ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸಲು ಹಾಗೂ ನಾಯಕತ್ವ ಗುಣಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಶಾಲಾ ಚುನಾವಣೆ ಸಹಕಾರಿ ಎಂದು ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪ ಪ್ರಾಚಾರ್ಯ ಸಿ.ಕೆ.ಶ್ರೀಧರ್ ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವತಿಯಿಂದ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಶಾಲಾ ಚುನಾವಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮತದಾನದ ಮಹತ್ವದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಇಂತಹ ಪ್ರಾಯೋಗಿಕ ಚುನಾವಣೆ ಕಾರ್ಯಕ್ರಮಗಳು ನೆರವಾಗುತ್ತದೆ. ಬಾಲ್ಯದಲ್ಲಿಯೇ ಚುನಾವಣಾ ಪ್ರಕ್ರಿಯೆ, ನಾಮಪತ್ರ ಸಲ್ಲಿಕೆ ಮತ್ತು ಆಯ್ಕೆ ಪ್ರಕ್ರಿಯೆ ಬಗ್ಗೆ ಜ್ಞಾನ ದೊರಕುತ್ತದೆ. ಉತ್ತಮ ನಾಯಕನ ಆಯ್ಕೆಯು ಅತ್ಯಂತ ಮಹತ್ವಪೂರ್ಣ ಆಗಿರುತ್ತದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳಲ್ಲಿ ಜವಾಬ್ದಾರಿ, ಸಂವಹನ ಕೌಶಲ್ಯ, ನಿರ್ಧಾರ ತೆಗೆದುಕೊಳ್ಳುವ ಸಾಮಾರ್ಥ್ಯ ಮತ್ತು ನಾಯಕತ್ವದ ಗುಣಗಳನ್ನು ಪ್ರೋತ್ಸಾಹಿಸುವುದು ಪ್ರಮುಖ ಉದ್ದೇಶವಾಗಿದೆ. ಶಾಲಾಮಟ್ಟದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲು ಹಾಗೂ ಶಿಸ್ತಿನ ಮನೋಭಾವ ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಹೇಳಿದರು.
ದೇಶದ ಚುನಾವಣಾ ವ್ಯವಸ್ಥೆಯ ಬಗ್ಗೆ ಗೌರವ ಮತ್ತು ಸದೃಢ ಭಾರತ ನಿರ್ಮಾಣದಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡುತ್ತದೆ. ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಯಲ್ಲಿ ಸಮಾಜದ ಮಹತ್ತರ ಸಂಗತಿಗಳ ಬಗ್ಗೆ ಜ್ಞಾನ ಹೆಚ್ಚಾಗುತ್ತದೆ ಎಂದು ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಅಧ್ಯಕ್ಷ ಕೆ.ಬಸಪ್ಪ ಗೌಡ ಹಾಗೂ ಕಾರ್ಯದರ್ಶಿ ಎಸ್.ಪಿ.ದಿನೇಶ್ ಅವರು ವಿದ್ಯಾರ್ಥಿಗಳ ಶಾಲಾ ಚುನಾವಣಾ ಪ್ರಕ್ರಿಯೆಗೆ ಶುಭಕೋರಿದರು. ಎ ಮತ್ತು ಬಿ ತಂಡಗಳಾಗಿ ವಿದ್ಯಾರ್ಥಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸಲಾಯಿತು.
ದೇಶೀಯ ವಿದ್ಯಾಶಾಲಾ ಸಮಿತಿಯ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಎಸ್.ಕೇಶವಪ್ರಸಾದ್, ಆರ್.ಗಾಯಿತ್ರಿ, ಎನ್.ಎಸ್.ಜ್ಯೋತಿ, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.
