ದೇಶದ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ರಾಜಕೀಯ ಮಾಡುವುದನ್ನು ನಿಲ್ಲಿಸಿ, ವೈದ್ಯಕೀಯ ಸೇರಿದಂತೆ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ನೀಟ್ (ಓಇಇಖಿ) ಬದಲಾಗಿ ರಾಜ್ಯದ ಸಿಇಟಿ (ಅಇಖಿ) ವ್ಯವಸ್ಥೆಗೆ ಆದ್ಯತೆ ನೀಡಬೇಕು ಎಂದು ಕರುನಾಡ ಯುವಶಕ್ತಿ ಸಂಘಟನೆಯ ಜಿಲ್ಲಾಧ್ಯಕ್ಷ ಎಸ್.ಎನ್. ಮಿಲನ್ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಒಂದೇ ರಾಷ್ಟ್ರವ್ಯಾಪಿ ಪ್ರವೇಶ ಪರೀಕ್ಷೆಯಿಂದ ಗ್ರಾಮೀಣ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಲಭ್ಯವಿರುವ ಗುಣಮಟ್ಟದ ಕೋಚಿಂಗ್, ತರಬೇತಿ ಮತ್ತು ಆರ್ಥಿಕ ಸೌಲಭ್ಯಗಳು ಗ್ರಾಮೀಣ ವಿದ್ಯಾರ್ಥಿಗಳಿಗೆ ಸಮಾನವಾಗಿ ದೊರೆಯದ ಕಾರಣ ಪ್ರತಿಭಾವಂತ ವಿದ್ಯಾರ್ಥಿಗಳೂ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಹೇಳಿದರು.
ರಾಜ್ಯದ ಶಿಕ್ಷಣ ವ್ಯವಸ್ಥೆ ಹಾಗೂ ಸ್ಥಳೀಯ ವಿದ್ಯಾರ್ಥಿಗಳ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಸಿಇಟಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕು. ರಾಜ್ಯ ಮಟ್ಟದ ಪ್ರವೇಶ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಸಮಾನ ಅವಕಾಶ ದೊರೆಯುವುದರ ಜೊತೆಗೆ ಅವರ ಶೈಕ್ಷಣಿಕ ಹಿತಾಸಕ್ತಿಯೂ ಉತ್ತಮವಾಗಿ ರಕ್ಷಣೆ ಪಡೆಯಲಿದೆ ಎಂದು ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳ ಭವಿಷ್ಯವನ್ನು ರಾಜಕೀಯದ ಸಾಧನವನ್ನಾಗಿ ಬಳಸದೆ, ಅವರ ಉತ್ತಮ ಶಿಕ್ಷಣ ಮತ್ತು ಉಜ್ವಲ ಭವಿಷ್ಯಕ್ಕೆ ಪೂರಕವಾಗುವ ನೀತಿಗಳನ್ನು ಸರ್ಕಾರ ಜಾರಿಗೆ ತರಬೇಕು. ಶಿಕ್ಷಣ ಕ್ಷೇತ್ರದ ನಿರ್ಧಾರಗಳು ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನ ಮೇಲೆ ಪರಿಣಾಮ ಬೀರುವುದರಿಂದ ಅವುಗಳನ್ನು ಜವಾಬ್ದಾರಿಯುತವಾಗಿ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಶಿಕ್ಷಣ ವ್ಯವಸ್ಥೆಯಲ್ಲಿ ಸಮಾನ ಅವಕಾಶ ಮತ್ತು ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಬೇಕು. ಆರ್ಥಿಕವಾಗಿ ಹಿಂದುಳಿದ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿಶೇಷ ಬೆಂಬಲ ಯೋಜನೆಗಳನ್ನು ಜಾರಿಗೆ ತರಬೇಕು. ಎಲ್ಲ ವಿದ್ಯಾರ್ಥಿಗಳಿಗೆ ಸಮಾನ ಅವಕಾಶ ಕಲ್ಪಿಸಿದಾಗ ಮಾತ್ರ ನಿಜವಾದ ಪ್ರತಿಭೆಗೆ ನ್ಯಾಯ ದೊರೆಯುತ್ತದೆ ಎಂದು ಹೇಳಿದರು.
ನೀಟ್ ಬದಲಾಗಿ ಸಿಇಟಿ ವ್ಯವಸ್ಥೆಯನ್ನು ಜಾರಿಗೆ ತಂದು ರಾಜ್ಯದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯನ್ನು ಕಾಪಾಡುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ಕರುನಾಡ ಯುವಶಕ್ತಿ ಸಂಘಟನೆ ಒತ್ತಾಯಿಸಿದೆ.
