ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರು ತಮ್ಮ ಕಚೇರಿಯಲ್ಲಿ ತುಂಗ ಏತ ನೀರಾವರಿ ಯೋಜನೆ ಹಾಗೂ ಹೊಸಹಳ್ಳಿ ಏತ ನೀರಾವರಿ ಯೋಜನೆಯ ವ್ಯಾಪ್ತಿಗೆ ಒಳಪಡುವ ಕೆರೆಗಳಿಗೆ ನೀರು ತುಂಬಿಸುವ ಕುರಿತು ನೀರಾವರಿ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.
ಸಭೆಯಲ್ಲಿ ಹಾರನಹಳ್ಳಿ ಹಾಗೂ ಕುಂಸಿ ಭಾಗದ ರೈತರು ಉಪಸ್ಥಿತರಿದ್ದು, ಕೆರೆಗಳಿಗೆ ಸಮರ್ಪಕವಾಗಿ ನೀರು ಹರಿಸದಿರುವುದು, ನೀರಿನ ಹಂಚಿಕೆಯಲ್ಲಿ ಉಂಟಾಗಿರುವ ಸಮಸ್ಯೆಗಳು ಹಾಗೂ ಮುಂಬರುವ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರಿನ ಲಭ್ಯತೆ ಕುರಿತು ತಮ್ಮ ಅಹವಾಲುಗಳನ್ನು ಶಾಸಕರ ಗಮನಕ್ಕೆ ತಂದರು.
ರೈತರ ಅಹವಾಲುಗಳನ್ನು ಆಲಿಸಿದ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರು, ತುಂಗ ಹಾಗೂ ಹೊಸಹಳ್ಳಿ ಏತ ನೀರಾವರಿ ಯೋಜನೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಕೆರೆಗಳಿಗೂ ಯಾವುದೇ ತಾರತಮ್ಯವಿಲ್ಲದೆ ನೀರು ತುಂಬಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ರೈತರ ಹಿತಾಸಕ್ತಿಗೆ ಆದ್ಯತೆ ನೀಡುವ ಮೂಲಕ ಯೋಜನೆಯ ಉದ್ದೇಶ ಸಂಪೂರ್ಣವಾಗಿ ಈಡೇರುವಂತೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ನೀರಿನ ಹರಿವು, ಕೆರೆಗಳ ಭರ್ತಿ ಪ್ರಗತಿ ಹಾಗೂ ತಾಂತ್ರಿಕ ಅಡಚಣೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಅಗತ್ಯವಿರುವ ಎಲ್ಲ ಕ್ರಮಗಳನ್ನು ತ್ವರಿತವಾಗಿ ಕೈಗೊಂಡು ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದರು. ನೀರಾವರಿ ವ್ಯವಸ್ಥೆಯಲ್ಲಿ ಸಮನ್ವಯ ಕಾಪಾಡಿಕೊಂಡು ಪ್ರತಿಯೊಂದು ಕೆರೆಯೂ ಭರ್ತಿಯಾಗುವಂತೆ ಕಾರ್ಯಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ನೀರಾವರಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ಹಾರನಹಳ್ಳಿ ಮತ್ತು ಕುಂಸಿ ಭಾಗದ ರೈತರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
