ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ, ಶಿವಮೊಗ್ಗ ಹಾಗೂ ಮಲೆನಾಡು ಭಾಗದ ರೈತರ ಹಿತಕ್ಕೆ ಸಂಬಂಧಿಸಿದ ಎರಡು ಪ್ರಮುಖ ಕೃಷಿ ಪ್ರಸ್ತಾವನೆಗಳ ಕುರಿತು ಮನವಿ ಸಲ್ಲಿಸಿ ಚರ್ಚೆ ನಡೆಸಿದರು.
ಸಾಗರದಲ್ಲಿ ಅಡಿಕೆ ಮತ್ತು ಸಾಂಬಾರು ಅಭಿವೃದ್ಧಿ ನಿರ್ದೇಶನಾಲಯದ (DASD) ಉಪಕೇಂದ್ರವನ್ನು ಸ್ಥಾಪಿಸುವಂತೆ ಅವರು ಮನವಿ ಮಾಡಿದರು. ಇದರಿಂದ ಅಡಿಕೆ ಬೆಳೆಗಾರರಿಗೆ ತಾಂತ್ರಿಕ ಮಾರ್ಗದರ್ಶನ, ರೋಗ ನಿರ್ವಹಣೆ ಹಾಗೂ ಮೌಲ್ಯವರ್ಧನೆಗೆ ಅಗತ್ಯ ಬೆಂಬಲ ದೊರೆಯಲಿದೆ ಎಂದು ವಿವರಿಸಿದರು.
ಇದೇ ವೇಳೆ, ಶಿವಮೊಗ್ಗದಲ್ಲಿ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಅಧೀನದ ಭಾರತೀಯ ಮೆಕ್ಕೆಜೋಳ ಸಂಶೋಧನಾ ಸಂಸ್ಥೆಯ (ICAR–IIMR) ಪ್ರಾದೇಶಿಕ ಮೆಕ್ಕೆಜೋಳ ಸಂಶೋಧನಾ ಕೇಂದ್ರವನ್ನು ಶೀಘ್ರ ಆರಂಭಿಸುವಂತೆ ಕೋರಿದರು. ಈ ಕೇಂದ್ರದಿಂದ ಗುಣಮಟ್ಟದ ಸಂಶೋಧನೆ, ಸುಧಾರಿತ ತಳಿಗಳ ಅಭಿವೃದ್ಧಿ ಹಾಗೂ ರೈತರಿಗೆ ವೈಜ್ಞಾನಿಕ ನೆರವು ದೊರೆಯಲಿದೆ ಎಂದು ತಿಳಿಸಿದರು.
ಈ ಎರಡೂ ಪ್ರಸ್ತಾವನೆಗಳನ್ನು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಕಾರಾತ್ಮಕವಾಗಿ ಪರಿಗಣಿಸಿದ್ದು, ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸಾಂಬಾರ ಮಂಡಳಿಯ ಸದಸ್ಯ ಪ್ರಸನ್ನ ಕೆರೆಕೈ ಉಪಸ್ಥಿತರಿದ್ದರು.
