ್ನೂರು–ಶಿವಮೊಗ್ಗ ಚತುಷ್ಪಥ ರಸ್ತೆ ಸೇರಿದಂತೆ ವಿವಿಧ ಅಗಲೀಕರಣ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ರಾಷ್ಟ್ರೀಯ ಹೆದ್ದಾರಿ–766C (ಬೈಂದೂರು–ರಾಣೇಬೆನ್ನೂರು) ವ್ಯಾಪ್ತಿಯ ಶಿಕಾರಿಪುರ ಬೈಪಾಸ್ ಹಾಗೂ ಸಂಬಂಧಿತ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಭೌತಿಕ ಮತ್ತು ಆರ್ಥಿಕ ಪ್ರಗತಿಯನ್ನೂ ಸಭೆಯಲ್ಲಿ ಅವಲೋಕಿಸಲಾಯಿತು. ಇದೇ ವೇಳೆ ರಾಷ್ಟ್ರೀಯ ಹೆದ್ದಾರಿ–139ರ ಮಹಾತ್ಮ ಗಾಂಧಿ ರಸ್ತೆ ಹಾಗೂ ಭದ್ರಾವತಿ ಪಟ್ಟಣದ ರಸ್ತೆ ಸುಧಾರಣೆ, ಡಾಂಬರೀಕರಣ ಮತ್ತು ಪ್ರಮುಖ ಜಂಕ್ಷನ್ಗಳ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆ ನಡೆಯಿತು.
B.Y. Raghavendra ಸಭೆಯಲ್ಲಿ ಕಾಮಗಾರಿಗಳ ಗುಣಮಟ್ಟಕ್ಕೆ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳಬಾರದು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು. ಭೂಸ್ವಾಧೀನ ಪ್ರಕ್ರಿಯೆ ಹಾಗೂ ಅರಣ್ಯ ಇಲಾಖೆಯ ಅನುಮತಿಗಳಿಂದ ಕಾಮಗಾರಿಗಳಿಗೆ ವಿಳಂಬವಾಗದಂತೆ ಅಗತ್ಯ ಸಮನ್ವಯ ಸಾಧಿಸಲು ಜಿಲ್ಲಾಡಳಿತ ಹಾಗೂ ಸಂಬಂಧಿತ ಇಲಾಖೆಗೆ ನಿರ್ದೇಶನ ನೀಡಲಾಯಿತು. ಮಳೆಗಾಲದಲ್ಲಿ ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆಯೂ ಸೂಚಿಸಲಾಯಿತು.
ಶಿವಮೊಗ್ಗ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ರಸ್ತೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸಭೆಯಲ್ಲಿ ಒತ್ತಿ ಹೇಳಲಾಯಿತು.
